ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮಹಿಳೆಯ ಮೇಲೆ ಹಲ್ಲೆ ನಡೆಸಿರುವದರ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆ ದಲಿತ ಸಮುದಾಯಕ್ಕೆ ಸೇರಿದವರು ಎನ್ನಲಾಗಿದ್ದು, ಹಲ್ಲೆ ನಡೆಸಿದಾತ ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯೊಂದರ ವೈದ್ಯರ ವಾಹನ ಚಾಲಕ, ಮೇಲ್ಜಾತಿಗೆ ಸೇರಿದವನು ಎಂದು ತಿಳಿದುಬಂದಿದೆ. ಕ್ರಮ ಕೈಗೊಳ್ಳದ ಪೊಲೀಸರ ಕಾರ್ಯವೈಖರಿ ಪ್ರಶ್ನಿಸಿ, ಪ್ರತಿಭಟಿಸಿದ ಮಹಿಳೆ, ಕುಟುಂಬಸ್ಥರು ಹಾಗೂ ದಲಿತ ಮುಖಂಡರ ಮೇಲೆಯೇ ಪ್ರತಿದೂರು ದಾಖಲಾಗಿದೆ.
ಈ ಘಟನೆ ಚಿತ್ರದುರ್ಗ ನಗರದಲ್ಲಿ ಮೂರು ದಿನಗಳ ಹಿಂದೆ ನಡೆದಿದೆ ಎಂದು ಹೇಳಲಾಗುತ್ತಿದೆ. ಚಿತ್ರದುರ್ಗದ ಪಿವಿಎಸ್ ಆಸ್ಪತ್ರೆಯ ವೈದ್ಯರ ಚಾಲಕ ಮಂಜುನಾಥ್ ಎನ್ನಲಾಗಿದೆ. ದಲಿತ ಸಮುದಾಯಕ್ಕೆ ಸೇರಿದ ದೇವದಾಸಿ ಮಹಿಳೆಯ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಎಂದು ತಿಳಿದುಬಂದಿದೆ.
ಹಲ್ಲೆಗೊಳಗಾದ ಮಹಿಳೆ ಚಿತ್ರದುರ್ಗ ಹತ್ತಿರದ ಸಿದ್ದಾಪುರ ಗ್ರಾಮದ ಅಂಜಿನಮ್ಮ ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಘಟನೆ ನಡೆದು ಎರಡು ದಿನ ಕಳೆದಿದ್ದರೂ ಈವರೆಗೆ ಹಲ್ಲೆ ಮಾಡಿರುವ ವ್ಯಕ್ತಿಯ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು, ದಲಿತ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿ “ಹೆಣ್ಣು ಮಕ್ಕಳು, ಮಹಿಳೆಯರ ಮೇಲೆ ದೌರ್ಜನ್ಯ ಮಾಡುವ ಹಕ್ಕು ಯಾರಿಗೂ ಇಲ್ಲ. ಒಬ್ಬ ಮಹಿಳೆ ಎನ್ನುವುದನ್ನೂ ನೋಡದೆ. ವಿನಾಕಾರಣ ಹಲ್ಲೆ ಮಾಡುವುದು ಕಾನೂನು ಅಪರಾಧ. ಆ ವ್ಯಕ್ತಿಗೆ ಕಾನೂನು ಪ್ರಕಾರ ಆದಷ್ಟು ಬೇಗ ಶಿಕ್ಷೆಯಾಗಲಿ. ಪೊಲೀಸರು ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಚಿತ್ರದುರ್ಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಪೊಲೀಸ್ ವಿಭಾಗದಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಆದರೆ ಆರೋಪಿಯನ್ನು ಈವರೆಗೂ ಬಂಧಿಸಿಲ್ಲವೆಂದು ಆಕ್ರೋಶ ವ್ಯಕ್ತವಾಗಿದೆ.
ಈ ಕುರಿತು ದಲಿತ ಮುಖಂಡ ಕರುನಾಡ ಸಮರಸೇನೆ ಅಧ್ಯಕ್ಷ ಶಿವಕುಮಾರ್ ಮಾತನಾಡಿ, “ದಲಿತ ಸಮುದಾಯದ ಹೆಣ್ಣು ಮಗಳ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯ ಮೇಲೆ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ವಿಭಾಗದ ಪೊಲೀಸರು ಸುವೋ ಮೋಟೋ ಕೇಸ್ ದಾಖಲು ಮಾಡಿಕೊಳ್ಳಬೇಕಿತ್ತು. ಆದರೆ ದೂರು ನೀಡುವ ತನಕ ಕ್ರಮ ಕೈಗೊಂಡಿಲ್ಲ. ಆರೋಪಿಯನ್ನು ನೆಪ ಮಾತ್ರಕ್ಕೆ ಕರೆಸಿ ವಿಚಾರಿಸಿ ವಾಪಸ್ ಕಳುಹಿಸಿದ್ದಾರೆ. ಆರೋಪಿಯನ್ನು ಬಂಧಿಸಿಲ್ಲ. ಈ ಕುರಿತು ಆರೋಪಿಯನ್ನು ಬಂಧಿಸಲು ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟಿಸಿದ ಕುಟುಂಬಸ್ಥರು ಮತ್ತು ನಮ್ಮ ಮೇಲೆ ಪ್ರತಿದೂರು ದಾಖಲಿಸಿದ್ದಾರೆ. ಹೀಗಿದ್ದಾಗ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಪೊಲೀಸ್ ವಿಭಾಗ ಏಕೆ ಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಕಾಲಮಿತಿಯಲ್ಲಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಗೃಹ ಸಚಿವರ ಸೂಚನೆ
“ಅಲ್ಲದೆ ಹಲ್ಲೆಗೊಳಗಾದ ಸಂತ್ರಸ್ತ ಮಹಿಳೆಯನ್ನು ವಿಚಾರಣೆ ಮಾಡುವಾಗ ಮಹಿಳಾ ಸಿಬ್ಬಂದಿಯೊಂದಿಗೆ ವಿಚಾರಣೆ ಮಾಡಿಲ್ಲ. ಎಸ್ಸಿ/ಎಸ್ಟಿ ವಿಭಾಗದ ಪುರುಷ ಉಪನಿರೀಕ್ಷಕರೇ ಈ ವಿಚಾರಣೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಅಲ್ಲದೆ ಕುಟುಂಬಸ್ಥರು ಮತ್ತು ಮಹಿಳೆಯ ಮೇಲೆ ಪ್ರತಿ ದೂರು ದಾಖಲಿಸಿದ್ದಾರೆ. ಹಲ್ಲೆಗೊಳಗಾದ ನೊಂದ ದಲಿತರ ಮೇಲೆಯೇ ಪ್ರತಿದೂರು ದಾಖಲಿಸಿದರೆ ಮುಂದಿನ ದಿನಗಳಲ್ಲಿ ಯಾರು ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸವಿಟ್ಟು ದೂರು ದಾಖಲಿಸಲು ಮುಂದೆ ಬರುತ್ತಾರೆ. ಈ ಕುರಿತು ಆರೋಪಿಯನ್ನು ಬಂಧಿಸಿ, ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳ ಮೇಲೆ ಚಿತ್ರದುರ್ಗ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಗರದ ಮುಖ್ಯರಸ್ತೆಯ ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆ ಮುಂದೆ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ಮಾಡಲಾಗುತ್ತದೆ” ಎಂದು ಎಚ್ಚರಿಸಿದರು.





