ಬ್ಲಾಕ್ ಸ್ಪಾಟ್ ಗುಂಡಿಗಳನ್ನು ಮುಚ್ಚಿ ದಾವಣಗೆರೆ ನಗರದಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು “ಪೊಲೀಸ್ ಇಲಾಖೆ ಗುರುತಿಸಿರುವ ಜಿಲ್ಲೆಯಲ್ಲಿರುವ ಅಪಘಾತ ಮತ್ತು ಸೂಕ್ಷ್ಮ ವಲಯಗಳನ್ನು ಅಭಿವೃದ್ಧಿಪಡಿಸಬೇಕು. ಅಗತ್ಯ ಸಂಚಾರಿ ಹಾಗೂ ಸೂಚನಾ ಫಲಕ ಅಳವಡಿಸಬೇಕು. ಇತ್ತೀಚೆಗೆ ಚನ್ನಗಿರಿ ವ್ಯಾಪ್ತಿಯಲ್ಲಿ ರಸ್ತೆ ಅಪಘಾತದಲ್ಲಿ 4 ಜನ ಸಾವನ್ನಪ್ಪಿದ್ದಾರೆ. ಅದರಲ್ಲೂ ಮಹಿಳೆಯರೇ ಹೆಚ್ಚು ತೊಂದರೆಗೊಳಗಾಗುತ್ತಿದ್ದಾರೆ. ಆದುದರಿಂದ ತ್ವರಿತವಾಗಿ ರಸ್ತೆ ದುರಸ್ಥಿಗೊಳಿಸಬೇಕು. ರಸ್ತೆ ಬ್ಲಾಕ್ ಸ್ಪಾಟ್ಗಳನ್ನು ಮುಚ್ಚಬೇಕಾದರೆ ಗುಣಮಟ್ಟ ಕಾಯ್ದುಕೊಳ್ಳಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ದಾವಣಗೆರೆ, ಚನ್ನಗಿರಿ, ಹರಿಹರ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ ಅಪಘಾತವಲಯಗಳನ್ನು ಗುರುತಿಸಿ ಅಪಘಾತ ಸಂಭವಿಸದಂತೆ ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲಿಯೇ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಆರಂಭಿಸಲಾಗುವುದು” ಎಂದು ಸಭೆಗೆ ಮಾಹಿತಿ ನೀಡಿದರು.
“ಪಾಲಿಕೆ ವ್ಯಾಪ್ತಿಯಲ್ಲಿ ಹಾದು ಹೋಗಿರುವ ಹೊಸ ಕುಂದುವಾಡ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ – 48 ಅಂಡರ್ ಪಾಸ್ ಕಾಮಗಾರಿ ಹಾಗೂ ದಾವಣಗೆರೆ- ಚನ್ನಗಿರಿ ಹೊರ ವಲಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ -369 ಕಾಮಗಾರಿ ವಿಳಂಭವಾಗುತ್ತಿದ್ದು, ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಆದುದರಿಂದ ರಸ್ತೆಯ ಇಕ್ಕೆಲಗಳ ಸರ್ವೀಸ್ ರಸ್ತೆ ಕಾಮಗಾರಿ, ತ್ವರಿತವಾಗಿ ಪೂರ್ಣಗೊಳಿಸಬೇಕು. ರಸ್ತೆಯ ಬದಿಯಲ್ಲಿ ಬೀದಿ ದೀಪಗಳಿಲ್ಲ. ಬೀದಿ ದೀಪ ಅಳವಡಿಸಿ ಅಲ್ಲಿನ ಸಾರ್ವಜನಿಕರಿಗೆ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು. ಆನಗೋಡು ಗ್ರಾಮದ ಬಳಿ ಸರ್ವೀಸ್ ರಸ್ತೆಯ ಪಕ್ಕದಲ್ಲಿಯೇ ಡಾಬಾ, ಹೊಟೇಲ್ಗಳು ಇರುವುದರಿಂದ ಏಕಾಏಕಿ ತಿರುವು ಪಡೆದುಕೊಳ್ಳುವ ಕಾರಣದಿಂದ ಅಪಘಾತ ಪ್ರಕರಣ ಹೆಚ್ಚುತ್ತಿವೆ. ಅವುಗಳನ್ನು ತೆರವುಗೊಳಿಸಬೇಕು. ಹಾಗೆಯೇ ಅಂಡರ್ ಪಾಸ್ ರಸ್ತೆ ಬದಿ ವ್ಯಾಪಾರಿಗಳು ನಿರ್ಮಿಸಿಕೊಂಡಿರುವ ಗೂಡಂಗಡಿಗಳನ್ನು ನಿಯಮಾನುಸಾರ ಅಳತೆ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.
“ಇತ್ತೀಚೆಗೆ ಅಪಘಾತ ಮತ್ತು ದರೋಡೆ ಪ್ರಕರಣ ಹೆಚ್ಚಾಗುತ್ತಿವೆ. ಇಂತಹ ಕೃತ್ಯವೆಸಗಿ ತಲೆ ಮರೆಸಿಕೊಳ್ಳುತ್ತಿದ್ದಾರೆ. ಹಾಗಾಗಿ ಹೆದ್ದಾರಿ ಪ್ರಾಧಿಕಾರದ ಟೋಲ್ಗಳಲ್ಲಿ ಎಎನ್ಪಿಆರ್ ನಂಬರ್ ಪ್ಲೇಟ್ ದಾಖಲು ಮಾಡಿಕೊಳ್ಳುವ ಸಿಸಿಟಿವಿ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು” ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆ: ಗಣತಿದಾರರ ವಿರೋಧ
ಈ ವೇಳೆ ಡಿಹೆಚ್ಓ ಡಾ.ಷಣ್ಮುಖಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್, ಡಿವೈಎಸ್ಪಿ ಶರಣ ಬಸವೇಶ್ವರ, ಲೋಕೋಪಯೋಗಿ ಇಲಾಖೆ ತಾಂತ್ರಿಕ ಸಹಾಯಕ ಮಲ್ಲೇಶಪ್ಪ, ಕೆಎಸ್ಆರ್ಟಿಸಿ ಮಾರ್ಗ ನಿಯಂತ್ರಣಾಧಿಕಾರಿ ಫಕ್ರುದ್ದೀನ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.





