ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೀಳಾಗಿ ಮಾತನಾಡಿ ಅಪಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಲು ಆಗ್ರಹಿಸಿ ನಗರದಲ್ಲಿ ಶುಕ್ರವಾರ ಕರ್ನಾಟಕ ಪರ ಸಂಘಟನೆಗಳ ಒಕ್ಕೂಟ ಕಲ್ಯಾಣ ಕರ್ನಾಟಕ ವಿಭಾಗದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೀದರ್ ನಗರದ ಡಾ.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ರಾಷ್ಟ್ರ ಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.
ಸಂವಿಧಾನದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಮಸ್ತ ಭಾರತೀಯರಿಗೆ ಸಮಾನತೆ, ಸ್ವಾಭಿಮಾನದ ಬದುಕು ಕೊಟ್ಟಿದ್ದಾರೆ. ಯಾವುದೇ ಜಾತಿ, ಪಂಥ, ಧರ್ಮ, ಭಾಷೆ, ಪ್ರದೇಶ, ರಾಜ್ಯ ಎನ್ನದೆ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಅಂತಹ ಮಹಾನ್ ವ್ಯಕ್ತಿ ಅಂಬೇಡ್ಕರ್ ಅವರನ್ನು ಅಮಿತ್ ಶಾ ಅಪಮಾನ ಮಾಡಿರುವುದು ಖಂಡನೀಯ. ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು. ಇಲ್ಲದಿದ್ದರೆ ರಾಷ್ಟ್ರಪತಿ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕುʼ ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ : ತನಿಖೆ ಆರಂಭಿಸಿದ ಸಿಐಡಿ ಅಧಿಕಾರಿಗಳು
ಪ್ರತಿಭಟನೆಯಲ್ಲಿ ವಿಭಾಗೀಯ ಅಧ್ಯಕ್ಷ ಪ್ರೇಮಕುಮಾರ ಕಾಂಬಳೆ, ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಸಾಯಿ ಸಿಂಧೆ, ಜಿಲ್ಲಾ ಕಾರ್ಯಾಧ್ಯಕ್ಷ ರಾಜಶೇಖರ ಚೌಳಿ, ಉಪಾಧ್ಯಕ್ಷ ಮಹೇಂದ್ರಕುಮಾರ ಹೊಸಮನಿ, ವೀರ ಕನ್ನಡಿಗರ ಸೇನೆ ರಾಜ್ಯ ಸಂಚಾಲಕ ಡಾ.ಸುಬ್ಬಣ್ಣ ಕರಕನಳ್ಳಿ ಜಿಲ್ಲಾಧ್ಯಕ್ಷ ಅವಿನಾಶ ಶಾಹಗಂಜ್, ಉಪಾಧ್ಯಕ್ಷ ಬಸವರಾಜ ಜಡಗೆ, ಪ್ರಧಾನ ಕಾರ್ಯದರ್ಶಿ ಸಂದೀಪ ಚಾಂಬೋಳ, ಅಂಬಾದಾಸ ಸೈನೆ, ಶಶಿಧರ ಜ್ಯೋತಿ, ನಗರ ಅಧ್ಯಕ್ಷ ಭಗವಾನ ಯಾದವ, ತಾಲ್ಲೂಕಾಧ್ಯಕ್ಷ ರಾಹುಲ ಬೌದ್ಧೆ, ರಾಕೇಶ ಭಂಗ್ಲೆ, ಗೌತಮ ಚಿಮಕೊಡ್, ರವಿಕುಮಾರ ಮೇತ್ರೆ, ಸೂರ್ಯಕಾಂತ ಸಾಧುರೆ, ವಿಜಯಕುಮಾರ ಜೈಭೀಮ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು.





