ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಕಾಮಗಾರಿಗೆ ಎಸ್ಸಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡು ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸುವಂತೆ ಚಿತ್ರದುರ್ಗದಲ್ಲಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮುಖಂಡರು, “ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದಾಸೀನ ಮನೋಭಾವ ಹಾಗೂ ಅನುದಾನದ ಕೊರತೆಯಿಂದಾಗಿ ಕಾಮಗಾರಿ ಹೆಚ್ಚು ಕಡಿಮೆ ಸ್ಥಗಿತಗೊಂಡಿದೆ. 5300 ಕೋಟಿ ರೂ. ಅನುದಾನ ನೀಡಲಿ ಎಂದು ರಾಜ್ಯ ಸರ್ಕಾರ ಕೇಂದ್ರದತ್ತ ಬೊಟ್ಟು ಮಾಡಿದ್ದರೆ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆಗಾಗಿ ತಾಂತ್ರಿಕ ಮಾಹಿತಿಗಳ ಪೂರೈಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರಗಳ ಮೇಲೆ ಪತ್ರ ಬರೆಯುತ್ತಿದೆ. ಎರಡೂ ಸರ್ಕಾರದ ನಡೆಗಳಿಂದಾಗಿ ಭದ್ರಾ ಮೇಲ್ದಂಡೆ ಸೊರಗಿದೆ” ಎಂದು ಅಭಿಪ್ರಾಯಪಟ್ಟರು.
“ಹಾಲಿ ಶರವೇಗದಲ್ಲಿ ನಡೆಯುತ್ತಿರುವ ತುಂಗಭದ್ರಾ ಹಿನ್ನೀರು ಕುಡಿವ ನೀರಿನ ಎರಡುವರೆ ಸಾವಿರ ಕೋಟಿ ರುಪಾಯಿ ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರ ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿದೆ. ವಿಜಯ ನಗರ ಜಿಲ್ಲೆಯ ಕೂಡ್ಲಿಗಿ, ದಾವಣಗೆರೆ ಜಿಲ್ಲೆಯ ಜಗಳೂರು, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ತುಮಕೂರು ಜಿಲ್ಲೆಯ ಪಾವಗಡ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಪ್ರದೇಶಗಳಿಗೆ ತುಂಗ ಭದ್ರಾ ಜಲಾಶಯದ ಹಿನ್ನೀರಿನಿಂದ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ” ಎಂದು ಮಾಹಿತಿ ನೀಡಿದರು.
“ಈ ಯೋಜನೆಗೆ ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡಿರುವುದರ ಬಗ್ಗೆ ರಾಜ್ಯ ಸರ್ಕಾರ ತನ್ನ ನೈತಿಕ ಆಯಾಮದಲ್ಲಿ ಸಮಜಾಯಿಷಿ ನೀಡಿದೆ. ಕೂಡ್ಲಿಗಿ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ವಿಧಾನಸಭೆ ಕ್ಷೇತ್ರಗಳು ಪರಿಶಿಷ್ಟ ಪಂಗಡ( ಎಸ್ಟಿ)ಕ್ಕೆ ಹಾಗೂ ಪಾವಗಡ ಪರಿಶಿಷ್ಟ ಜಾತಿ(ಎಸ್ಸಿ) ಗೆ ಮೀಸಲಾಗಿದೆ. ಹಾಗಾಗಿ ಈ ಸಮುದಾಯಗಳಿಗೆ ಕಾಯ್ದಿಟ್ಟ ಅನುದಾನ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಸ್ಪಷ್ಟೀಕರಣ ನೀಡಿದೆ” ಎಂದರು.
“ತುಂಗಭದ್ರಾ ಹಿನ್ನೀರು ಕಾಮಗಾರಿಗೆ ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಲು ರಾಜ್ಯ ಸರ್ಕಾರ ಹರಿಯ ಬಿಟ್ಟ ಆಲೋಚನಾ ಕ್ರಮಗಳನ್ನು ಭದ್ರಾ ಮೇಲ್ದಂಡೆಗೂ ಪರಿಗಣಿಸಬೇಕೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆಗ್ರಹಿಸುತ್ತದೆ. ಭದ್ರಾ ಮೇಲ್ದಂಡೆ ವ್ಯಾಪ್ತಿಗೆ ಹೊಳಲ್ಕೆರೆ, ಪಾವಗಡ(ಪರಿಶಿಷ್ಟ ಜಾತಿ),ಮೊಳಕಾಲ್ಮುರು, ಚಳ್ಳಕೆರೆ, ಜಗಳೂರು( ಪರಿಶಿಷ್ಟ ಪಂಗಡ) ಸೇರಿ ಐದು ಮೀಸಲು ಕ್ಷೇತ್ರಗಳು ಬರುತ್ತವೆ. ಸಾಲದೆಂಬಂತೆ ಚಿತ್ರದುರ್ಗ ಲೋಕಸಭೆ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಹಾಗಾಗಿ ತುಂಗ ಭದ್ರಾ ಹಿನ್ನೀರು ಯೋಜನೆಗೆ ಎಸ್ಪಿಪಿ , ಟಿಎಸ್ಪಿ ಅನುದಾನ ಬಳಕೆ ಮಾಡಿದ ರೀತಿ ಭದ್ರಾ ಮೇಲ್ದಂಡೆಗೂ ವಿನಿಯೋಗಿಸಬಹುದಾಗಿದೆ” ಎಂದು ತಿಳಿಸಿದರು.
“ತನ್ನ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಕಳೆದ ಎರಡು ವರ್ಷಗಳಲ್ಲಿ 32 ಸಾವಿರಕೋಟಿ ರೂ. ಎಸ್ಸಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡಿರುವುದರ ಬಗ್ಗೆ ಶಾಸನ ಸಭೆಯಲ್ಲಿಯೇ ಸಿಎಂ ಹೇಳಿಕೆ ನೀಡಿದ್ದಾರೆ. ಗ್ಯಾರಂಟಿಗಳಿಗೆ ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಳ್ಳುವುದಾದರೆ ಭದ್ರಾ ಮೇಲ್ದಂಡೆಗೆ ಏಕೆ ಬಳಸಬಾರದು” ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮುಖಂಡರು ಪ್ರಶ್ನೆ ಮಾಡಿದರು.
“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಉದಾಸೀನ ಮನೋಭಾವ ಗಮನಿಸಿದರೆ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳಿಸಲು ಇನ್ನೂ ಒಂದೆರಡು ದಶಕ ಬೇಕೆನಿಸುತ್ತದೆ. ಅಲ್ಲದೇ ಯೋಜನಾ ವೆಚ್ಚವು ಜಾಸ್ತಿಯಾಗುತ್ತದೆ. ಯೋಜನಾ ವ್ಯಾಪ್ತಿಯಲ್ಲಿ ಬರುವ ಶಾಸಕರು, ಸಚಿವರು ತಕ್ಷಣವೇ ಸಿಎಂ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಒತ್ತಡ ಹೇರಿ ಎಸ್ಪಿಪಿ, ಟಿಎಸ್ಪಿ ಅನುದಾನದ ಸಹಾಯ ಪಡೆದು ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಮಿತಿ ಆಗ್ರಹಿಸಿತು.
“ಕೃಷ್ಣಾ ಜಲಭಾಗ್ಯದ ರೀತಿ ಭದ್ರಾ ಮೇಲ್ದಂಡೆಗೂ ನೀರಾವರಿ ಬಾಂಡ್ ಬಿಡುಗಡೆ ಮಾಡಿ ಸಂಪನ್ಮೂಲ ಕ್ರೋಡೀಕರಣ ಮಾಡುವಂತೆ ಹಿಂದೊಮ್ಮೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ ಸರ್ಕಾರವನ್ನು ಆಗ್ರಹಿಸಿತ್ತು. ಈಗಲೂ ಕಾಲ ಮಿಂಚಿಲ್ಲ, ಬಾಂಡ್ ಬಿಡುಗಡೆ ಮಾಡಿದರೆ ಕೊಂಡುಕೊಳ್ಳುವವರು ಇದ್ದಾರೆ. ಸರ್ಕಾರ ಈ ಬಗ್ಗೆಯೂ ಚಿಂತಿಸಲಿ” ಎಂದು ಸಮಿತಿ ಮುಖಂಡರು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಎಸ್ ಪಿ ವಿರುದ್ಧ ಹರಿಹರ ಬಿಜೆಪಿ ಶಾಸಕ ಹರೀಶ್ ಅವಹೇಳನಕಾರಿ ಹೇಳಿಕೆ; ಪ್ರಕರಣ ದಾಖಲು
“ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆ ಸಂಬಂಧ ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದೇವೆ. ಈ ಸಂಬಂಧ ವಕೀಲರ ಸಂಪರ್ಕಿಸಲಾಗಿದೆ. ತುಂಗಭದ್ರಾ ಹಿನ್ನೀರು ಯೋಜನೆಗೆ ಎಸ್ಪಿಪಿ ಟಿಎಸ್ಪಿ ಅನುದಾನ ಬಳಕೆ ಮಾಡಿಕೊಳ್ಳಲಾಗಿದ್ದು, ಅದೇ ರೀತಿ ಭದ್ರಾ ಮೇಲ್ದಂಡೆಗೂ ಬಳಕೆ ಮಾಡುವಂತೆ ಸಾರ್ವಜನಿಕ ಹಿತಾಸಕ್ತಿ ರಿಟ್ ಸಲ್ಲಿಸಲಾಗುವುದು” ಎಂದು ಬಿ.ಎ.ಲಿಂಗಾರೆಡ್ಡಿ ಹೇಳಿದರು.
ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನ ಮಾಳಿಗೆ ಧನಂಜಯ, ಮಾಜಿ ಅಧ್ಯಕ್ಷ ಬಸ್ತಿಹಳ್ಳಿ ಸುರೇಶ್ ಬಾಬು,ಉಪಾಧ್ಯಕ್ಷ ಮಲ್ಲಾಪುರ ತಿಪ್ಪೇಸ್ವಾಮಿ ಸೇರಿದಂತೆ ಇತರ ಮುಖಂಡರು ಹಾಜರಿದ್ದರು.





