ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲೂರಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕೆಲಸಗಳು ಹಾದಿ ತಪ್ಪಿದ್ದು, ದಸರಾಮುತ್ತೇನಹಳ್ಳಿ ನಿವಾಸಿಗಳು ಮೂಲ ಸೌಕರ್ಯವಿಲ್ಲದೆ ವಂಚಿತರಾಗಿದ್ದಾರೆ.
ʼಭಾರತ ಹಳ್ಳಿಗಳ ನಾಡುʼ ಎಂಬ ಮಾತು ಕೇವಲ ಘೋಷಣೆಗೆ ಸೀಮಿತವಾಗಿದೆಯೇ? ಸ್ವಾತಂತ್ರ್ಯ ಬಂದು ಏಳು ದಶಕಗಳು ಕಳೆದರೂ ಹಳ್ಳಿಗಳ ಸ್ಥಿತಿ ಮಾತ್ರ ಸುಧಾರಿಸಿಲ್ಲ ಎಂಬುದಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲೂರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಸರಾಮುತ್ತೇನಹಳ್ಳಿ ಗ್ರಾಮವೇ ಸಾಕ್ಷಿ. ಇಲ್ಲಿನ ಜನರ ಬದುಕು ನರಕಸದೃಶವಾಗಿದ್ದು, ಮೂಲಸೌಕರ್ಯ ಎಂಬುದು ಮರೀಚಿಕೆಯಾಗಿದೆ.
”ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಜಲ ಜೀವನ ಮಿಷನ್(ಜೆಜೆಎಂ)ʼ ಯೋಜನೆ ಅಡಿ ಗ್ರಾಮದ ಪ್ರತಿ ಮನೆಗೂ ನಳದ ಸಂಪರ್ಕ ಕಲ್ಪಿಸಲಾಗಿದೆ. ಆದರೆ, ಪೈಪ್ಗಳಿವೆಯೇ ವಿನಃ ನೀರಿಲ್ಲ. ನಳಗಳು ಹೆಸರಿಗೆ ಮಾತ್ರ ಇವೆ, ಈವರೆಗೆ ಒಂದೇ ಒಂದು ಹನಿ ನೀರು ಬಂದಿಲ್ಲ. ಕುಡಿಯುವ ನೀರಿಗಾಗಿ ಕಿಲೋಮೀಟರ್ಗಟ್ಟಲೆ ಅಲೆಯಬೇಕಾದ ದುಃಸ್ಥಿತಿ ಎದುರಾಗಿದೆ” ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.

ರೋಗರುಜಿನಗಳ ಆತಂಕ
”ಗ್ರಾಮದ ಚರಂಡಿಗಳಲ್ಲಿ ಹೂಳು ತುಂಬಿಹೋಗಿದ್ದು, ನೈರ್ಮಲ್ಯದ ಸ್ಥಿತಿ ಅಧೋಗತಿಗೆ ತಲುಪಿದೆ. ಚರಂಡಿ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲಿ ಸಂಗ್ರಹವಾಗುತ್ತಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ನಿರ್ವಹಣೆ ಮಾಡಬೇಕಾದ ಪಂಚಾಯಿತಿ ಅಧಿಕಾರಿಗಳು ಸಾರ್ವಜನಿಕರ ದೂರುಗಳಿಗೆ ಕಿವಿಗೊಡದೆ ನಿದ್ರಾವಸ್ಥೆಯಲ್ಲಿದ್ದಾರೆ” ಎಂಬುದು ಸ್ಥಳೀಯರ ನೇರ ಆರೋಪವಾಗಿದೆ.
”ಮಲ್ಲೂರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು ಅಧಿಕ ಸಂಖ್ಯೆಯಲ್ಲಿ ವಾಸವಿದ್ದಾರೆ. ಇವರ ಅಭಿವೃದ್ಧಿಗೆಂದು ಸರ್ಕಾರ ಬಿಡುಗಡೆ ಮಾಡಿದ ಕೋಟ್ಯಂತರ ರೂಪಾಯಿ ಅನುದಾನ ಸಮರ್ಪಕವಾಗಿ ಬಳಕೆಯಾಗದೆ, ಪ್ರಭಾವಿಗಳು ಮತ್ತು ಅಧಿಕಾರಿಗಳ ಜೇಬು ಸೇರುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸರ್ಕಾರಿ ಅನುದಾನದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆಯಾಗಬೇಕು” ಎಂದು ಗ್ರಾಮದ ತಿಪ್ಪೇಸ್ವಾಮಿ ಸಿ ಪಿ ಒತ್ತಾಯಿಸಿದರು.

“ಕಳೆದ ಜನವರಿ 22ರಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ನಲ್ಲಿ ಸಭೆ ನಡೆದಾಗ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಆಯೋಗದ ಅಧ್ಯಕ್ಷ ಡಾ. ಎಲ್ ಮೂರ್ತಿಯವರು, ʼದಲಿತ ಕಾಲನಿಗಳಲ್ಲಿ ನಡೆಯುವ ಕಾಮಗಾರಿಗಳ ವಿವರವಿರುವ ನಾಮಫಲಕ ಅಳವಡಿಸುವುದು ಕಡ್ಡಾಯʼವೆಂದು ಸೂಚಿಸಿದ್ದರು. ಆದರೆ, ಮಲ್ಲೂರಹಳ್ಳಿ ಪಂಚಾಯಿತಿಯಲ್ಲಿ ಈ ನಿಯಮವನ್ನು ಗಾಳಿಗೆ ತೂರಲಾಗಿದೆ. ಆಯೋಗದ ಅಧ್ಯಕ್ಷರ ಮಾತಿಗೆ ಇಲ್ಲಿನ ಅಧಿಕಾರಿಗಳು ಕಿಮ್ಮತ್ತೂ ಬೆಲೆ ನೀಡುತ್ತಿಲ್ಲವೆಂಬುದು ಸ್ಪಷ್ಟವಾಗಿ ಕಾಣುತ್ತಿದೆ” ಎಂದು ಆರೋಪಿಸಿದರು.
”ಗ್ರಾಮದ ಸಮಸ್ಯೆಗಳ ಬಗ್ಗೆ ಮತ್ತು ಹಣದ ದುರುಪಯೋಗದ ಬಗ್ಗೆ ದಾಖಲೆ ಸಹಿತ ಪರಿಶೀಲನೆ ನಡೆಸಬೇಕು. ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಲಾಗುವುದು” ಎಂದು ತಿಪ್ಪೇಸ್ವಾಮಿ ಸಿ ಪಿ ಎಚ್ಚರಿಕೆ ನೀಡಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕೂಡಲೇ ದಸರಾಮುತ್ತೇನಹಳ್ಳಿಗೆ ಭೇಟಿ ನೀಡಿ, ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸುವರೇ ಎಂದು ಕಾದು ನೋಡಬೇಕಿದೆ.
ಇದನ್ನೂ ಓದಿದ್ದೀರಾ? ಫ್ಲೋರೈಡ್ ನೀರಿನಿಂದ ಮುಕ್ತಿ: ಕೋಲಾರ ಜಿಲ್ಲೆಯ ಜನರಿಗೆ ಸಂಜೀವಿನಿಯಾದ ಯರಗೋಳ್ ಜಲಾಶಯ
ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯಗಳು ಸರಿಯಾಗಿ ನಿರ್ವಹಣೆಯಾಗದಿದ್ದರೆ, ನಿವಾಸಿಗಳ ಜೀವನಮಟ್ಟ ಕುಸಿದು ಸಾಮಾಜಿಕ-ಆರ್ಥಿಕ ಅಸಮಾನತೆ ಹೆಚ್ಚುತ್ತದೆ. ಸರ್ಕಾರಿ ಅಧಿಕಾರಿಗಳು ಮತ್ತು ಸ್ಥಳೀಯ ಆಡಳಿತವು ಈ ಸಮಸ್ಯೆಯನ್ನು ಕೂಡಲೇ ಗಮನಿಸಿ, ಪಾರದರ್ಶಕವಾಗಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿ, ನಿವಾಸಿಗಳ ಅಗತ್ಯಗಳನ್ನು ಪೂರೈಸುವ ಮೂಲಕ ನ್ಯಾಯಯುತ ಅಭಿವೃದ್ಧಿಯನ್ನು ಖಾತ್ರಿಪಡಿಸಬೇಕು. ಅಷ್ಟು ಮಾತ್ರವಲ್ಲದೆ, ಗ್ರಾಮೀಣ ಭಾಗದ ಜನರು ಮುಂದಿನ ದಿನಗಳಲ್ಲಿ ಮೂಲಭೂತ ಹಕ್ಕುಗಳಿಂದ ವಂಚಿತರಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.




