ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯಲ್ಲಿ ನವೆಂಬರ 1ರ ಮುಂಚೆ ಕನಿಷ್ಟ 3 ವರ್ಷಗಳಷ್ಟು ಮೊದಲು ಭಾರತದಲ್ಲಿರುವ ಯಾವುದಾದರೊಂದು ವಿಶ್ವವಿದ್ಯಾಲಯದ ಪದವೀಧರನಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಯು ನವೆಂಬರ್ 06, ರೊಳಗಾಗಿ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳಲು ಮತದಾರರ ಜಾಗೃತಿಗಾಗಿ ಅಗತ್ಯ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಹೇಳಿದರು.
ಸಹಾಯಕ ಮತದಾರರ ನೋಂದಣಾಧಿಕಾರಿಗಳು ಮತ್ತು ನಿಯೋಜಿತ ಅಧಿಕಾರಿಗಳು ಮತದಾರರ ಪಟ್ಟಿಗೆ ಸೇರಲು ಅರ್ಹ ಮತದಾರರನ್ನು ಗುರುತಿಸಿ, ಮತದಾರರ ಪಟ್ಟಿಗೆ ಸೇರ್ಪಡೆಯಾಗುವಂತೆ ಮಾಹಿತಿ ನೀಡಬೇಕು. ಅರ್ಹ ಮತದಾರರು ತಮ್ಮ ಅರ್ಜಿಗಳನ್ನು ನಿರ್ದಷ್ಠಪಡಿಸಿರುವ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಮತ್ತು ನಿಯೋಜಿತ ಅಧಿಕಾರಿಗಳ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದು. ಈ ಕುರಿತು ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಐಇಸಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅರ್ಹ ಎಲ್ಲ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಲು ಮಾರ್ಗದರ್ಶನ ನೀಡಬೇಕೆಂದು ಸೂಚಿಸಿದರು.
ಮತದಾರರು ವಿಳಾಸದ ದಾಖಲೆಗಾಗಿ ಮತದಾರರ ಗುರುತಿನ ಚೀಟಿ ಅಥವಾ ಆಧಾರ ಕಾರ್ಡ/ರೇಷನ್ ಕಾರ್ಡ/ಇಂಡಿಯನ್ ಪಾರ್ಸ್ಪೋರ್ಟ/ಡ್ರೈವಿಂಗ್ ಲೈಸನ್ಸ್ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆ ಅಥವಾ ಭಾರತ ಚುನಾವಣಾ ಆಯೋಗವು ನಿರ್ದಷ್ಟಪಡಿಸಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ಸಹಾಯಕ ಮತದಾರರ ನೋಂದಣಾಧಿಕಾರಿಗಳಲ್ಲಿ ಅಥವಾ ಗೊತ್ತುಪಡಿಸಿದ ನಿಯೋಜಿತ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಹೇಳಿದರು.
ಜಿಲ್ಲೆಯ ಎಲ್ಲ ನಗರಗ ಮತ್ತು ಗ್ರಾಮಗಳಲ್ಲಿ ಮತದಾರರ ಜಾಗೃತಿ ಸಂದೇಶವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಘನತ್ಯಾಜ್ಯ ಸಂಗ್ರಹ ವಾಹನಗಳಲ್ಲಿ ಜಿಂಗಲ್ಸ್ ಬಳಸುವ ಮೂಲಕ ಮತದಾರರಿಗೆ ಮಾಹಿತಿ ತಲುಪಿಸಬೇಕು. ಆಯಾ ಇಲಾಖೆಗಳ ಮುಖ್ಯಸ್ಥರು ತಮ್ಮ ಕಚೇರಿಗಳಲ್ಲಿ ಇರುವ ಪ್ರತಿಯೊಬ್ಬ ಪದವೀಧರ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಮುತುರ್ವಜಿ ವಹಿಸಬೇಕೆಂದು ಹೇಳಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ತೇಜಸ್ವಿನಿ ನಾರಾಯಣಕರ್, ಎಲ್ಲ ತಾಲೂಕುಗಳ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಸೇರಿದಂತೆ ಇತರರಿದ್ದರು.





