ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನದ ಮೇಲೆ ವಕ್ರ ದೃಷ್ಟಿ ಇರಿಸಿದ ಕೆಲವು ಬುದ್ಧಿಜೀವಿಗಳು, ನಮ್ಮ ಹಕ್ಕಿನ ವಿಶೇಷ ಸ್ಥಾನಮಾನಕ್ಕೆ ಚ್ಯುತಿ ತರಲು ರಾಜ್ಯಪಾಲರಿಗೆ ದೂರು ನೀಡುವ ನಿರ್ಣಯ ಬೆಂಗಳೂರಿನಲ್ಲಿ ಸಭೆ ನಡೆಸಿ ತೆಗೆದುಕೊಂಡಿದ್ದು ಖಂಡನೀಯ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಹೇಳಿದ್ದಾರೆ.
ರಾಜ್ಯ ಒಡೆಯುವ ಇಂತಹ ಕೀಳು ಮಟ್ಟದ ಬುದ್ಧಿಜೀವಿಗಳ ನಡೆಯನ್ನು ಕಲ್ಯಾಣ ಕರ್ನಾಟಕದ ಜನ ಸಹಿಸುವದಿಲ್ಲ.371(ಜೆ) ವಿಶೇಷ ಸ್ಥಾನಮಾನದ ಬಗ್ಗೆ ಕೆಣಕಿದರೆ ನಾವು ಸುಮ್ಮನೆ ಕೂರುವುದಿಲ್ಲ. ಸರ್ಕಾರ ಮತ್ತು ರಾಜ್ಯಪಾಲರು ನಮ್ಮ ಅಸ್ತಿತ್ವಕ್ಕೆ ದಕ್ಕೆ ಬರದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
“2013ರವರೆಗೂ ರಾಜ್ಯದ ಒಟ್ಟು ಸರ್ಕಾರಿ ಉದ್ಯೋಗಗಳಲ್ಲಿ ಶೇ 19ರಷ್ಟು ಇರಬೇಕಾದ ನಮ್ಮ ಪಾಲು ಕೇವಲ ಶೇ 9ರಷ್ಟಿದ. 371(ಜೆ) ವಿಶೇಷ ಸ್ಥಾನಮಾನ ಪಡೆದ ನಂತರವೂ ಜನಸಂಖ್ಯೆಗೆ ಅನುಗುಣವಾಗಿ ನಮ್ಮ ಹಕ್ಕಿನ ಪಾಲು ಪಡೆದಿಲ್ಲ. ಅದಾಗಲೇ ಬೆಂಗಳೂರಿನ ಕಲ್ಯಾಣ ಕರ್ನಾಟಕದ ವಿರೋಧಿಗಳು ವಿಶೇಷ ಸ್ಥಾನಮಾನದ ಬಗ್ಗೆ ಅಸೂಯೆ ಪಡುತ್ತಿದ್ದಾರೆ” ಎಂದಿದ್ದಾರೆ.
“ಹಿಂದುಳಿದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆಶಾಕಿರಣವಾದ 371(ಜೆ) ತಿದ್ದುಪಡಿಯಿಂದ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳೇ ರಾಜ್ಯದ ಬಹುಪಾಲು ಹುದ್ದೆಗಳು ಕಬಳಿಸುತ್ತಿದ್ದಾರೆ. ಇದರಿಂದ ಉಳಿದ 24 ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ರಾಜ್ಯದ ಜನರಿಗೆ ತಪ್ಪು ಸಂದೇಶ ಕೊಡುತ್ತಿದ್ದಾರೆ. ಇವರಿಗೆ ಅಖಂಡ ಕರ್ನಾಟಕ ಮತ್ತು ಪ್ರಾದೇಶಿಕ ಅಸಮಾನತೆ ನಿವಾರಣೆ ಕಿಂಚಿತ್ತೂ ಅಭಿಮಾನ ಇಲ್ಲದಿರುವುದು ಎದ್ದು ಕಾಣುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಕಲ್ಯಾಣ ಕರ್ನಾಟಕಕ್ಕೆ ನಿರ್ಲಕ್ಷ್ಯ ಮತ್ತು ಮಲತಾಯಿ ಧೋರಣೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಆಗುತ್ತಿದೆ. ಹೀಗಿರುವಾಗ ಹಿಂದುಳಿದ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ವಿರೋಧಿ ಮನೋಭಾವದ ಬುದ್ಧಿಜೀವಿಗಳಿಗೆ ಅಖಂಡ ಕರ್ನಾಟಕದ ಅತ್ಯಂತ ಹಿಂದುಳಿದ ಕಲ್ಯಾಣ ಕರ್ನಾಟಕ ರಚನಾತ್ಮಕ ಅಭಿವೃದ್ಧಿ ಮತ್ತು ಪ್ರಾದೇಶಿಕ ಅಸಮಾನತೆ ನಿವಾರಣೆ ಆಗುವುದು ಬೇಕಾಗಿಲ್ಲವೆ? ಕಲ್ಯಾಣ ಕರ್ನಾಟಕ ಅಖಂಡ ಕರ್ನಾಟಕದ ಭಾಗ ಅಲ್ಲವೇ” ಎಂದು ಪ್ರಶ್ನಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರವೇ ಬರಲಿ, ನೆರೆಯೇ ಇರಲಿ, ಭರವಸೆಗಳಿಗೆ ಬರವಿಲ್ಲ
ಈ ಗಂಭೀರ ವಿಷಯದ ಬಗ್ಗೆ ಚರ್ಚಿಸಲು ಮೇ 26 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಹಿಂದಿ ಪ್ರಚಾರ ಸಭಾಂಗಣದಲ್ಲಿ ದುಂಡು ಮೇಜಿನ ಸಭೆ ಆಯೋಜಿಸಲಾಗಿದೆ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





