ಮುಖ್ಯಮಂತ್ರಿ ಸಿದ್ದರಾಮಯ್ಯ ಎಡಪಂಥೀಯ ಸಂಘಟನೆಗಳ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ದಾವಣಗೆರೆಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಧರ್ಮಸ್ಥಳ ವಿಚಾರದಲ್ಲಿ ಕೆಲ ಸಂಘಟನೆ ಹಾಗೂ ನಾಯಕರ ಒತ್ತಡಕ್ಕೆ ಮಣಿದು ರಾಜ್ಯ ಸರಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ. ಹಿಂದೂಗಳ ಪವಿತ್ರ ಕ್ಷೇತ್ರವಾದ ಧರ್ಮಸ್ಥಳದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಟೂಲ್ಕಿಟ್ ರೂಪಿಸಲಾಗಿದೆ. ಹಿಂದೂಗಳ ವಿರುದ್ಧದ ಇಂತಹ ಷಡ್ಯಂತ್ರಗಳಿಗೆ ಫಲ ಸಿಗದು” ಎಂದರು.
“ರಾಜ್ಯ ಸರಕಾರ ಬಹುಸಂಖ್ಯಾತ ಹಿಂದೂಗಳ ಭಾವನೆಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿದೆ. ಧರ್ಮಸ್ಥಳ, ದಸರಾ ಮಹೋತ್ಸವ ಹಾಗೂ ಚಾಮುಂಡಿ ಬೆಟ್ಟದ ವಿಚಾರದಲ್ಲಿ ಇದು ನಿರೂಪಿತವಾಗಿದೆ. ಸಾಮಾಜಿಕ ಸಾಮರಸ್ಯ ಕದಡುವ ಅಂತಾರಾಷ್ಟ್ರೀಯ ಮಟ್ಟದ ಷಡ್ಯಂತ್ರದ ಭಾಗವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ಸಮಾಜ ಒಡೆದರೆ ಡ್ರಗ್ಸ್ ಮಾಫಿಯಾಗೆ ಅನುಕೂಲವಾಗಲಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ. ಎಲ್ಲೆಡೆ ಭ್ರಷ್ಟಾಚಾರ ತುಂಬಿತುಳುಕುತ್ತಿದೆ. ಅತಿವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಡಳಿತದ ಮೇಲೆ ಹಿಡಿತ ಕಳೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನ ದೂಡುತ್ತಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ” ಎಂದು ದೂರಿದರು.
“ಕೇಂದ್ರ ಸರ್ಕಾರ ಜಾತಿ ಜನಗಣತಿ ನಡೆಸುತ್ತಿದೆ. ಈ ಗಣತಿ ಅಧಿಕೃತ ದಾಖಲೆಯಾಗಲಿದೆ. ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳನ್ನು ಮತಬ್ಯಾಂಕ್ ಮಾಡಿಕೊಳ್ಳಲು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ತರಾತುರಿಯಲ್ಲಿ ನಡೆಸಲು ಮುಂದಾಗಿದೆ. ಈ ಮೂಲಕ ಜಾತಿ ನಿರ್ಮೂಲನೆ ಪ್ರತಿಪಾದಿಸುವವರೇ ಹೊಸ ಜಾತಿಗಳನ್ನು ಸೃಷ್ಟಿಸಿ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ” ಎಂದರು.
ಇದನ್ನೂ ಓದಿ: ಈ ದಿನ ಸಂಪಾದಕೀಯ | ದ್ವೇಷವನ್ನು ಪ್ರೀತಿಯಿಂದ ಗೆಲ್ಲಬೇಕೆಂದ ಉಮರ್ ಪರಮ ಪಾತಕಿಯೇ?
“ದೇಶದಲ್ಲಿ ಕಾನೂನುಬದ್ಧ ಧರ್ಮಾಂತರಕ್ಕೆ ಅವಕಾಶವಿದೆ. ಹೊಸ ಧರ್ಮ ಸ್ವೀಕರಿಸಿದವರು ಹಳೆಯ ಜಾತಿ, ಧರ್ಮ ಉಲ್ಲೇಖಿಸುವಂತಿಲ್ಲ. ಆದರೂ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಮಾಡಿಕೊಳ್ಳುತ್ತಿರುವ ಸಿದ್ಧತೆಯಲ್ಲಿ ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ವೀರಶೈವ ಕ್ರಿಶ್ಚಿಯನ್ನಂತಹ ಜಾತಿಗಳನ್ನು ಉಲ್ಲೇಖಿಸಲಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ರಾಜ್ಯದಲ್ಲಿ ಮಳೆ ಮಾಪನ ಕೇಂದ್ರಗಳು ಹಾಳಾಗಿವೆ. ಇದರಿಂದ ಮಳೆಯ ಕುರಿತು ಅಧಿಕೃತ ದಾಖಲೆ ಲಭ್ಯವಾಗದೇ ರೈತರಿಗೆ ಬೆಳೆವಿಮೆ ಕೈತಪ್ಪುತ್ತಿದೆ. ರೈತರ ಬಗೆಗೆ ಕಾಳಜಿ ಇದ್ದರೆ ಮೊದಲು ಮಳೆಮಾಪನ ಕೇಂದ್ರಗಳನ್ನು ದುರಸ್ತಿಗೊಳಿಸಿ” ಎಂದರು.
ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಅಡಿಕೆ ಬೆಳೆಗಾರರ ಹಿತಕಾಪಾಡುವ ಪ್ರಯತ್ನಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಮುಖಂಡರಾದ ಧನಂಜಯ ಕಡ್ಲೆಬಾಳು, ಕಲ್ಲೇಶ್, ಸಚಿನ್ ವರ್ಣೇಕರ್ ಹಾಜರಿದ್ದರು.





