ದೇಶದ ಯುವಪೀಳಿಗೆಯು ಸಂವಿಧಾನದ ಅರಿವು ಹಾಗೂ ಪ್ರಜಾಪ್ರಭುತ್ವದ ಮಹತ್ವ ಹಾಗೂ ನಮ್ಮ ದೇಶ ಸ್ವಾತಂತ್ರ್ಯ ಗಳಿಸಿದ ಬಗೆಯನ್ನು ಸಮಗ್ರವಾಗಿ ಅರಿತುಕೊಳ್ಳಬೇಕು ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ (ಸಿಇಓ) ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎಸ್. ಆಕಾಶ್ ತಿಳಿಸಿದರು.

ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಸೆಪ್ಟೆಂಬರ್ 15ರಂದು ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, “ಭಾರತ ಜಗತ್ತಿನಲ್ಲಿಯೇ ಪ್ರಜಾಪ್ರಭುತ್ವ ವ್ಯವಸ್ಥೆಯ ದೊಡ್ಡ ದೇಶ. ಕಾರಣ ನಮ್ಮಲ್ಲಿನ ಜನಸಂಖ್ಯೆ. ದೇಶದ ಜನಸಂಖ್ಯೆ ಸುಮಾರು 140 ಕೋಟಿ ಇದ್ದು, ಮತದಾನದ ಹಕ್ಕು ಹೊಂದಿರುವ ಸುಮಾರು 100 ಕೋಟಿಗೂ ಹೆಚ್ಚು ಜನ ನಮ್ಮಲ್ಲಿದ್ದಾರೆ. ಜನರೇ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರವನ್ನು ಹೊಂದಿದ್ದಾರೆ. ಮತದಾನದ ಮೂಲಕ ನಾವು ಆಯ್ಕೆ ಮಾಡಿರುವ ನಾಯಕರೇ ನಮ್ಮನ್ನು ಮುನ್ನಡೆಸುತ್ತಿದ್ದಾರೆ. ಹೀಗಾಗಿ ಇಂತಹ ನಾಯಕರು ಯಾವ ರೀತಿ ಇರಬೇಕು ಎಂಬುದನ್ನು ಜನರೇ ನಿರ್ಧರಿಸುವುದರಿಂದ, ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ದೇಶದಲ್ಲಿ ಬಲಿಷ್ಟವಾಗಿದೆ ಎಂದು ಅಭಿಪ್ರಾಯಪಟ್ಟರು.
“ಈ ಬಾರಿ ಪ್ರಜಾಪ್ರಭುತ್ವ ದಿನವನ್ನು “ನಮ್ಮ ಮತ- ನಮ್ಮ ಹಕ್ಕು” ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಿದ್ದು, ಅಧಿಕೃತವಾಗಿ ಜಾರಿಗೊಂಡ ದಿನವಾದ ಜನವರಿ 26 ಅನ್ನು ನಾವು ಗಣರಾಜ್ಯ ದಿನವನ್ನಾಗಿ ಆಚರಿಸುತ್ತೇವೆ. ಯುವಪೀಳಿಗೆ ತಮ್ಮ ವಿಧ್ಯಾಭ್ಯಾಸದ ಅವಧಿಯಲ್ಲಿ ಸಂವಿಧಾನದಲ್ಲಿ ಅಡಕವಾಗಿರುವ ಅಂಶಗಳು, ದೇಶ, ರಾಜ್ಯದಲ್ಲಿನ ಪೌರನೀತಿಗಳ ಬಗ್ಗೆ ಸಮಗ್ರವಾದ ಅರಿವು ಹೊಂದಬೇಕು” ಎಂದು ಸಲಹೆ ನೀಡಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಅವರು ಮಾತನಾಡಿ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಜನಪರವಾಗಿರಬೇಕು. ಸರ್ಕಾರದ ಆಳ್ವಿಕೆ ಯಾವ ರೀತಿ ಇರಬೇಕು ಎನ್ನುವುದನ್ನು ಪ್ರಜೆಗಳೇ ನಿರ್ಧರಿಸಬೇಕು. ಆಗಿನ ಪ್ರಧಾನಮಂತ್ರಿಯಾಗಿದ್ದ ರಾಜೀವ್ ಗಾಂಧಿಯವರು ಮತದಾನಕ್ಕೆ ಇದ್ದಂತಹ 21 ವರ್ಷ ವಯಸ್ಸಿನ ಅರ್ಹತೆಯ ಮಿತಿಯನ್ನು 18 ವರ್ಷಕ್ಕೆ ಇಳಿಸುವ ಮೂಲಕ ಯುವಜನರಿಗೆ ಮತದಾನದ ಹಕ್ಕನ್ನು ನೀಡಿದರು. ಚುನಾವಣೆ ಸಂದರ್ಭಗಳಲ್ಲಿ ಯುವ ಪೀಳಿಗೆ, ಸಮಾಜಮುಖಿ ಆಡಳಿತ ಮಾಡುವವರನ್ನು ನಿರ್ಭಯದಿಂದ ಮತದಾನ ಮಾಡುವ ಮೂಲಕ ಆಯ್ಕೆ ಮಾಡಬೇಕು” ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸಂವಿಧಾನದ ಪೀಠಿಕೆ, ಪ್ರತಿಜ್ಞಾ ವಿಧಿ ಬೋಧಿಸಿದರು. ಇದಕ್ಕೂ ಮುನ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್ ಮತ್ತು ಬೈಕ್ ರ್ಯಾಲಿ ಆಯೋಜಿಸಲಾಗಿತ್ತು. ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾದ ಸೈಕಲ್ ಹಾಗೂ ಬೈಕ್ ರ್ಯಾಲಿಯು ಮಹಾತ್ಮಾಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತ, ಕನಕ ವೃತ್ತದ ಮೂಲಕ ಮತ್ತೆ ಪುನಃ ಜಿಲ್ಲಾಧಿಕಾರಿಗಳ ಕಚೇರಿವರೆಗೂ ನಡೆಯಿತು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ದೇಶದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಮತ ಚಲಾವಣೆ ಕಳವಳಕಾರಿ: ಎಸ್ಪಿ ರಂಜಿತ್ ಕುಮಾರ್
ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು, ನಗರಸಭೆ ಅಧ್ಯಕ್ಷೆ ಎಂ.ಪಿ. ಅನಿತಾ ರಮೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಗಣ್ಯರಾದ ರಮೇಶ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ ತಹಶೀಲ್ದಾರ್ ಗೋವಿಂದರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕ ಪರಮೇಶ್ವರಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು.





