ಕರ್ನಾಟಕ ರಾಜ್ಯದಲ್ಲಿ ಸಪ್ಟೆಂಬರ್ 2025 ರ ವರೆಗೆ ಸುಮಾರು 40 ಸಾವಿರ ಆರ್ಟಿಐ ಅರ್ಜಿಗಳು ಹಾಗೂ ಧಾರವಾಡ ಜಿಲ್ಲೆಯಲ್ಲಿ 1,623 ಆರ್ಟಿಐ ಅರ್ಜಿಗಳು ವಿಲೇವಾರಿಗೆ ಬಾಕಿ ಉಳಿದಿದ್ದು, ಸಂಬಂಧಿಸಿದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಶೀಘ್ರವಾಗಿ ಅವುಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕೆಂದು ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತ ಅಶಿತ್ ಮೋಹನ್ ಪ್ರಸಾದ್ ತಿಳಿಸಿದರು.
ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಅಧಿನಿಯಮ-2005 ಕುರಿತ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡುತ್ತಾ, ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಅಧ್ಯಯನ ಮತ್ತು ಸಾಮಾನ್ಯ ತಿಳುವಳಿಕೆ ಇರಬೇಕು. ಮಾಹಿತಿ ಬಯಸಿ ಸಲ್ಲಿಕೆಯಾಗುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ, ಕಾಯ್ದೆಯಲ್ಲಿ ಲಭ್ಯವಿರುವ ಸೆಕ್ಷನ್ಗಳ ಆಧಾರದ ಮೇಲೆ ಉತ್ತರ ಮತ್ತು ಮಾಹಿತಿಯನ್ನು ಒದಗಿಸಬೇಕು.
ಸಾರ್ವಜನಿಕರು ಆರ್ಟಿಐ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು 30 ದಿನಗಳಲ್ಲಿ ವಿಲೇವಾರಿ ಮಾಡಬೇಕು. ಕಡತಗಳಲ್ಲಿನ ಫೈಲ್ ನೋಟ್ಗಳನ್ನು ನೀಡಬಹುದು. ನೋಟ್ ಮಾಡಿದ ಅಧಿಕಾರಿಯ ಹೆಸರು, ಗುರುತು ಗೌಪ್ಯವಾಗಿರಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಆರ್ಟಿಐ ಅರ್ಜಿಗಳ ಕುರಿತು ಪ್ರಗತಿ ಪರಿಶೀಲನೆ ಮಾಡಬೇಕು. ಅರ್ಜಿ ವಿಲೇವಾರಿಯಲ್ಲಿ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಸೂಕ್ತ ಸಲಹೆ, ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಪ್ರತಿ ಆರು ತಿಂಗಳಿಗೊಮ್ಮೆ ಆರ್ಟಿಐ ಕಾಯ್ದೆಯ ಕುರಿತು ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ, ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳಿಗೆ, ದ್ವಿತೀಯ ಮೇಲ್ಮನವಿ ಪ್ರಾಧಿಕಾರಿಗಳಿಗೆ ಅಗತ್ಯ ತರಬೇತಿಯನ್ನು ನೀಡಲಾಗುತ್ತಿದೆ. ಆಯೋಗವು ನೀಡಿರುವ ಮಾಹಿತಿ ಅನ್ವಯ ಬಾಕಿ ಇರುವ ಆರ್ಟಿಐ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಲು ಕ್ರಮವಹಿಸಲಾಗುತ್ತದೆ. ಮಾಹಿತಿ ಹಕ್ಕು ಕಾಯ್ದೆಯು ಚಿಕ್ಕದಾಗಿ ಮತ್ತು ಚೊಕ್ಕದಾಗಿದೆ. ಆಡಳಿತ ಮತ್ತು ದಿನನಿತ್ಯದ ಕಚೇರಿ ಕಾರ್ಯಗಳ ನಿರ್ವಹಣೆಯಲ್ಲಿ ಶಿಸ್ತು, ಬದ್ಧತೆ ಮತ್ತು ಪ್ರಾಮಾಣಿಕತೆಯನ್ನು ಮೂಡಿಸುತ್ತದೆ. ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮಾಹಿತಿ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನವಾಗುವಂತೆ ಕ್ರಮವಹಿಸುವಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತಾರೆ ಎಂದು ಹೇಳಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಮಾತನಾಡಿ, ಮಾಹಿತಿ ಹಕ್ಕು ಕಾಯ್ದೆಯಲ್ಲಿ ಯಾವುದೇ ರೀತಿ ವಿಳಂಬ ಮಾಡದೆ ಸರಿಯಾದ ಸಮಯಕ್ಕೆ ಮಾಹಿತಿಯನ್ನು ಸಲ್ಲಿಸಬೇಕು. ಕೆಲವರು ಸಿಸಿಟಿವಿ ದೃಶ್ಯಗಳು, ಪ್ರಕರಣಗಳ ಪ್ರಗತಿ ಬಗ್ಗೆ, ಅಂತಿಮ ಆರೋಪ ಪಟ್ಟಿ, ಯಾವ ವ್ಯಕ್ತಿಯ ಮೇಲೆ ಎಷ್ಟು ಪ್ರಕರಣಗಳಿವೆ ಎಂಬುದರ ಬಗ್ಗೆ, ರೌಡಿಶೀಟರ್ಗಳ ಬಗ್ಗೆ ಮಾಹಿತಿ ಸೇರಿದಂತೆ ವಯಕ್ತಿಕ ಅಥವಾ ವ್ಯಕ್ತಿಗತ ಮಾಹಿತಿಯನ್ನು ಮೂರನೇ ವ್ಯಕ್ತಿಗೆ ನೀಡುವಾಗ ಮಾಹಿತಿ ಹಕ್ಕು ಕಾಯ್ದೆಯಲ್ಲಿನ ಅವಕಾಶಗಳನ್ನು, ಸೆಕ್ಷನ್ಗಳನ್ನು ಸರಿಯಾಗಿ ತಿಳಿದು, ಅರ್ಥೈಸಿಕೊಂಡು ಮುಂದುವರೆಯಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮಾಹಿತಿ ನೀಡುವಾಗ ಅಥವಾ ನಿರಾಕರಿಸುವಾಗ ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ಗಳನ್ನು ಹಾಗೂ ನಿಯಮಗಳನ್ನು ಉಲ್ಲೇಖಿಸಬೇಕೆಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾತನಾಡಿ, ಮಾಹಿತಿ ಹಕ್ಕು ಕಾಯ್ದೆಯನ್ನು ನಿರ್ವಹಿಸುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಮುಖ್ಯವಾಗಿದೆ. ಆರ್ಟಿಐದಡಿ ಇಲಾಖೆಯ ಯಾವ ಮಾಹಿತಿಯನ್ನು ನೀಡಬೇಕು ಎಂಬುದು ತಿಳಿದಿರಬೇಕು. ಪೊಲೀಸ್ ಇಲಾಖೆಯಲ್ಲಿ ಅನೇಕ ಸೂಕ್ಷ್ಮ ವಿಷಯಗಳು ಮತ್ತು ಸಾಮಾಜಿಕ ಸ್ವಾಸ್ಥ್ಯಕ್ಕೆ ಸಂಬಂಧಿಸಿದ ವಿಷಯಗಳಿರುವದರಿಂದ ಮಾಹಿತಿ ಹಕ್ಕು ಕಾಯ್ದೆಯನ್ನು ಅರ್ಥೈಸಿಕೊಂಡು, ಜಾಣತನದಿಂದ ನಿಯಮಾನುಸಾರ ಉತ್ತರ ಒದಗಿಸಬೇಕು. ಇದು ಒಂದು ರೀತಿಯ ಅನುಭವದ ಕೌಶಲ್ಯವಾಗಿದೆ ಎಂದರು.





