ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯುವ ಹೆಸರಿನಲ್ಲಿ ರಾಜ್ಯದ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಯನ್ನು ಖಂಡಿಸಿ ಅಖಿಲ ಭಾರತ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್ಓ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ಸರ್ಕಾರಿ ಶಾಲೆಗಳನ್ನು ಮುಚ್ಚಿ ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ತಳ್ಳುತ್ತಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಕೆಪಿಎಸ್ ಮ್ಯಾಗ್ನೆಟ್ ಶಾಲೆ ತೆರೆಯುವ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಬೇಕು. ಇದರ ವಿರುದ್ಧ ಬಲಿಷ್ಠ ಹೋರಾಟ ಬೆಳೆಸಬೇಕು ಎಂದು ಎಐಡಿಎಸ್ಓ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ ದಾವಣಗೆರೆಯ ಆಕ್ರೋಶ ವ್ಯಕ್ತಪಡಿಸಿದರು
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ,
“ಈ ಶೈಕ್ಷಣಿಕ ವರ್ಷದ ಆರಂಭದಲ್ಲಿ ‘ಹಬ್ ಅಂಡ್ ಸ್ಪೋಕ್’ ಹೆಸರಿನಲ್ಲಿ 6800ಕ್ಕೂ ಅಧಿಕ ಶಾಲೆಗಳನ್ನು ಮುಚ್ಚಲು ಸರ್ಕಾರವು ಮುಂದಾಗಿತ್ತು. ಅದನ್ನು ವಿರೋಧಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು 50 ಲಕ್ಷ ಸಹಿ ಸಂಗ್ರಹ ಅಭಿಯಾನ ನಡೆಸಿದರು. ತತ್ಪರಿಣಾಮ, ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚುವುದಿಲ್ಲ ಎಂದು ಶಿಕ್ಷಣ ಮಂತ್ರಿಗಳು ರಾಜ್ಯದ ಜನತೆಗೆ ಮಾತು ಕೊಟ್ಟಿದ್ದರು. ಆದರೆ ಈಗ ಮತ್ತೆ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40,000ಕ್ಕೂ ಅಧಿಕ ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರವು ರಾಜ್ಯದ ಜನತೆಗೆ ನಂಬಿಕೆ ದ್ರೋಹ ಎಸಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕೆಪಿಎಸ್ ಶಾಲೆಗೆ ನಮ್ಮ ವಿರೋಧವಿಲ್ಲ ಆದರೆ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಸುತ್ತಲಿನ ಶಾಲೆಗಳನ್ನು ಒಂದೇ ಶಾಲೆಯಲ್ಲಿ ವಿಲೀನಗೊಳಿಸುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಹಳ್ಳಿ ಹಾಗೂ ಸಮುದಾಯದ ನಡುವೆ ಇರುವ ಶಾಲೆಗಳನ್ನು ಮುಚ್ಚಿ ಗ್ರಾಮ ಪಂಚಾಯಿತಿಗೆ ಒಂದರಂತೆ ಕೇವಲ 6 ಸಾವಿರ ಶಾಲೆ ಮಾಡಲು ಸರ್ಕಾರವು ಮುಂದಾಗಿದೆ. ಈ ಕುರಿತು ಹೊರಡಿಸಿರುವ ಸುತ್ತೋಲೆಯಲ್ಲಿ, ಸರ್ಕಾರಿ ಶಾಲೆಗಳಲ್ಲಿ ಗಣನೀಯವಾಗಿ ದಾಖಲಾತಿ ಕುಸಿಯುತ್ತಿದೆ ಎಂಬುದನ್ನು ಹೇಳುತ್ತಿದೆ. ಆದರೆ ಶಾಲೆಗಳನ್ನು ಮಕ್ಕಳಿಂದ ದೂರ ಮಾಡಿ ದಾಖಲಾತಿ ಹೆಚ್ಚಿಸಲು ಸಾಧ್ಯವಿಲ್ಲ! ಬದಲಾಗಿ ಬಡ ರೈತ-ಕಾರ್ಮಿಕರ ಮಕ್ಕಳನ್ನು ಶಿಕ್ಷಣದಿಂದ ಶಾಶ್ವತವಾಗಿ ದೂರ ತಳ್ಳುವುದೇ ಸರ್ಕಾರದ ಹುನ್ನಾರ” ಎಂದು ಸರ್ಕಾರವನ್ನು ಖಂಡಿಸಿದರು.

“ಮೊದಲ ಹಂತದಲ್ಲಿ 700 ಮ್ಯಾಗ್ನೆಟ್ ಶಾಲೆಗಳನ್ನು ಗುರುತಿಸಿ ಅವುಗಳ ಸುತ್ತ ಇರುವ ಸಾವಿರಾರು ಶಾಲೆಗಳನ್ನು ಮುಚ್ಚಲು ತಯಾರಿ ನಡೆಯುತ್ತಿದೆ. ಈಗಾಗಲೇ ರಾಮನಗರದ ಚನ್ನಪಟ್ಟಣ ತಾಲೂಕಿನ ಹೊಂಗನೂರು ಸರ್ಕಾರಿ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಅಲ್ಲಿಂದ 6 ಕಿಮೀ ವ್ಯಾಪ್ತಿಯ 7 ಶಾಲೆಗಳನ್ನು ತುರ್ತಾಗಿ ವಿಲೀನಗೊಳಿಸಲು ಆದೇಶ ನೀಡಲಾಗಿದೆ. ಇದೇ ರೀತಿ, ದಾವಣಗೆರೆಯ ಕಕ್ಕರಗೊಳ್ಳ, ಹದಡಿ, ಲೋಕಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು, ಚನ್ನಗಿರಿಯ ನಲ್ಲೂರು, ಹಿರೇಕೋಗಲೂರು ಪದವಿಪೂರ್ವ ಕಾಲೇಜುಗಳು, ಹೊನ್ನಾಳಿಯ ಸವಳಂಗ ಪದವಿಪೂರ್ವ ಕಾಲೇಜು, ಗುತ್ತೂರು ಹಾಗೂ ಯರಚಿಕ್ಕನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಗಳು, ಜಗಳೂರು ಹಾಗೂ ಹರಿಹರದ ಶಾಲೆಗಳು ಸೇರದಂತೆ ಜಿಲ್ಲೆಯಾದ್ಯಂತ 20 ಮ್ಯಾಗ್ನೆಟ್ ಶಾಲೆಗಳನ್ನು ಪಟ್ಟಿ ಮಾಡಿದ್ದಾರೆ. ಸುತ್ತ ಇರುವ ನೂರಾರು ಶಾಲೆಗಳನ್ನು ಮುಚ್ಚಲಾಗುತ್ತದೆ. ಈ ಯೋಜನೆಗಾಗಿ ಏಶಿಯನ್ ಡೆವಲಪ್ಮೆಂಟ್ ಬ್ಯಾಂಕಿನಿಂದ 2500 ಕೋಟಿ ಸಾಲ ಪಡೆದಿರುವ ಸರ್ಕಾರವು, ಇನ್ನೂ 10,000 ಕೋಟಿ ಸಾಲ ಪಡೆಯುವ ಉದ್ದೇಶ ಹೊಂದಿದೆ. ಸ್ಪಷ್ಟವಾಗಿ ಕಾರ್ಪೊರೇಟ್ ಹಿತಾಸಕ್ತಿ ಕಾಪಾಡಲು ಸರ್ಕಾರವು ಕೆಲಸ ಮಾಡುತ್ತಿದೆ” ಎಂದು ಹೇಳಿದರು.
ಜಿಲ್ಲಾ ಕಾರ್ಯದರ್ಶಿ ಸುಮನ್ ಟಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, “ನಮ್ಮ ದೇಶದ ನವೋದಯ ಚಳುವಳಿಯ ಹರಿಕಾರರಾದ ಈಶ್ವರ ಚಂದ್ರ ವಿದ್ಯಾಸಾಗರ್, ಮಹಾತ್ಮ ಜ್ಯೋತಿಬಾ ಪುಲೆ ಹಾಗೂ ಕ್ರಾಂತಿಕಾರಿಗಳಾದ ಭಗತ್ ಸಿಂಗ್- ನೇತಾಜಿ ಮುಂತಾದ ಮಹಾನ್ ವ್ಯಕ್ತಿಗಳ ಆಶಯಗಳಿಗೆ ವಿರುದ್ಧವಾಗಿ ಸರ್ಕಾರವು ಶಾಲೆಗಳನ್ನು ಮುಚ್ಚುತ್ತಿದೆ. ಇದರ ವಿರುದ್ಧ ವಿದ್ಯಾರ್ಥಿಗಳು ಪಾಲಕರು ಶಿಕ್ಷಕರು ಹಾಗೂ ಶಿಕ್ಷಣ ಪ್ರೇಮಿ ಜನತೆ ಬಲಿಷ್ಠ ಹೋರಾಟವನ್ನು ಕಟ್ಟಲು ಮುಂದಾಗಬೇಕು” ಎಂದು ಕರೆ ನೀಡಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಸಂಘಟನಾಕಾರರಾದ ಗಂಗಾಧರ್ ಎಚ್. ಡಿ. ಮಾತನಾಡಿದರು. ಪ್ರತಿಭಟನೆಯಲ್ಲಿ ಸಂಘಟನಾಕಾರರಾದ ಪ್ರಿಯಾಂಕ, ವಿದ್ಯಾರ್ಥಿಗಳಾದ ಸಿದ್ದಿಕ್ ಅವರಗೆರೆ, ವಿಕಾಸ್ ಎಂ ಆರ್, ಬೇಬಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಂತರ, ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.





