ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್ಪೆಕ್ಟರ್ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಇಂದು ಬೆಳಿಗ್ಗೆ 7ರ ಸಮಯದಲ್ಲಿ ಸಂಭವಿಸಿದೆ. ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸುಮಾರು 300 ಮೀಟರ್ಗಳಷ್ಟು ಮುಂದಕ್ಕೆ ಎಳೆದೊಯ್ಯಲ್ಪಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮರೇಶ್, ಮಂಜುನಾಥ್ ಮತ್ತು ಸಚಿನ್ ಎಂಬ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಲಕ್ಷ್ಮಣ್ ಮತ್ತು ಈಶ್ವರ್ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣೆಗೆರೆ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹಿರಿಯೂರು ಡಿವೈಎಸ್ಪಿ ಶಿವಕುಮಾರ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಅಪಘಾತದ ನಂತರ ಸ್ಥಳಕ್ಕೆ ಭೇಟಿ ನೀಡಿದರು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು: ಕಿಮ್ಸ್ ಸಿಬ್ಬಂದಿ ನಿರ್ಲಕ್ಷ್ಯ ಆರೋಪ
ಈ ಐವರು ಪೊಲೀಸ್ ಅಧಿಕಾರಿಗಳು ಬೆಂಗಳೂರಿನಿಂದ ಬಳ್ಳಾರಿಯಲ್ಲಿ ನಡೆಯಲಿದ್ದ ಸ್ನೇಹಿತರೊಬ್ಬರ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಒಂದೇ ಕಾರಿನಲ್ಲಿ ತೆರಳುತ್ತಿದ್ದರು ಎಂಬುದು ಮೂಲಗಳಿಂದ ತಿಳಿದುಬಂದಿದೆ.





