ದಾಂಡೇಲಿ: ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿರುವ ಜಿಲ್ಲೆಯ 25ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಾಂಡೇಲಿ ನಗರ ಸಂಪೂರ್ಣ ಸಜ್ಜಾಗಿದೆ. ಡಿ. 13ರಿಂದ ಡಿ. 15ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಈ ಸಂಭ್ರಮದ ಸಾಹಿತ್ಯ ಜಾತ್ರೆಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಅಂತಿಮಗೊಳಿಸಲಾಗಿದೆ.
ಹಳೇ ನಗರಸಭೆ ಮೈದಾನದಲ್ಲಿ ವಿಶಾಲವಾದ ಮತ್ತು ಆಕರ್ಷಕವಾದ ಮಂಟಪವನ್ನು ನಿರ್ಮಿಸಲಾಗಿದ್ದು, ನುಡಿ ತೇರು ಎಳೆಯಲು ಸರ್ವ ಸಿದ್ಧತೆಗಳನ್ನು ಮಾಡಲಾಗಿದೆ. ನಗರದ ಪ್ರಮುಖ ರಸ್ತೆಗಳು ಕನ್ನಡ ಧ್ವಜಗಳಿಂದ ಅಲಂಕೃತವಾಗಿ ಕನ್ನಡಮಯ ವಾತಾವರಣ ಸೃಷ್ಟಿಯಾಗಿದೆ.
ಈ ಬಾರಿ ಜಿಲ್ಲೆಯ ಹಿರಿಯ ಸಾಹಿತಿ ಹಾಗೂ ಸಂಘಟಕ ರೋಹಿದಾಸ ನಾಯ್ಕ ಅವರು ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಹಿರಿಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಸಮ್ಮೇಳನಾಧ್ಯಕ್ಷರಾದ ರೋಹಿದಾಸ ನಾಯ್ಕ ಅವರ ಮೆರವಣಿಗೆಯಲ್ಲಿ ನಾಡಿನ 10ಕ್ಕೂ ಹೆಚ್ಚು ಕಲಾತಂಡಗಳು ಭಾಗವಹಿಸಿಲಿವೆ.
ಮೂರು ದಿನಗಳ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು, ಶಾಸಕರು, ಜನಪ್ರತಿನಿಧಿಗಳು, ನಾಡಿನ ಹಿರಿಯ ಸಾಹಿತಿಗಳು, ಹಾಗೂ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದ ಸಂದರ್ಭದಲ್ಲಿ ಒಟ್ಟು 25 ಕನ್ನಡ ಸಾಹಿತ್ಯ ಕೃತಿಗಳನ್ನು ಲೋಕಾರ್ಪಣೆ ಮಾಡಲಾಗುವುದು. ಈ ಹಿಂದಿನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಗೌರವ ಸನ್ಮಾನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 25 ಗಣ್ಯರಿಗೆ ‘ರಜತ ಗೌರವ’ ನೀಡಿ ಗೌರವಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್. ವಾಸರೆ ಅವರು ಮಾಹಿತಿ ನೀಡಿದ್ದಾರೆ.
ನಾಡು-ನುಡಿ, ಭಾಷೆ ಮತ್ತು ನಾಡಿನ ಸಮಗ್ರ ಅಭಿವೃದ್ಧಿಯ ಕುರಿತು ವಿವಿಧ ವಿಷಯಗಳ ಕುರಿತು ವಿಚಾರಗೋಷ್ಠಿಗಳು ಮತ್ತು ಸಂವಾದಗಳು ನಡೆಯಲಿವೆ. ನಾಲ್ಕು ಪ್ರಾಧಿಕಾರಗಳ ಅಧ್ಯಕ್ಷರು ಸಹ ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ನಾಲ್ಕೇ ದಿನಗಳಲ್ಲಿ ಮನೆಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹ 9.95 ಲಕ್ಷ ಮೌಲ್ಯದ ಸೊತ್ತು ವಶ
ಸಮ್ಮೇಳನಾಧ್ಯಕ್ಷರಾದ ರೋಹಿದಾಸ ನಾಯ್ಕ ಅವರು ಆಡಳಿತ, ಸಂಘಟನೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಪರಿಚಿತರು. ಅವರು ಅಬಕಾರಿ ಇಲಾಖೆಯಲ್ಲಿ ಹಿರಿಯ ಉಪ ಆಯುಕ್ತರಾಗಿ ಸೇವೆ ಸಲ್ಲಿಸಿ 2002ರಲ್ಲಿ ನಿವೃತ್ತರಾಗಿದ್ದಾರೆ. ‘ಮಾಸ್ತಾ ಹಾಗೂ ಇತರ ಕಥೆಗಳು’, ‘ಕರೆಯದೆ ಬರುವವರು’, ‘ಕತ್ತಲೆ ದಾರಿ ದೂರ’ ಅವರ ಪ್ರಮುಖ ಕಥಾ ಸಂಕಲನಗಳು. ಇವರ ಪ್ರೇಮದ ಕನಸುಗಳು- ಕವನ ಸಂಕಲನ, ನೀರ ನೆರಳು- ಕಾದಂಬರಿ ಸೇರಿ ಅನೇಕ ವೈಚಾರಿಕ ಕೃತಿಗಳನ್ನು ರಚಿಸಿದ್ದಾರೆ. 2004ರಲ್ಲಿ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸತತ ಮೂರು ಬಾರಿ ಸೇವೆ ಸಲ್ಲಿಸಿದ್ದಾರೆ. ಅವರ ‘ಸುರಂಗ ಚಕ್ರ’ ಕಥೆ ಚಲನಚಿತ್ರವಾಗಿದೆ.
ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರೂ ಆಗಿರುವ ತಹಶೀಲ್ದಾರ್ ಶೈಲೇಶ ಪರಮಾನಂದ ಅವರು, “ಸಮ್ಮೇಳನವನ್ನು ವಿಜೃಂಭಣೆಯಿಂದ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿಯೊಬ್ಬ ಸಾಹಿತ್ಯ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದ್ದಾರೆ.





