ಜನವರಿ 12 ರಂದು ಜರುಗಿದ ಕಮಲಾಪುರ ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಅಪಹರಣ ಪ್ರಕರಣದ ಆರೋಪಿ ವಿರುದ್ಧ ಎಪ್ಐಆರ್ ದಾಖಲಿಸಿ, ಪೊಲೀಸ್ ಕ್ರಮ ಜರುಗಿಸಲಾಗಿದೆ. ಶಾಲಾ ಅವಧಿಯಲ್ಲಿ ಮಕ್ಕಳ ಅಪಹರಣ ಆಗಿರುವದರಿಂದ ಈ ಕುರಿತು ತನಿಖೆ ಮಾಡಿ ವರದಿ ನೀಡಲು, ಜಿಲ್ಲಾ ಪಂಚಾಯತ ಸಿಇಓ ಅವರು ಅಧಿಕಾರಿಗಳ ಸಮಿತಿ ರಚಿಸಿದ್ದಾರೆ. ಸಮಿತಿ ನೀಡುವ ವರದಿ ಪರಿಶೀಲಿಸಿ, ಲೋಪ ಉಂಟಾಗಿದ್ದಲ್ಲಿ ಸಂಬಂಧಿಸಿದವರ ಮೇಲೆ ನಿಯಮಾನುಸಾರ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಅಪಹರಣದಿಂದ ಸುರಕ್ಷಿತವಾಗಿ ಪಾರಾಗಿ, ಜಿಲ್ಲಾ ಆಸ್ಪತ್ರೆಯ ಸಖಿ ವಾರ್ಡದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿ, ಉತ್ತಮ ಚಿಕಿತ್ಸೆ, ಆರೈಕೆ ಒದಗಿಸಲು ವೈದ್ಯರಿಗೆ ಸೂಚಿಸಿದರು. ಕುಟುಂಬದವರಿಗೆ ಸಮಾಧಾನವನ್ನು ಹೇಳಿ, ಆತಂಕ ಪಡದಂತೆ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕ್ರಮವಹಿಸಲಾಗುವುದು. ಈ ಪ್ರಕರಣದಲ್ಲಿ ಅತ್ಯಂತ ಪಾರದರ್ಶಕವಾಗಿ ತನಿಖೆ ಮಾಡಿ, ನ್ಯಾಯ ಒದಗಿಸಲಾಗುವುದು ಎಂದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಶಾಲೆಯ ಊಟದ ವಿರಾಮದ ನಂತರ ಈ ಘಟನೆ ನಡೆದಿದೆ. ಶಿಕ್ಷಕರಿಗೆ ಹಾಗೂ ಶಾಲಾ ಸುಧಾರಣಾ ಸಮಿತಿ ಸದಸ್ಯರಿಗೆ ಮತ್ತು ಪೋಷಕರಿಗೆ ಮಕ್ಕಳ ಸುರಕ್ಷತೆ ಪರಿಕಲ್ಪನೆಗಳ ಬಗ್ಗೆ ಈಗಾಗಲೇ ತಿಳಿಸಿದ್ದೇವೆ. ಮುಂದಿನ ದಿನಗಳಲ್ಲಿ, ಈ ರೀತಿಯ ಘಟನೆಗಳನ್ನು ತಡೆಯಲು ಶಾಲಾ ಸುರಕ್ಷತಾ ವ್ಯವಸ್ಥೆಯನ್ನು ಉತ್ತಮಗೊಳಿಸಲು ನಿರ್ದೇಶನವನ್ನು ನೀಡಿದ್ದೇವೆ ಎಂದು ಹೇಳಿದರು.
ಪ್ರಕರಣದ ಆರೋಪಿಗೆ ಕಾನೂನು ಪ್ರಕಾರ ಕ್ರಮ ಆಗಬೇಕು. ಪ್ರಕರಣದ ಕುರಿತು ಸಮಗ್ರ ತನಿಖೆ ಮಾಡಿ, ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಬೇಕು. ಜಿಲ್ಲಾಡಳಿತವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸದರಿ ಪ್ರಕರಣದಲ್ಲಿ ವಿಶೇಷ ಅಭಿಯೋಜಕರ ಅವಶ್ಯಕತೆ ಇದ್ದಲ್ಲಿ ಪೊಲೀಸ್ ಇಲಾಖೆ ಪರಿಶೀಲಿಸಿ, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು ಎಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಶಾಲಾ ಅವಧಿಯಲ್ಲಿ ಕಡ್ಡಾಯವಾಗಿ, ಶಿಕ್ಷಕರು ಶಾಲೆಯಲ್ಲಿ ಇದ್ದು, ಮಕ್ಕಳಿಗೆ ಪಾಠ ಬೋಧನೆ ಮಾಡಬೇಕು ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ನಿಗಾವಹಿಸಬೇಕು. ಎಲ್ಲ ಸರಕಾರಿ ಶಾಲೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಜಿಲ್ಲಾ ಪಂಚಾಯತದಿಂದ ಸುತ್ತೋಲೆ ನೀಡಲಾಗುತ್ತದೆ. ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸುಧಾರಣೆ ಮತ್ತು ಕಂಪೌಂಡ ನಿರ್ಮಾಣದ ಬಗ್ಗೆ ಸ್ಥಳ ಪರಿಶೀಲಿಸಿ, ನಿರ್ಮಿಸಲಾಗುತ್ತದೆ ಎಂದರು.
ಇದನ್ನೂ ಓದಿ ಧಾರವಾಡ | ಸಿದ್ದರಾಮೇಶ್ವರರ ಸಾಧನೆಗಳು ಎಲ್ಲರಿಗೂ ಪ್ರೇರಣೆ: ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ, ಜಿಲ್ಲಾಶಸ್ತ್ರ ಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಸಹಾಯಕ ಪೆÇಲೀಸ ಆಯುಕ್ತ ಪ್ರಶಾಂತ ಸಿದ್ದನಗೌಡರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಡಾ.ಎಚ್.ಎಚ್.ಕುಕನೂರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಮ್.ಹೊನಕೇರಿ, ಪೊಲೀಸ್ ಇನಸ್ಪೆಕ್ಟರ್ ಪ್ರಭು ಗಂಗೆನಹಳ್ಳಿ ಇದ್ದರು.





