ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದ ಸೌಜನ್ಯ ಪ್ರಕರಣ ತಲೆ ತಗ್ಗಿಸುವಂತಹ ಘಟನೆ. ಅತ್ಯಾಚಾರ ಮಾಡಿದ ಪಾಪಿಗಳನ್ನ ಇನ್ನೂ ನ್ಯಾಯದ ಕಟಕಟೆಗೆ ತರಲಾಗಿಲ್ಲ ಎಂದು ಒಡನಾಡಿಯ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಸ್ಟಾನ್ಲಿ ಅವರು ಆರೋಪಿಸಿದ್ದಾರೆ.
ಚಿತ್ರದುರ್ಗದ ಮುರುಘಾಶ್ರೀ ಪ್ರಕರಣ ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯು ಇದೀಗ ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಹೋರಾಟಕ್ಕೆ ಇಳಿದಿದೆ. ರಾಜ್ಯಾದ್ಯಂತ ಸೌಜನ್ಯ ಪರವಾಗಿ ನ್ಯಾಯದ ಹೋರಾಟ ನಡೆಸಲು ಒಡನಾಡಿ ಸಂಸ್ಥೆ ಮುಂದಾಗಿದ್ದು, ಈ ಸಂಬಂಧ ಒಡನಾಡಿಯ ಮುಖಂಡರು ಸೌಜನ್ಯ ಪರ ಹೋರಾಟಗಾರರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಸೋಮವಾರ ಸೌಜನ್ಯ ಕುಟುಂಬಸ್ಥರು ಮತ್ತು ಹೋರಾಟಗಾರರನ್ನು ಭೇಟಿ ಮಾಡಿದ ಬಳಿಕ ಸ್ಟಾನ್ಲಿ ಮಾತನಾಡಿದರು. “ಸೌಜನ್ಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಕುಟುಂಬಕ್ಕೆ ನ್ಯಾಯಕೊಡಿಸಲು ಒಡನಾಡಿ ಸಂಸ್ಥೆ ಹೋರಾಟಕ್ಕೆ ಇಳಿದಿದೆ” ಎಂದು ಹೇಳಿದರು.
“ಸೌಜನ್ಯ ಪ್ರಕರಣದ ಆರೋಪಿಗಳನ್ನು ಗುರುತಿಸಲು ದೇಶದ ಕಾನೂನಿಗೆ ಸಾಧ್ಯವಾಗಿಲ್ಲ ಎಂಬುವುದು ನಗೆ ಪಾಟಿಲಿನ ಸಂಗತಿ. ಸಿಬಿಐ ಘನತೆಯನ್ನು ಉಳ್ಳಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತೆ ಮರು ತನಿಖೆಯಾಗಬೇಕು. ನಾವು ಈ ಹೋರಾಟದಲ್ಲಿ ಕೈ ಜೋಡಿಸುತ್ತಿದ್ದೇವೆ” ಎಂದರು.
“ಯಾರು ಸೌಜನ್ಯಳನ್ನು ಅತ್ಯಾಚಾರ ಮಾಡಿದ್ರು ಎಂಬುವುದೇ ನಮ್ಮ ಹುಡುಕಾಟ. ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಇದರ ಬಗ್ಗೆ ಹೆಚ್ಚು ಮಾತನಾಡಬೇಕು. ಸಾಮಾಜಿಕ ಜವಾಬ್ದಾರಿ ಅನುಶಾಸನ ಬದ್ಧವಾದ ಹೊಣೆಗಾರಿಕೆ ಹೊತ್ತವರು. ತಮ್ಮ ಮನೆ ಬಾಗಿಲಲ್ಲಿರುವಂತಹ ತಮ್ಮ ಮನೆಯ ಮಗುವಿನ ಮೇಲಾಗಿರುವ ಅತ್ಯಾಚಾರ. ಆ ಮಗುವಿಗೆ ಸಂಬಂಧ ಪಟ್ಟವರಿಗೆ ಸಾಂತ್ವನ ಹೇಳುವುದು ಅವರ ಕರ್ತವ್ಯವಾಗಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಹಾಸನ | ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ
“ಆ ಮಗುವಿಗೋಸ್ಕರ ನಾನು ಇದ್ದೇನೆ ಎನ್ನುವುದು ಹೆಗ್ಗಡೆ ಅವರ ಬಾಯಿಯಿಂದ ಬರಲಿ. ಆ ಮಾತು ಅವರ ಬಾಯಿಯಿಂದ ಬಂದರೆ ನಾವು ಅವರಿಗೆ ಋಣಿಗಳಾಗುತ್ತೇವೆ. ಸೌಜನ್ಯ ಹೋರಾಟ ಧರ್ಮದ ಕಾರ್ಯ. ಈ ಮಗುವಿಗೆ ನ್ಯಾಯವನ್ನು ದೊರಕಿಸುವ ನಿಟ್ಟಿನಲ್ಲಿ ಇಡೀ ರಾಜ್ಯದಲ್ಲಿ ಕೆಲಸ ಮಾಡುತ್ತೇವೆ” ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಸಂತೋಷ್ ರಾವ್ ಆರೋಪಿಯಲ್ಲ ಎಂದು ಸಾಬೀತಾದ ಹಿನ್ನಲೆಯಲ್ಲಿ ಸೌಜನ್ಯ ರೇಪ್ ಅಂಡ್ ಮರ್ಡರ್ ಕೇಸ್ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಹೀಗಾಗಿ ಈ ಪ್ರಕರಣ ಮತ್ತೆ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಲಿದೆ.





