ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ರಾಮಕುಂಜದ ವಸಂತ್ ಅಮೀನ್ ಪುತ್ರ ಮೋಕ್ಷ(17) ಗುರುತಿಸಲಾಗಿದೆ. ಬಾಲಕನ ತಂದೆಯೂ ಚೂರಿಯಿಂದ ಇರಿದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಘಟನೆಯ ಬಗ್ಗೆ ಹಲವು ಅನುಮಾನಗಳು ಮೂಡಿವೆ.
ಮನೆಯಲ್ಲಿ ಕೌಟುಂಬಿಕ ಕಲಹ ಸಂಘರ್ಷಕ್ಕೆ ಕಾರಣವಾಗಿರುವ ಬಗ್ಗೆ ಅನುಮಾನ ಇದ್ದು, ತಂದೆ ಮತ್ತು ಮಗನ ಮಧ್ಯೆ ಮನೆಯಲ್ಲಿ ಪರಸ್ಪರ ಜಗಳ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಜಗಳದ ವೇಳೆ ಕೋವಿಯಿಂದ ಗುಂಡು ಹಾರಿದ್ದು, ಗುಂಡು ತಗುಲಿ ಬಾಲಕ ಸಾವನಪ್ಪಿರುವ ಸಾಧ್ಯತೆ ಇದ್ದು, ಬಾಲಕನ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ. ಬಾಲಕನೇ ಶೂಟ್ ಮಾಡಿಕೊಂಡಿದ್ದಾ ಅಥವಾ ತಂದೆಯೇ ಶೂಟ್ ಮಾಡಿದ್ದಾ ಎಂಬ ಬಗ್ಗೆ ಅನುಮಾನವಿದೆ. ಇನ್ನು ಗಲಾಟೆಯಲ್ಲಿ ತಂದೆ ವಸಂತ್ ಅಮೀನ್ ಅವರಿಗೂ ಚೂರಿ ಇರಿತದ ಗಾಯವಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಕೇರಳ ಮೂಲದವರಾಗಿರುವ ವಸಂತ ಅಮೀನ್ ಅವರು ರಾಮಕುಂಜ ಪಾದೆ ಎಂಬಲ್ಲಿ ಜಾಗ ಖರೀದಿಸಿ ಮನೆ ಮಾಡಿ ತಂದೆ, ಮಗ ಜೊತೆಯಾಗಿ ವಾಸವಿದ್ದರು. ಮಂಗಳೂರು ಖಾಸಗಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಯಾಗಿದ್ದ ಮೋಕ್ಷ ಅವರು ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಿದ್ದಾರೆ ಎನ್ನುವುದು ಪೊಲೀಸ್ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಘಟನೆಗೆ ಸಂಬಂಧಿಸಿದಂತೆ ವಸಂತ ಅಮೀನ್ ವಿರುದ್ಧ ಅವರ ಪತ್ನಿ ಜಯಶ್ರೀ ದೂರು ದಾಖಲಿಸಿದ್ದು, ಮಗನನ್ನು ವಸಂತ ಶೂಟ್ ಮಾಡಿ ಕೊಲೆ ಮಾಡಿದ್ದಾರೆಂದು ದೂರು ದಾಖಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಧಾರವಾಡ | ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ಗೆ ಪ್ರೊ.ಮಾಲತಿ ಪಟ್ಟಣಶೆಟ್ಟಿ, ಸತೀಶ್ ಕುಲಕರ್ಣಿ ಆಯ್ಕೆ
ಪತ್ನಿ ಜಯಶ್ರೀ ಪತಿಯೊಂದಿಗೆ ಮನಸ್ತಾಪಗೊಂಡು ಮಂಗಳೂರಿನ ತನ್ನ ತಾಯಿ ಮನೆಯಲ್ಲಿದ್ದರು. ಕಳೆದ ಒಂದು ವರ್ಷದಿಂದ ಮನೆಯಲ್ಲಿ ತಂದೆ ಮತ್ತು ಮಗ ಮಾತ್ರ ವಾಸವಿದ್ದರು ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇಡೀ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸ್ ತನಿಖೆಯ ನಂತರವೇ ನಿಜಾಂಶ ತಿಳಿಯಬೇಕಾಗಿದೆ.





