ಹಳ್ಳಿಗಳಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿರುವುದನ್ನು ಖಂಡಿಸಿ, ಈ ಕೂಡಲೆ ಸೂಕ್ತ ಕ್ರಮಕೈಗೊಳ್ಳಲು ಒತ್ತಾಯಿಸಿ, ಕರ್ನಾಟಕ ಮದ್ಯ ನಿಷೇದ ಆಂದೋಲನದ ಅಡಿಯಲ್ಲಿ ರೈತ, ದಲಿತ, ಕಾರ್ಮಿಕ ಸಂಘಟನೆಗಳು ಹಾಗೂ ಮಹಿಳೆಯರ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ಅಕ್ರಮ ಸಾರಾಯಿ ಮಾರಾಟದ ಪರಿಣಾಮವಾಗಿ ಬಹುತೇಕ ಹಳ್ಳಿಗಳಲ್ಲಿ ಸಣ್ಣ ವಯೋಮಾನದ ಯುವಕರು ದುಶ್ಚಟಕ್ಕೆ ಬಲಿಯಾಗಿದ್ದಾರೆ. ಈ ಕುರಿತು ಸರ್ಕಾರವು ಸೂಕ್ತ ಕ್ರಮಕ್ಕೆ ಮುಂದಾಗಬೇಕು. ಅಕ್ರಮ ಸಾರಾಯಿ ಮಾರಾಟವನ್ನು ತಡೆಯಬೇಕು ಎಂದು ಒತ್ತಾಯಿಸಿದರು.
ಉತ್ತರ ಕರ್ನಾಟಕ ಹೋರಾಟ ಸಮಿತಿಯ ಲಕ್ಷ್ಮಣ ಬಕ್ಕಾಯಿ ಮಾತನಾಡಿ, ಎಗ್ಗಿಲಗಲದೆ ನಡೆಯುತ್ತಿರುವ ಅಕ್ರಮ ಮಧ್ಯ ಮಾರಾಟವನ್ನು ತಡೆಯಲು ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಜಿಲ್ಲಾಧಿಕಾರಿಗಳು ಮುಂಬರುವ ಜಿಲ್ಲಾಸಭೆಯಲ್ಲಿ ಚರ್ಚೆಗೆ ಒಳಪಡಿಸಿ, ಗಂಭೀರವಾಗಿ ಪರಿಗಣಿಸಿ ಆಯಾ ತಾಲೂಕಾಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳಲು ಒತ್ತಾಯಿಸಬೇಕು. ಒಂದುವೇಳೆ ಮಾಡದೇ ಹೋದರೆ; ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಾಗುವುದು. ನಮ್ಮ ದೇಶದ ಸಂವಿಧಾನದ ಆರ್ಟಿಕಲ್ 47 ರಂತೆ ದೇಶ ಮಧ್ಯ ನಿಷೇಧದತ್ತ ಸಾಗಬೇಕೆಂದು ಹೇಳಲಾಗಿದೆ. ಆದ್ದರಿಂದ ಸರಕಾರ ಮದ್ಯ ಮಾರಾಟ ನಿಯಂತ್ರಣ ಮಾಡಬೇಕು ಎಂದು ಆಗ್ರಹಿಸಿದರು.
ಈ ಕುರಿತು ಗ್ರಾಮೀಣ ಕೂಲಿಕಾರರ ಸಂಘಟನೆಯ ಜಿಲ್ಲಾ ಸಂಚಾಲಕಿ ನಿಂಗಮ್ಮ ಸವಣೂರ ಮಾತನಾಡಿ, ಈಗಾಗಲೇ ಹರಿಯಾಣ, ಮಹಾರಾಷ್ಟ್ರ ಹಾಗೂ ಇತರ ರಾಜ್ಯಗಳಲ್ಲಿ ಮಹಿಳಾ ಗ್ರಾಮ ಸಭೆಗಳಿಗೆ ಪರಮಾಧಿಕಾರ ಕೊಟ್ಟರುವ ನಿಟ್ಟಿನಲ್ಲಿ ಹಳ್ಳಿಗಳಲ್ಲಿ ಸಾರಾಯಿ ಮಾರಾಟ ಮಾಡುವ ಮೊದಲು ಗ್ರಾಮದ ಮಹಿಳೆಯರ ಗಮನಕ್ಕೆ ತರಬೇಕು. ಕಳೆದ ಹತ್ತು ವರ್ಷಗಳಿಂದ ಮದ್ಯ ನಿಷೇಧ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಈಗಲೂ ಹಳ್ಳಿಗಳಲ್ಲಿ ಎಗ್ಗಿಲ್ಲದೆ ಸಾರಾಯಿ ಮಾರಾಟವಾಗುತ್ತಿದೆ. ಇದನ್ನು ಕೂಡಲೆ ತಡೆಯಬೇಕು. ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮತ್ತು ಪ್ರತಿ ಹಳ್ಳಿಯಲ್ಲೂ ಹಲವು ಕಡೆಗೆ ಸಾರಾಯಿ ಮಾರುತ್ತಾರೆ. ಈ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಹಿಳೆಯರು, ರೈತರು, ಸಂಘಟಕರು, ಹೋರಾಟಗಾರರು ಇದ್ದರು.





