ಭಾರೀ ಸುರಿದ ಮಳೆಯಿಂದಾಗಿ ಅಣ್ಣಿಗೇರಿ ಪಟ್ಟಣದ ವಿವಿಧ ಬಡಾವಣೆಗಳಿಗೆ ನೀರು ನುಗ್ಗಿ ಸುತ್ತಮುತ್ತಲಿನ ಪ್ರದೇಶ ಜಲಾವೃತಗೊಂಡು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ಪಟ್ಟಣದ ಬೆಂತೂರ ರಸ್ತೆಯ ಹೊಲದಲ್ಲಿ ಸಿಡಿಲು ಬಡಿದು ಮಲ್ಲಪ್ಪ ಬೆಳ್ಳಿಕೊಪ್ಪ ಎಂಬುವವರ 7 ಕುರಿಗಳು ಸಾವನ್ನಪ್ಪಿವೆ. ಈ ಮಳೆಹಾನಿ ಪ್ರದೇಶಗಳಿಗೆ ಶಾಸಕ ಎನ್. ಹೆಚ್. ಕೋನರಡ್ಡಿ ಭೇಟಿ ನೀಡಿ ಪರಿಶೀಲಿಸಿ, ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಸುರಕೋಡ್ ಬಡಾವಣೆ, ರಾಜರಾಜೇಶ್ವರಿ ಬಡಾವಣೆ ಮತ್ತು ಜೆ.ಎಸ್.ಎಸ್. ಕಾಲೋನಿಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ನಂತರ; ತಕ್ಷಣ ಜೆಸಿಬಿ ಬಳಸಿಕೊಂಡು ನೀರು ಹರಿಯಲು ದಾರಿ ಮಾಡಬೇಕು ಮತ್ತು ಮೋಟಾರ್ ಪಂಪ್ ಬಳಸಿ ಬಡಾವಣೆಗಳಿಂದ ನೀರನ್ನು ಹೊರಹಾಕಬೇಕು. ಬಡಾವಣೆಗಳಲ್ಲಿ ನೀರು ನಿಲ್ಲದಂತೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳೀಯ ಜನರಿಗೆ ಭರವಸೆ ನೀಡಿದರು.
ಪಟ್ಟಣದ ಬೆಂತೂರ ರಸ್ತೆಯ ಹೊಲದಲ್ಲಿ ಸಿಡಿಲು ಬಡಿದು ಮಲ್ಲಪ್ಪ ಬೆಳ್ಳಿಕೊಪ್ಪ ಎಂಬುವವರ 7 ಕುರಿಗಳು ಸಾವನ್ನಪ್ಪಿದ ಸ್ಥಳಕ್ಕೆ ಭೇಟಿ ನೀಡಿ, ಘಟನೆಯನ್ನು ಪರಿಶೀಲಿಸಿ, ಕುರಿಗಾಹಿಗೆ ಧನ ಸಹಾಯ ಮಾಡಿದರು. ಸಿಡಿಲು ಬಡಿದು ಕುರಿಗಳು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಪಂಚನಾಮೆ ಮಾಡಿ, ಸರ್ಕಾರದ ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಲು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಮಳೆಯಿಂದಾಗಿ ಅಣ್ಣಿಗೇರಿ ಪಟ್ಟಣ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಭಾಗಶಃ ಹಾನಿಯಾಗಿರುವ ಮನೆಗಳ ಕುರಿತು ಸಮೀಕ್ಷೆ ನಡೆಸಿ, ಸರ್ಕಾರದ ಆದೇಶದಂತೆ ತಕ್ಷಣ ಪರಿಹಾರ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ತಿಳಿಸಿದರು.
ಪಟ್ಟಣದ ಅನೇಕ ಲೇಔಟ್ಗಳಲ್ಲಿ ರಸ್ತೆ, ಚರಂಡಿಗಳ ಒತ್ತುವರಿ ಹಾಗೂ ಪಟ್ಟಣದ ವಿವಿಧೆಡೆ ರಾಜಕಾಲುವೆಗಳ ಒತ್ತುವರಿ ಆಗಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿವೆ. ಈ ಒತ್ತುವರಿಗಳಿಂದಾಗಿ ಮಳೆ ನೀರು, ಚರಂಡಿ ನೀರು ಸರಾಗವಾಗಿ ಹರಿದು ಹೋಗಲು ಸಮಸ್ಯೆ ಆಗುತ್ತಿದೆ. ಈ ಕುರಿತು ಪುರಸಭೆಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು. ಅಣ್ಣಿಗೇರಿ ಪಟ್ಟಣ ಸುಂದರವಾಗಿ ರೂಪಗೊಳ್ಳಲು ಎಲ್ಲರೂ ಸಹಕರಿಸಬೇಕು ಎಂದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಆರೋಪ; ಸೂಕ್ತ ಕ್ರಮಕ್ಕೆ ಬಿಜೆಪಿ ಒತ್ತಾಯ
ಈ ಸಂದರ್ಭದಲ್ಲಿ ಅಣ್ಣಿಗೇರಿ ತಹಶೀಲ್ದಾರ್ ಎಂ.ಜಿ. ದಾಸಪ್ಪನವರ, ಪುರಸಭೆ ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ, ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ, ಕಂದಾಯ ಅಧಿಕಾರಿ ರಿಷಿಕುಮಾರ್ ಸಾರಂಗಿ, ಗ್ರಾಮ ಲೆಕ್ಕಾಧಿಕಾರಿ ಎಮ್.ಎಸ್. ಪಾಟೀಲ್, ಪುರಸಭೆ ಸದಸ್ಯರುಗಳಾದ ಈಶ್ವರ ಕಾಳಪ್ಪನವರ, ಮಂಜುನಾಥ್ ಮಾಯಣ್ಣವರ, ಚಂದ್ರಣ್ಣ ಸುರಕೋಡ, ಚಂಬಣ್ಣ ಸುರಕೋಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಬಡಾವಣೆ ನಿವಾಸಿಗಳು ಮತ್ತು ಪಟ್ಟಣದ ಪ್ರಮುಖರು ಉಪಸ್ಥಿತರಿದ್ದರು.





