“ರಾಜ್ಯದಲ್ಲಿ ದಿನದಿಂದ ದಿನಕ್ಕೆ ಜಾತಿ ವೈಷಮ್ಯ ಹೆಚ್ಚಾಗುತ್ತಿದೆ. ಇದೊಂದು ಆತಂಕಕಾರಿ ಬೆಳವಣಿಗೆ. ಇದೊಂದು ಜಾತಿ ಭಯೋತ್ಪಾದನೆ (Caste Terrorism). ಮರ್ಯಾದಾ ಹತ್ಯೆ, ಜಾತಿ ವೈಷಮ್ಮ ವಿರುದ್ಧ ಕಠಿಣ ಕಾಯ್ದೆ ರೂಪಿಸಬೇಕು” ಎಂದು ಆಗ್ರಹಿಸಿ ಮಾನವ ಬಂಧುತ್ವ ವೇದಿಕೆ ಮತ್ತು ಹರಿಹರ ಪ್ರೊ. ಬಿ ಕೃಷ್ಣಪ್ಪ ಟ್ರಸ್ಟ್, ವಿಶ್ವಮಾನವ ಮಂಟಪ ಟ್ರಸ್ಟ್ ಮುಖಂಡರು ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು “ಜಾತಿ ವಿನಾಶಕ್ಕೆ ಅಥವಾ ಜಾತಿ ಆಧಾರಿತ ತಾರತಮ್ಮ, ಹಿಂಸೆಗಳಿಗೆ ಅಂತರ್ಜಾತಿ ವಿವಾಹಗಳು ಪರಿಹಾರ ಎಂಬುದನ್ನು ಮಹಾಮಾನವತಾವಾದಿಗಳಾದ ಬಸವಣ್ಣ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಕರಾರುವಾಕ್ಕಾಗಿ ಪ್ರತಿಪಾದಿಸಿದ್ದರು. ಮತ್ತು ಅದನ್ನು ಅನುಷ್ಠಾನಗೊಳಿಸುವಲ್ಲಿ ತಮ್ಮ ಬದುಕನ್ನು ಸಮರ್ಪಿಸಿಕೊಂಡವರು. ವಿಪರ್ಯಾಸವೆಂದರೆ ಅಂತರ್ ಜಾತಿ ವಿವಾಹಗಳನ್ನು ಒಪ್ಪಲಾರದ ಜಾತೀಯತೆಯ ರೋಗಪೀಡಿತ ಮನಃಸ್ಥಿತಿ ವಿಜ್ಞಾನ ಯುಗದಲ್ಲೂ ಮುಂದುವರೆದಿದೆ ಮತ್ತು ಹೆಚ್ಚಾಗುತ್ತಲೇ ಇದೆ. ಇದು ಸಮ ಸಮಾಜ ನಿರ್ಮಾಣದ ಎಲ್ಲಾ ಬಗೆಯ ಮಾನವೀಯ ಪ್ರಯತ್ನಗಳನ್ನು ಹತ್ತಿಕ್ಕುತ್ತವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ಇಂತಹ ಮನಸ್ಥಿತಿ ಎಷ್ಟೊಂದು ಕ್ರೌರ್ಯವನ್ನು ತೋರುತ್ತಿದೆ ಎಂದರೆ ಅಂತರ್ಜಾತಿ ಮದುವೆಯಾದ ಮಕ್ಕಳನ್ನು ತಮ್ಮ ಪೋಷಕರೇ ಕಾನೂನಿನ ಭಯವಿಲ್ಲದೆ ಮರ್ಯಾದೆಯ ಹೆಸರಲ್ಲಿ ನಿರ್ದಯವಾಗಿ ಹತ್ಯೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದಕ್ಕೆ “ಮರ್ಯಾದಾ ಹತ್ಯೆ” ಎಂಬ ಹೆಸರಿನಿಂದಲೂ ಕರೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಾತಿವಾದಿಗಳು ಇಂತಹ ಕ್ರೌರ್ಯವನ್ನೇ ಸಾಮಾಜಿಕ ಘನತೆ/ ಮೌಲ್ಯ ಎಂಬಂತೆ ಪ್ರತಿಷ್ಠಾಪಿಸುವ ಅಪಾಯವೂ ಇದೆ. ಈ ಪಿಡುಗನ್ನು ಬುಡಸಮೇತ ಕಿತ್ತುಹಾಕಲು ಸರ್ಕಾರ ಇಚ್ಛಾಶಕ್ತಿ ತೋರಬೇಕು” ಎಂದು ಒತ್ತಾಯಿಸಿದರು.
“ಪ್ರೇಮಿಗಳ ಅಥವಾ ದಂಪತಿಗಳ ಮೇಲೆ, ಅವರ ಕುಟುಂಬದ ಮೇಲೆ ಜಾತಿ ದ್ವೇಷದಿಂದ ನಡೆಯುವ ಹಲ್ಲೆ, ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು “ಘೋರ ಅಪರಾಧ’ ಎಂದು ಪರಿಗಣಿಸಬೇಕು. ಸರ್ಕಾರ ಇಂತಹ ಘೋರ ಅಪರಾಧಗಳನ್ನು ನಿಗ್ರಹಿಸಲು ಉಗ್ರ ಕಾನೂನನ್ನು ರೂಪಿಸಿ ಜಾರಿಗೆ ತರಬೇಕು” ಎಂದು ಆಗ್ರಹಿಸಿದರು.
“ಮೊನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಾ ಹತ್ಯೆ ಹೆಸರಿನ ಜಾತಿ ಭಯೋತ್ಪಾದನೆಗೆ (CASTE TERRORISM) ಬಲಿಯಾದ “ಮಾನ್ಯ”ಳ ಹೆಸರಲ್ಲಿ ಉಗ್ರಶಿಕ್ಷೆಯ ಕಾನೂನು ರೂಪಿಸಬೇಕಾಗಿದೆ. ಈ ಉಗ್ರ ಶಿಕ್ಷೆಯ ಕಾಯ್ದೆಗೆ “ಮಾನ್ಯ” ಹೆಸರಿಡುವುದು. ಇದುವರೆಗೂ ಈ ರಾಜ್ಯದಲ್ಲಿ ಮರ್ಯಾದ ಹತ್ಯೆ ಗೆ ಬಲಿಯಾದ ಜೀವಗಳನ್ನು ಪ್ರತಿನಿಧಿಸುವಂತಾಗಲಿ” ಎಂದು ಅಭಿಪ್ರಾಯಪಟ್ಟರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ ಜಿಲ್ಲಾ ಉಪ ವಿಭಾಗಾಧಿಕಾರಿಗಳ ಕಚೇರಿ ಎದುರು ಅನೈರ್ಮಲ್ಯ; ಕುಡುಕರ ತಾಣವಾಗಿ ಬದಲಾದ ಅಂಗಳ
ಸುದ್ದಿಗೋಷ್ಠಿಯಲ್ಲಿ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಪ್ರೊ ಎಬಿ ರಾಮಚಂದ್ರಪ್ಪ, ಪ್ರೊ. ಬಿ ಕೃಷ್ಣಪ್ಪ ಟ್ರಸ್ಟಿನ ರುದ್ರಪ್ಪ ಹನಗವಾಡಿ, ವಿಶ್ವಮಾನವ ಸಂಸ್ಥೆಯ ರುದ್ರಮುನಿ ಆವರಗೆರೆ, ಪ್ರೊ. ಮಂಜಣ್ಣ, ಪಕ್ಕೀರೇಶ್, ಶಿವಕುಮಾರ್, ರುದ್ರೇಗೌಡ ಸೇರಿದಂತೆ ಇತರ ಮುಖಂಡರು ಹಾಜರಿದ್ದರು.





