ಕೇಂದ್ರ ಮತ್ತು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಆಗ್ರಹಿಸಿ ಧಾರವಾಡದಲ್ಲಿ ಡಿಸೆಂಬರ್ 10ರಂದು ನಡೆಯುವ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನಾ ಧರಣಿಗೆ ಜನಾಂದೋಲನಗಳ ಮಹಾ ಮೈತ್ರಿ, ಕರ್ನಾಟಕ ರಾಜ್ಯ ರೈತ ಸೇನಾ, ಗುಲ್ಬರ್ಗ ವಿಶ್ವವಿದ್ಯಾಲಯ ಬಿಎಡ್ ವಿದ್ಯಾರ್ಥಿಗಳ ಹೋರಾಟ ಸಮಿತಿ ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(ಎಐಡಿವೈಓ) ಸಂಘಟನೆಗಳು ಸಂಪೂರ್ಣ ಬೆಂಬಲ ನೀಡುತ್ತವೆ ಎಂದು ನಗರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ವೇಳೆ ಜನಾಂದೋಲನಗಳ ಮಹಾ ಮೈತ್ರಿಯ ರಾಜ್ಯ ಸಂಚಾಲಕ ಉಗ್ರ ನರಸಿಂಹೇಗೌಡ ಮಾತನಾಡಿ, ಒಂದು ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಸರ್ಕಾರದ ಕರ್ತವ್ಯ ಮತ್ತು ಉದ್ಯೋಗ ಕೊಡಿ ಎಂದು ಕೇಳುವುದು ಯುವಜನರ ಹಕ್ಕು. ಉದ್ಯೋಗ ಕೇಳಿದರೆ ಲಾಟಿ ಬೀಸುವುದು ಯಾವುದರ ಲಕ್ಷಣ ಎಂದು ಸರ್ಕಾರಗಳೇ ಹೇಳಬೇಕು. ಖಾಲಿ ಹುದ್ದೆಗಳ ಭರ್ತಿಗಾಗಿ ಹಲವಾರು ದಿನಗಳಿಂದ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆಸುತ್ತಿರುವ ಪ್ರತಿಭಟನಾ ಧರಣಿಯು ಪ್ರಜತಾಂತ್ರಿಕ ಮೌಲ್ಯಗಳ ಆಧಾರದಲ್ಲಿ ಅತ್ಯಂತ ಶಿಸ್ತುಬದ್ಧವಾಗಿ ಹೋರಾಟ ನಡೆಯುತ್ತಿದೆ. ಆದ್ದರಿಂದ ನಾವು ಈ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಿದ್ದೇವೆ. ಉದ್ಯೋಗ ಆಕಾಂಕ್ಷಿಗಳು ಹಲವಾರು ದಿನಗಳಿಂದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ವಿವಿಧ ರೀತಿಯಲ್ಲಿ ಹೋರಾಟವನ್ನು ನಡೆಸುತ್ತಾ ಬಂದಿದ್ದಾರೆ.
ಕೇಂದ್ರ ಮತ್ತು ರಾಜ್ಯದಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ಸಹ 5-6 ವರ್ಷಗಳಿಂದ ಸರ್ಕಾರಗಳು ನೇಮಕಾತಿಗಳನ್ನು ಮಾಡದೆ ಇರುವುದು ಅತ್ಯಂತ ಅಕ್ಷಮ್ಯ. ಇದನ್ನು ನಾವು ಅತ್ಯಂತ ತೀವ್ರವಾಗಿ ಖಂಡಿಸುತ್ತೇವೆ. ರಾಜ್ಯದಲ್ಲಿ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಪಕ್ಷವು ಕೋವಿಡ್ ನೆಪವನ್ನು ಮುಂದೆ ಮಾಡಿ ಯಾವುದೇ ನೇಮಕಾತಿಗಳನ್ನು ಮಾಡಲಿಲ್ಲ. ಬದಲಿಗೆ ಅವರ ಆಡಳಿತ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿತ್ತು. ನಂತರ ತಾನು ಅಧಿಕಾರಕ್ಕೆ ಬಂದರೆ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆ ನೀಡಿದ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದು ಎರಡುವರೆ ವರ್ಷ ಕಳೆದರೂ ನೇಮಕಾತಿಗಳನ್ನು ಮಾಡುತ್ತಿಲ್ಲ. ಬದಲಿಗೆ ಒಳ ಮೀಸಲಾತಿಯ ನೆಪಗಳನ್ನು ಮುಂದೆ ಮಾಡಿ ಸಮಯ ತಳ್ಳುವ ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರವು ಸಹ ಖಾಲಿರುವ 10 ಲಕ್ಷ ಹುದ್ದೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಂಬುದು ಕೂಡ ಬರಿ ಚುನಾವಣಾ ಜುಮ್ಲಾ ಆಗಿದೆ. ಯುವಜನರನ್ನು ವಿವಿಧ ಪಕ್ಷಗಳು ತಮ್ಮ ಓಟ್ ಬ್ಯಾಂಕ್ ಆಗಿ ಮಾಡಿಕೊಂಡಿವೆ.
ಪೊಲೀಸ್ ಮತ್ತಿತರ ನೇಮಕಾತಿಗಳಲ್ಲಿ ವಯೋಮಿತಿ ಹೆಚ್ಚಿಸಬೇಕು. ನೇಮಕಾತಿಯಲ್ಲಿ ಭ್ರಷ್ಟಾಚಾರವನ್ನು ತೊಡೆದು ಹಾಕಬೇಕು. ನೇಮಕಾತಿ ಅರ್ಜಿ ಶುಲ್ಕ ಸಂಪೂರ್ಣವಾಗಿ ಕೈಬಿಡಬೇಕು. ಸ್ಪರ್ಧಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಉಚಿತ ಸಾರಿಗೆ ವ್ಯವಸ್ಥೆ ಮಾಡಬೇಕು. ಉದ್ಯೋಗ ಆಕಾಂಕ್ಷಿಗಳು ಇರುವ ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಬೇಕು ಎಂಬ ಇಂತಹ ಯುವಜನರ ಕನಿಷ್ಠ ಬೇಡಿಕೆಗಳನ್ನಾದರೂ ಈಡೇರಿಸುವ ಹಾಗೂ ಅದರ ಬಗ್ಗೆ ಪ್ರತಿಕ್ರಿಯೆ ನೀಡುವ ವ್ಯವಧಾನವು ಈ ಸರ್ಕಾರಕ್ಕೆ ಇಲ್ಲದಿರುವುದು ಅತ್ಯಂತ ಖಂಡನೀಯವಾದ ವಿಷಯವಾಗಿದೆ. ಆದ್ದರಿಂದ ಈ ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯೋಗಾಕಾಂಕ್ಷಿಗಳ ಬೇಡಿಕೆಗಳನ್ನು ಪರಿಗಣಿಸಿ ಕೂಡಲೇ ನೇಮಕಾತಿಗಳನ್ನು ಕೈಗೊಳ್ಳಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಅಗ್ರಹಿಸಿದರು.
ಇದನ್ನೂ ಓದಿ ಧಾರವಾಡ | ಪಾದಚಾರಿಗೆ ಬೈಕ್ ಡಿಕ್ಕಿ; ಆಂಬ್ಯುಲೆನ್ಸ್ಗಾಗಿ ಗಾಯಾಳು ಪರದಾಟ
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸೇನಾ ರಾಜ್ಯಾಧ್ಯಕ್ಷ ಶಂಕರ ಅಂಬಲಗಿ, ಶರಣಪ್ಪ ಉದ್ಬಾಳ್, ಜಗನ್ನಾಥ ಎಸ್. ಎಚ್ ಇದ್ದರು.





