ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಬಣ್ಣನೆ
ಪ್ರತಿನಿತ್ಯ ಪಟ್ಟಣದ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರು, ನಾಗರಿಕರ ಆರೋಗ್ಯ ಕಾಪಾಡುವ ವೈದ್ಯರಿದ್ದಂತೆ ಎಂದು ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಬಣ್ಣಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಪುರಸಭೆ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಅವರು ಮಾತನಾಡಿದರು.
ಪೌರ ಕಾರ್ಮಿಕರು ಆರೋಗ್ಯವಾಗಿದ್ದರೆ ಮಾತ್ರ ಪಟ್ಟಣದ ಪೌರರು ಆರೋಗ್ಯದಿಂದಿರಲು ಸಾಧ್ಯ. ಆದ್ದರಿಂದ ಪೌರ ಕಾರ್ಮಿಕರ ಆರೋಗ್ಯವೂ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರು ಕೆಲಸದ ವೇಳೆ ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಬಳಸುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಯಾವುದೇ ವಾರ್ಡಿನಲ್ಲಿ ಕುಡಿಯುವ ನೀರು, ಚರಂಡಿ, ರಸ್ತೆ ಮತ್ತಿತರರ ಸಮಸ್ಯೆಗಳು ಎದುರಾಗದಂತೆ ಕ್ರಮ ವಹಿಸಬೇಕು. ಹಾಗೇಯೆ ಪಟ್ಟಣದ ಮುಖ್ಯ ರಸ್ತೆಯ ವಿಭಾಜಕದಲ್ಲಿನ ಕಂಬಗಳಿಗೆ ಯಾವುದೇ ರೀತಿಯ ಫ್ಲೆಕ್ಸ್ ಅಳವಡಿಸದಂತೆ ಕ್ರಮ ಕೈಗೊಳ್ಳಬೇಕು. ಪಟ್ಟಣವನ್ನು ಸುಂದರ ಮತ್ತು ಸ್ವಚ್ಛ ಹಾಗೂ ಮಾದರಿ ಪಟ್ಟಣವಾಗಿಸಬೇಕು ಎಂದು ಹೇಳಿದರು.
ಪೌರಕಾರ್ಮಿಕರ ಮಕ್ಕಳು ಪೌರ ಕಾರ್ಮಿಕರಾಗಿ ದುಡಿಯಬೇಕೆಂದಿಲ್ಲ. ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ. ಅವರು ಮುಂದೆ ಉತ್ತಮ ನಾಗರಿಕರಾಗಿ ಸಮಾಜದಲ್ಲಿ ಉನ್ನತ ಹುದ್ದೆಗೇರುವಂತಾಗಬೇಕು ಎಂದು ಪೌರ ಕಾರ್ಮಿಕರಿಗೆ ಶಾಸಕರು ಕಿವಿಮಾತು ಹೇಳಿದರು.
ಪುರಸಭೆ ಉಪಾಧ್ಯಕ್ಷೆ ಸುಜಾತ ನರಸಿಂಹ ನಾಯ್ಡು ಮಾತನಾಡಿ, ಗಾಳಿ, ಮಳೆ, ಬಿಸಿಲು, ಚಳಿ ಎನ್ನದೆ ದಿನನಿತ್ಯ ನಸುಕಿನ ಜಾವದಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಪೌರ ಕಾರ್ಮಿಕರು ನೈಜ ಕಾಯಕಯೋಗಿಗಳು, ಸ್ವಚ್ಛತೆಯ ರೂವಾರಿಗಳು. ಕೊರೊನಾದಂತ ಸಂದಿಗ್ಧ ಸ್ಥಿತಿಯಲ್ಲಿಯೂ ತಮ್ಮ ಜೀವದ ಹಂಗನ್ನು ತೊರೆದು ಬಿಡುವಿಲ್ಲದ ನೈರ್ಮಲ್ಯೀಕರಣ ಕಾರ್ಯ ಮಾಡಿದ್ದು ಶ್ಲಾಘನೀಯ ಎಂದು ಹೇಳಿದರು.
ಪುರಸಭೆ ಗಡಿ ಗುರುತಿಸಲು ಕ್ರಮ
ಬಾಗೇಪಲ್ಲಿ ಪಟ್ಟಣವು ವಿಸ್ತರಿಸುತ್ತಿದ್ದು, ಗಡಿ ಭಾಗದಲ್ಲಿ ಕೆಲ ಗ್ರಾಮ ಪಂಚಾಯತಿಗಳಿಗೂ ಹಾಗೂ ಪುರಸಭೆಯ ನಡುವೆ ಇರುವ ಗೊಂದಲ ನಿವಾರಣೆಗೆ ಗಡಿ ಗುರುತಿಸಲು ಸಿದ್ಧತೆ ನಡೆಸಲಾಗಿದೆ. ಇದರಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗಲಿದೆ. ಹಾಗೆಯೇ ನ.6 ರಂದು 320 ನಿವೇಶನ ರಹಿತರಿಗೆ ನಿವೇಶನಗಳನ್ನು ಹಂಚಲು ತೀರ್ಮಾನಿಸಲಾಗಿದೆ ಎಂದರು.
ಅ.5 ರಂದು ಆರೋಗ್ಯ ಸಚಿವರ ಭೇಟಿ
ತಾಲೂಕಿನಲ್ಲಿ ಹಲವಾರು ಕಾಮಗಾರಿಗಳ ಚಾಲನೆಗೆ ಅ.5ರ ಶನಿವಾರ ಸಂಜೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಅವರು ಪಟ್ಟಣಕ್ಕೆ ಆಗಮಿಸಲಿದ್ದಾರೆ. ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಆಸ್ಪತ್ರೆಯ ಕೆಳ ಮಹಡಿ ನವೀಕರಿಸುವ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಹಾಗೇಯೆ ಚೇಳೂರು ತಾಲೂಕಿನ ಚಾಕವೇಲುವಿನಲ್ಲಿ ನಿರ್ಮಾಣವಾದ ನೂತನ ಆರೋಗ್ಯ ಕೇಂದ್ರದ ಉದ್ಘಾಟನೆ ಮತ್ತು ಜಿ.ಮದ್ದೇಪಲ್ಲಿಯಲ್ಲಿ ಸುಮಾರು 5 ಕೋಟಿ ವೆಚ್ಚದಲ್ಲಿ ಆರೋಗ್ಯ ಕೇಂದ್ರದ ನಿರ್ಮಾಣ ಕಾಮಾಗಾರಿಗೆ ಶಂಕುಸ್ಥಾಪನೆಯನ್ನು ಸಚಿವರು ಮಾಡಲಿದ್ದಾರೆ ಎಂದು ಶಾಸಕರು ತಿಳಿಸಿದರು.
ಇದೇ ವೇಳೆ ಪುರಸಭೆ ಎಲ್ಲಾ 62 ಪೌರ ಕಾರ್ಮಿಕರು ಹಾಗೂ ನೀರು ಸರಬರಾಜುದಾರರಿಗೆ ಶಾಸಕರಿಂದ ಉಚಿತವಾಗಿ ಬಟ್ಟೆಗಳನ್ನು ಉಡುಗೊರೆಯಾಗಿ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಲ್ಲಿ ಅಭಿವೃದ್ಧಿ, ಮಾಧ್ಯಮಗಳಲ್ಲಿ ಬ್ರ್ಯಾಂಡ್ ಬೆಂಗಳೂರು
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಎನ್.ಶ್ರೀನಿವಾಸ್, ಪುರಸಭೆ ಸದಸ್ಯರಾದ ಶ್ರೀನಿವಾಸ್ ರೆಡ್ಡಿ, ಎ.ನಂಜುಂಡಪ್ಪ, ರೇಷ್ಮಾ ಭಾನು, ಗಡ್ಡಂ ರಮೇಶ್, ಶ್ರೀನಾಥ್, ಪುರಸಭೆ ಅಧಿಕಾರಿಗಳಾದ ಕೃಷ್ಣಪ್ಪ, ಅತಾವುಲ್ಲಾ ಹಾಗೂ ಪುರಸಭೆ ಸದಸ್ಯರು ಹಾಜರಿದ್ದರು.





