ವಿದ್ಯಾರ್ಥಿಗಳು ಉತ್ತಮವಾದ ಶಿಕ್ಷಣ ಪಡೆದು ತಂದೆ-ತಾಯಿಗಳಿಗೆ ಒಳ್ಳೆಯ ಮಕ್ಕಳಾಗಿ ಹಾಗೂ ಸಮಾಜಕ್ಕೆ ಒಳ್ಳೆಯ ಪ್ರಜೆಗಳಾಗಿ ಬದುಕಬೇಕು ಎಂದು ಅಪರ ಚಿತ್ರದುರ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಬಿ ಕೆ ಕೋಮಲ ಅವರು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಚಿತ್ರದುರ್ಗ ನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ “ಪೋಕೋ ಕಾಯ್ದೆ ಕುರಿತು” ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
“ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿ ನಿಲಯಗಳನ್ನು ಪಾರಂಭಿಸಿ, ಸೌಲಭ್ಯಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಬಾಲ್ಯವಿವಾಹದ ದುಷ್ಪರಿಣಾಮಗಳು ಹಾಗೂ ಪೋಕೋ ಕಾಯ್ದೆ ಕುರಿತು ಅರಿತುಕೊಂಡು, ಇದನ್ನು ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕು. ಸಂವಿಧಾನದಲ್ಲಿ ಅಳವಡಿಕೆಯಾಗಿರುವ ಅಂಶಗಳನ್ನು ಅಧ್ಯಯನ ಮಾಡಿ ತಿಳಿದುಕೊಳ್ಳಬೇಕು” ಎಂದು ತಿಳಿಸಿದರು.
“ಚಿಕ್ಕ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆಯಲು 2012ರಲ್ಲಿ ಪೋಕೋ ಕಾಯ್ದೆಯನ್ನು ಜಾರಿಗೆ ತರಲಾಯಿತು. 18 ವರ್ಷಕ್ಕೆ ಒಂದು ದಿನ ಕಡಿಮೆ ಇದ್ದರೂ ಕೂಡ ಅವರನ್ನು ಮಕ್ಕಳು ಎಂದು ಪರಿಗಣಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿರುವುದರಿಂದ 18 ವರ್ಷದ ಒಳಗಿನ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು” ಎಂದು ತಿಳಿಸಿದರು.
“ಪ್ರೀತಿ-ಪ್ರೇಮದ ವ್ಯಾಮೋಹಕ್ಕೆ ಬಲಿಯಾಗಿ ಜೀವನ ಹಾಗೂ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹೆಣ್ಣು ಮಕ್ಕಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಕರೆಮಾಡಿ ರಕ್ಷಣೆಯನ್ನು ಪಡೆದುಕೊಳ್ಳಬಹುದು. ಗ್ರಾಮೀಣ ಪ್ರದೇಶದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚು ಕಂಡುಬರುತ್ತವೆ. ಹೀಗಾಗಿ ಗ್ರಾಮಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಿದೆ. ಗ್ರಾಮೀಣ ಭಾಗದಿಂದ ಬರುವಂತಹ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಹಾಗೂ ಪೋಕೋ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಬೇಕು” ಎಂದು ಹೇಳಿದರು.
“ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್ ಅವರು ಮಾತನಾಡಿ, “ಪೋಕ್ಸೋ ಪ್ರಕರಣಗಳಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿ ಇದ್ದರೆ, ಚಿತ್ರದುರ್ಗ ಎರಡನೇ ಸ್ಥಾನದಲ್ಲಿ ಇದೆ. 18 ವರ್ಷದ ಒಳಗಿನ ಮಕ್ಕಳು ದೌರ್ಜನ್ಯಗಳಿಗೆ ಬಲಿಯಾಗದೇ, ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ಜೀವನ ನಿರ್ಮಾಣ ಮಾಡಿಕೊಳ್ಳಬೇಕು. ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಶಾಲೆ ಹಾಗೂ ಕಾಲೇಜು ಬಿಟ್ಟಿರುವಂತಹ ನೊಂದ ಬಾಲಕಿಯರನ್ನು ಪುನಃ ಶಾಲೆ-ಕಾಲೇಜುಗಳಿಗೆ ಕರೆತರಲು ಸಹಕಾರ ನೀಡಬೇಕು” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಪ್ರಕೃತಿ ವಿಕೋಪ ಪರಿಹಾರಕ್ಕೆ 21.34 ಕೋಟಿ ಅನುದಾನ ಲಭ್ಯ: ಸಚಿವ ಕೃಷ್ಣ ಭೈರೇಗೌಡ
ವಕೀಲರ ಸಂಘದ ಅಧ್ಯಕ್ಷ ವೈ ತಿಪ್ಪೇಸ್ವಾಮಿ ಮಾತನಾಡಿ, “ನಾಳಿನ ಜಗತ್ತಿನ ಶ್ರೇಷ್ಠ ಮಕ್ಕಳು ನೀವಾಗಬೇಕು. ಭವ್ಯ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ, ದೊಡ್ಡ ವ್ಯಕ್ತಿಗಳಾಗಬೇಕೆಂಬ ನಿರ್ಧಾರ ನಿಮ್ಮದಾಗಿರಲಿ. ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ಬದುಕು ಅವನತಿಯಾಗುತ್ತಿದೆ” ಎಂದರು.
ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿ. ಜಗದೀಶ ಹೆಬ್ಬಳಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಗಂಗಾಧರ್, ಸಮಾಜ ಕಲ್ಯಾಣ ಇಲಾಖೆ ನೋಡಲ್ ಅಧಿಕಾರಿ ಚಂದ್ರಕಲಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ. ಕೃಷ್ಣ ಸೇರಿದಂತೆ ವಿದ್ಯಾರ್ಥಿ ನಿಲಯದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.




