ಶಾಲೆಯಿಂದ ಹೊರಗುಳಿದ ಮಕ್ಕಳು ಬಾಲ್ಯವಿವಾಹ, ಬಾಲ ಕಾರ್ಮಿಕರಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ, ಚಿತ್ರದುರ್ಗ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ತಾಲೂಕುವಾರು ಸಂಗ್ರಹಿಸಿ ವಾರದೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿತ್ರದುರ್ಗದಲ್ಲಿ ನಡೆದ 2024ನೇ ಸಾಲಿನ ಎರಡನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. “ಶಾಲೆಯಿಂದ ಹೊರಗುಳಿದ ಮಕ್ಕಳನ್ನು ವಿವಿಧ ಕಾರ್ಯತಂತ್ರದ ಮೂಲಕ ಮುಖ್ಯವಾಹಿನಿಗೆ ತರಬೇಕು. ಶಾಲೆಗಳಿಗೆ ಮರಳಿ ಬರುವಂತೆ ಮಾಡಬೇಕು. ಮಕ್ಕಳು ಶಾಲೆಯಿಂದ ಹೊರಗುಳಿಯಲು ಕಾರಣವೇನು ಎಂಬಿತ್ಯಾದಿ ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ಕ್ರಮವಹಿಸಬೇಕು” ಎಂದು ತಾಕೀತು ಮಾಡಿದರು.
“ಬಾಲಕಾರ್ಮಿಕರ ಪತ್ತೆಗಾಗಿ ನಿಯಮಿತವಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳು ವಿವಿಧ ಇಲಾಖೆ ಅಧಿಕಾರಿಗಳ ಸಮನ್ವಯದೊಂದಿಗೆ ತಪಾಸಣೆ ಕಾರ್ಯ ನಡೆಸಬೇಕು” ಎಂದು ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಡಿವೈಪಿಸಿ ವೆಂಕಟೇಶ್ ಮಾತನಾಡಿ, “ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಕ್ರಮವಹಿಸಲಾಗಿದ್ದು, ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ 489 ಮಕ್ಕಳಲ್ಲಿ 27 ಮಕ್ಕಳು ಪ್ರವೇಶಾತಿ ಪಡೆಯುವುದು ಬಾಕಿ ಇದೆ” ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, “ಶಾಲೆಯಿಂದ ಹೊರಗುಳಿದ 11 ರಿಂದ 18 ವರ್ಷದ ಕಿಶೋರಿಯರ ಮಾಹಿತಿ ಸಂಗ್ರಹಿಸಲು ಈಗಾಗಲೇ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಮಾಹಿತಿ ಸಂಗ್ರಹಿಸಲಾಗುತ್ತಿದೆ” ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಮಾತನಾಡಿ, “ಬಹಳ ಸೂಕ್ಷ್ಮ ಹಾಗೂ ಜವಾಬ್ದಾರಿಯುತವಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ಸಂಗ್ರಹಿಸಬೇಕು” ಎಂದು ಹೇಳಿದರು.
“ಜಿಲ್ಲೆಯಲ್ಲಿ ಯಾವ ಯಾವ ಸ್ಥಳಗಳಲ್ಲಿ ಬಾಲಕಾರ್ಮಿಕರ ಪತ್ತೆಗೆ ತಪಾಸಣೆ ಮಾಡಲಾಗಿದೆ, ಎಷ್ಟು ಬಾಲಕಾರ್ಮಿಕರ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಈ ಕುರಿತು ಇದುವರೆಗೂ ಎಷ್ಟು ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಕೈಗೊಂಡ ಕ್ರಮಗಳೇನು” ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗಳು ಪ್ರಶ್ನಿಸಿದರು.
“ಬಾಲಕಾರ್ಮಿಕರ ಪತ್ತೆಗೆ ನಿಯಮಿತವಾಗಿ ತಪಾಸಣಾ ಕಾರ್ಯವನ್ನು ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಮನ್ವಯದೊಂದಿಗೆ ತಪಾಸಣೆ ಮಾಡಲಾಗುತ್ತಿದೆ. ಕಳೆದ 15 ದಿನಗಳಿಂದ ಯಾವುದೇ ಬಾಲಕಾರ್ಮಿಕ ಮಕ್ಕಳು ಕಂಡುಬಂದಿರುವುದಿಲ್ಲ” ಎಂದು ಕಾರ್ಮಿಕ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ ಮಾತನಾಡಿ, “2023-24ನೇ ಸಾಲಿನಲ್ಲಿ 16 ಮಕ್ಕಳು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಾಗಿದ್ದು, ಅದರಲ್ಲಿ ಇಬ್ಬರು ಮಕ್ಕಳಿಗೆ 18 ವರ್ಷ ಪೂರ್ಣಗೊಂಡಿದೆ. 13 ಮಕ್ಕಳು ಪೋಷಕರ ವಶದಲ್ಲಿದ್ದು, ವಿದ್ಯಾಭ್ಯಾಸದ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿಗೆ ಅನುಪಾಲನೆ ವರದಿ ಸಲ್ಲಿಸಲಾಗಿದೆ. 1 ಮಗು ಮಕ್ಕಳ ಕಲ್ಯಾಣ ಸಮಿತಿಯಿಂದ ಪಶ್ಚಿಮ ಬಂಗಾಳ ರಾಜ್ಯದ ಕುಚ್ ಬಿಹಾರ್ ಜಿಲ್ಲೆ ಮಕ್ಕಳ ಕಲ್ಯಾಣ ಸಮಿತಿಗೆ ವರ್ಗಾವಣೆ ಮಾಡಲಾಗಿದೆ” ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಸಮಿತಿ ಸದಸ್ಯರಾದ ಚಿನ್ನಪ್ಪ, ಗುಜ್ಜಾರಪ್ಪ, ಹೇಮೇಗೌಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.




