ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಕರ್ನಾಟಕದ ಕರಾವಳಿ ಭಾಗದಲ್ಲೂ ವಾಣಿಜ್ಯ ಬಳಕೆಯ LPG ಸಿಲಿಂಡರ್ ಕೊರತೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಈ ಪರಿಸ್ಥಿತಿಯಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೋಟೆಲ್, ರೆಸ್ಟೋರೆಂಟ್, ಕ್ಯಾಂಟೀನ್ ಮತ್ತು ಬೀದಿ ಬದಿ ಆಹಾರ ತಯಾರಿಕಾ ಘಟಕಗಳು ಗಂಭೀರ ಸಂಕಷ್ಟಕ್ಕೆ ಸಿಲುಕಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಳೆದ 2-3 ದಿನಗಳಿಂದ ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ಕಾರ್ಯನಿರ್ವಹಿಸಲು ತೊಂದರೆ ಎದುರಿಸುತ್ತಿವೆ. ಕೆಲವರು ಮೊದಲೇ ಸಿಲಿಂಡರ್ ಸಂಗ್ರಹಿಸಿಕೊಂಡಿದ್ದರಿಂದ ಕೆಲವು ದಿನಗಳವರೆಗೆ ವ್ಯವಹಾರ ನಡೆಸುತ್ತಿದ್ದರೂ, ಮುಂದಿನ ದಿನಗಳಲ್ಲಿ ಹೊಟೇಲ್ಗಳನ್ನು ಬಂದ್ ಮಾಡದೇ ವಿಧಿಯಿಲ್ಲ ಎಂದು ಮಾಲಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಕೆಲವು ಹೋಟೆಲ್ಗಳು ಮೆನುವಿನಲ್ಲಿ ಐಟಂಗಳನ್ನು ಕಡಿತಗೊಳಿಸಿದ್ದರೆ, ಇನ್ನೂ ಕೆಲವು ಮಧ್ಯಾಹ್ನದವರೆಗೆ ಮಾತ್ರ ಸೇವೆ ನೀಡುತ್ತಿರುವುದು ಕಂಡುಬಂದಿದೆ.

ಅನಿಲ ಕೊರತೆ ಕೇವಲ ಹೋಟೆಲ್ ಉದ್ಯಮಕ್ಕಷ್ಟೇ ಸೀಮಿತವಾಗಿಲ್ಲ. ಬಂದರು ಪ್ರದೇಶಗಳಲ್ಲಿ ಮೀನುಗಾರಿಕಾ ಬೋಟುಗಳಿಗೂ ತಟ್ಟಿದೆ. ಬೋಟುಗಳಲ್ಲಿ ಅಡುಗೆಗಾಗಿ ಎಲ್ಪಿಜಿ ಗ್ಯಾಸ್ನ್ನು ಅವಲಂಬಿಸಿರುವ ಸಿಬ್ಬಂದಿ ಇದೀಗ ತಾತ್ಕಾಲಿಕವಾಗಿ ಸೀಮೆಎಣ್ಣೆ ಸ್ಟೌವ್ ಬಳಸುತ್ತಿದ್ದಾರೆ. ಆದರೆ ಅದರ ಬಳಕೆ ಕಷ್ಟಕರವಾಗಿದ್ದು, ಬೆಲೆಯೂ ದುಪ್ಪಟ್ಟಾಗಿದೆ ಎಂದು ಮೀನುಗಾರರು ಹೇಳುತ್ತಿದ್ದಾರೆ.

ಇದೇ ವೇಳೆ ಸೀಗಡಿ, ಅಂಜಲ್, ಮಾಂಜಿ ಹಾಗೂ ಬೊಂಡಾಸ್ ಮೀನುಗಳಿಗೆ ವಿದೇಶಗಳಲ್ಲಿ ಹೆಚ್ಚಿನ ಬೇಡಿಕೆ ಇದ್ದರೂ ಕಂಟೇನರ್ ಹಡಗುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾದ ಕಾರಣ ರಫ್ತು ವಲಯಕ್ಕೂ ತೊಂದರೆ ಎದುರಾಗಿದೆ ಎಂದು ಮೀನುಗಾರರು ತಿಳಿಸಿದ್ದಾರೆ.
ಅಡುಗೆ ಅನಿಲದ ಕೊರತೆಯಿಂದಾಗಿ ಕೆಲವು ಹೋಟೆಲ್ಗಳು ಮತ್ತೆ ಕಟ್ಟಿಗೆ ಒಲೆ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಭಾಗ ಮಾತ್ರವಲ್ಲದೆ ನಗರದಲ್ಲಿಯೂ ಕಟ್ಟಿಗೆ ವ್ಯಾಪಾರ ಚುರುಕುಗೊಂಡಿದ್ದು, ಬೇಡಿಕೆಯಷ್ಟು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ಉಡುಪಿ ಜಿಲ್ಲಾ ಹೋಟೆಲ್ ಮಾಲಿಕರ ಸಂಘದ ವತಿಯಿಂದ ನಗರದಲ್ಲಿ ಸಭೆ ನಡೆಸಿ ವಾಣಿಜ್ಯ ಬಳಕೆಯ ಅನಿಲ ಸಮಾನವಾಗಿ ಹಂಚಿಕೆ ಮಾಡದಿದ್ದರೆ ಜಿಲ್ಲೆಯ ಎಲ್ಲಾ ಹೋಟೆಲ್ಗಳನ್ನು 48 ಗಂಟೆಗಳ ಕಾಲ ಬಂದ್ ಮಾಡುವ ಬಗ್ಗೆ ಸರ್ವಾನುಮತದಿಂದ ನಿರ್ಣಯ ಕೈಗೊಂಡಿದ್ದಾರೆ.
ಸಂಘದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, “ಒಂದು ಹೋಟೆಲ್ ನಡೆಸಲು ಪ್ರತಿದಿನ 3-4 ಸಿಲಿಂಡರ್ ಅಗತ್ಯವಿದೆ. ಆದರೆ ಒಂದು ಸಿಲಿಂಡರ್ ನೀಡುವುದರಿಂದ ವ್ಯವಹಾರ ನಡೆಸುವುದು ಅಸಾಧ್ಯ. ನೀಡುವುದಾದರೆ ಎಲ್ಲರಿಗೂ ಸಮಾನವಾಗಿ ನೀಡಬೇಕು” ಎಂದು ಹೇಳಿದ್ದಾರೆ.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, “ಪಶ್ಚಿಮ ಏಷ್ಯಾದ ಯುದ್ಧಭೀತಿಯಿಂದ ಉಂಟಾದ ಅನಿಲ ವ್ಯತ್ಯಯದ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಒಂದು ವಾರದೊಳಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದೆ ಎಂಬ ವಿಶ್ವಾಸವಿದೆ” ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೃಹ ಬಳಕೆದಾರರಿಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಗಳು, ವಸತಿ ನಿಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಅವಶ್ಯಕ ವಲಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಜಿಲ್ಲೆಯಲ್ಲಿ ಸಾಕಷ್ಟು ಗೃಹ ಬಳಕೆಯ ಅನಿಲದ ದಾಸ್ತಾನು ಇದ್ದು, ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಈದಿನ.ಕಾಮ್ ಜೊತೆ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಶೋಕ್ ಕೊಡವೂರು, “2008ರಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚು ಇದ್ದಾಗಲೂ ಅಡುಗೆ ಅನಿಲವನ್ನು ಕಡಿಮೆ ದರದಲ್ಲಿ ನೀಡಲಾಗುತ್ತಿತ್ತು. ಆದರೆ ಈಗ ಮಧ್ಯಪ್ರಾಚ್ಯದ ಯುದ್ಧವನ್ನು ಕಾರಣವಾಗಿಸಿ ಗ್ಯಾಸ್ ದರವನ್ನು ಹೆಚ್ಚಿಸಲಾಗಿದೆ” ಎಂದು ಆರೋಪಿಸಿದರು.
ಈದಿನ.ಕಾಮ್ ಜೊತೆ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್, “ಯುದ್ಧ ಆರಂಭವಾಗಿ ಕೆಲವೇ ದಿನಗಳಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೆ ಅದು ಕೇಂದ್ರ ಸರ್ಕಾರದ ಸಿದ್ಧತೆಯ ಕೊರತೆಯನ್ನು ತೋರಿಸುತ್ತದೆ” ಎಂದು ಟೀಕಿಸಿದರು. ಕರಾವಳಿ ಭಾಗದ ಲಕ್ಷಾಂತರ ಕುಟುಂಬಗಳು ಹೋಟೆಲ್ ಉದ್ಯಮವನ್ನು ನಂಬಿಕೊಂಡು ಬದುಕುತ್ತಿರುವುದರಿಂದ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಕರ್ನಾಟಕ ಕರಾವಳಿ ಭಾಗದಲ್ಲಿ ಸಾವಿರಾರು ಕುಟುಂಬಗಳು ಹೋಟೆಲ್ ಉದ್ಯಮವನ್ನು ನಂಬಿಕೊಂಡು ಜೀವನ ನಡೆಸುತ್ತಿವೆ. ಅನಿಲ ಕೊರತೆ ಮುಂದುವರಿದರೆ ಹೋಟೆಲ್ಗಳು ಬಂದ್ ಆಗುವ ಸಾಧ್ಯತೆ ಇರುವುದರಿಂದ ಕಾರ್ಮಿಕರು ಹಾಗೂ ಸಾಮಾನ್ಯ ಜನರ ಆಹಾರ ವ್ಯವಸ್ಥೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗುತ್ತಿದೆ. ಕರಾವಳಿಯಲ್ಲಿ ಅಡುಗೆ ಅನಿಲದ ಕೊರತೆ ತಾತ್ಕಾಲಿಕವೇ ಅಥವಾ ದೀರ್ಘಕಾಲೀನ ಸಮಸ್ಯೆಯಾಗಬಹುದೇ ಎಂಬ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ. ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚುತ್ತಿದೆ.

ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.




