ಸ್ವಾತಂತ್ರ್ಯ ದಿನಾಚರಣೆಯಂದು ವಿದ್ಯಾರ್ಥಿಗಳಿಂದ ಸಾವರ್ಕರ್ಗೆ ‘ಜೈಕಾರ’ ಘೋಷಣೆ ಕೂಗಿಸಿದ್ದ ಶಿಕ್ಷಕಿಯ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಿಕ್ಷಕಿ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಜೈಕಾರ ಕೂಗುವ ದೃಶ್ಯವನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಸರ್ಕಾರಿ ಶಾಲೆಯಲ್ಲಿ ಆಗಸ್ಟ್ 15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗಳಿಗೆ ಸಾವರ್ಕರ್ಗೆ ಜೈಕಾರ ಕೂಗಿದ್ದರು. ಇದರಿಂದ ಸಿಟ್ಟಾಗಿದ್ದ ಕೆಲವು ಪೋಷಕರು ಘಟನೆಯನ್ನು ಖಂಡಿಸಿದ್ದರು. ಶಿಕ್ಷಕಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದರು.
ಪೋಷಕರ ಒತ್ತಾಯಕ್ಕೆ ಮಣಿದ ಮುಖ್ಯ ಶಿಕ್ಷಿಕಿ ಪೋಷಕರೊಂದಿಗೆ ಸಭೆ ನಡೆಸಿದ್ದು, ಸಭೆಯಲ್ಲಿ ಶಿಕ್ಷಕಿಯಿಂದ ಕ್ಷಮೆ ಕೇಳಿಸಿದ್ದರು. ಮಾಡಿದ ತಪ್ಪಿಗೆ ಶಿಕ್ಷಕಿ ಕ್ಷಮೆ ಯಾಚಿಸಿದ್ದರು.
ಆದರೆ, ಕಾರ್ಯಕ್ರಮದಲ್ಲಿ ಜೈಕಾರ ಕೂಗುವ ದೃಶ್ಯವನ್ನು ಸ್ಥಳದಲ್ಲಿದ್ದ ಯುವಕನೊಬ್ಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ವಿಡಿಯೋವನ್ನು ಹರಿಬಿಟ್ಟಿರುವುದು ದ್ವೇಷ ಮತ್ತು ಗಲಾಟೆಗೆ ಪ್ರಚೋದನೆ ನೀಡುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯ ಶಿಕ್ಷಕಿ, ವಿಡಿಯೋ ಹರಿಬಿಟ್ಟವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




