ಯುಜಿಸಿ ನಿಯಮ, ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲದಿಂದ ಪದವಿ ವಿದ್ಯಾರ್ಥಿಗಳು ಶೈಕ್ಷಣಿಕ ಗೊಂದಲವನ್ನು ಎದುರಿಸುತ್ತಿದ್ದು, ಇದನ್ನು ಬಗೆಹರಿಸಲು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಸೆಪ್ಟೆಂಬರ್ 27ರಂದು ನಡೆಯುತ್ತಿರುವ ಪದವಿ ಕಾಲೇಜುಗಳ ಸ್ವಯಂ ಪ್ರೇರಿತ ತರಗತಿ ಬಹಿಷ್ಕಾರದ ಕುರಿತು ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವೆಡೆ ವಿದ್ಯಾರ್ಥಿಗಳ ನಡುವೆ ಪ್ರಚಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷರಾದ ಪೂಜಾ ನಂದಿಹಳ್ಳಿ ಮಾತನಾಡಿ “ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಉಪನ್ಯಾಸಕರ ನೇಮಕದಲ್ಲಿ ಆಗಿರುವ ಗೊಂದಲದಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಇದರೊಂದಿಗೆ ಯುಜಿಸಿ ನಿಯಮಗಳು, ಕೋರ್ಟಿನಲ್ಲಿ ನಡೆಯುತ್ತಿರುವ ಮೊಕದ್ದಮೆಗಳು ಸೇರಿ ವಿದ್ಯಾರ್ಥಿಗಳು ಶೈಕ್ಷಣಿಕ ನಷ್ಟ ಅನುಭವಿಸುವಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ದಿನಗಳು ಕಳೆಯುತ್ತಾ ಇದ್ದರೂ ಈ ಸಮಸ್ಯೆ ಪರಿಹಾರವಾಗುವ ಯಾವುದೇ ಸೂಚನೆ ಗೋಚರಿಸುತ್ತಿಲ್ಲ. ಈ ಹಿಂದೆಯೇ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಕೂಡಲೇ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳು ಎದುರಿಸುತ್ತಿರುವ ಶೈಕ್ಷಣಿಕ ಬಿಕ್ಕಟ್ಟನ್ನು ಪರಿಹರಿಸಲು ರಾಜ್ಯದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27ರಂದು ರಾಜ್ಯಾದ್ಯಂತ ಪದವಿ ಕಾಲೇಜುಗಳ ತರಗತಿ ಬಹಿಷ್ಕಾರ ನಡೆಸಲಾಗುತ್ತಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಲಿತ ವಾಣಿಜ್ಯ, ಕೈಗಾರಿಕೋದ್ಯಮಿಗಳ ಸಂಘದಿಂದ ಉದ್ಯಮ ಅಭಿವೃದ್ಧಿ ಕಾರ್ಯಕ್ರಮ
ವಿದ್ಯಾರ್ಥಿಗಳಿಗೆ ರಾಜ್ಯವಾಪಿ ನಡೆಯುತ್ತಿರುವ ಪದವಿ ಕಾಲೇಜುಗಳ ತರಗತಿ ಬಹಿಷ್ಕಾರದಲ್ಲಿ ಭಾಗವಹಿಸಿ ಐಕ್ಯತೆಯನ್ನು ಪ್ರದರ್ಶಿಸಲು ಕರೆ ನೀಡಲಾಯಿತು. ಈ ವೇಳೆ ಕಾರ್ಯದರ್ಶಿ ಸುಮನ್, ಗಂಗಾಧರ, ಮಂಜುನಾಥ ವಿ ಎಚ್,ಮಂಜುನಾಥ,ನಿರಂಜನ ಸೇರಿದಂತೆ ಹಲವರು ಭಾಗವಹಿಸಿದ್ದರು.





