ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆಯನ್ನು ರಾಜ್ಯ ಸರಕಾರದ ಸೂಚನೆಯಂತೆ ವಿಶೇಷವಾಗಿ ಪೋಷಕರಲ್ಲಿ, ಶಿಕ್ಷಕರಲ್ಲಿ ಜಾಗೃತಿ ಮೂಡಿಸಿ, ಅವರ ಜವಾಬ್ದರಿಯನ್ನು ನೆನಪಿಸಲು ಇಂದು ಜಿಲ್ಲೆಯಾದ್ಯಂತ 896 ಶಾಲೆ, ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆಯನ್ನು ಯಶಶ್ವಿಯಾಗಿ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಇಂದು ಬೆಳಿಗ್ಗೆ, ರಾಯನಾಳ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಗ್ರಾಮ ಪಂಚಾಯತ ರಾಯನಾಳ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆ ರಾಯನಾಳ, ಪಿಯು ಕಾಲೇಜ್ ಇವುಗಳ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪೋಷಕ ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ಬೆಳೆಸುವಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಮಕ್ಕಳಲ್ಲಿ ಒಳ್ಳೆಯ ಸಂಸ್ಕಾರ ರೂಡಿಗತವಾಗಲು ಪಾಲಕರು ಮಕ್ಕಳ ಮುಂದೆ ಪಾಲಕರಾಗಿರಬೇಕು. ಮಕ್ಕಳ ಸಮಗ್ರ ಬೆಳವಣಿಗೆ ದೈಹಿಕ ಮತ್ತು ಬೌದ್ದಿಕ ಆರೋಗ್ಯ ಮುಖ್ಯವಾಗಿದೆ. ಶಿಕ್ಷಕರು ಮತ್ತು ಪೋಷಕರು ಜವಾಬ್ದರಿಯುತವಾಗಿ ವರ್ತಿಸಬೇಕು ಎಂದು ಹೇಳಿದರು.
ಧಾರವಾಡ ಜಿಲ್ಲೆಯನ್ನು ವಿದ್ಯಾ ಕಾಶಿ ಎಂದು ಕರೆಯುತ್ತಾರೆ. ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಪ್ರತಿದಿನ ಮಕ್ಕಳ ಜೊತೆ ಬೆರೆಯುವ ಅವಕಾಶ ಶಿಕ್ಷಕರಿಗೆ ಮಾತ್ರ ಇದೆ. ಮಕ್ಕಳ ಜೊತೆ ಬರೆಯುವ ವೃತ್ತಿ ಶಿಕ್ಷಕ ವೃತ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ. ಆರ್.ಜೆ ಹೇಳಿದರು.
ಪೋಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳು, ಲೈಂಗಿಕ ದೌರ್ಜನ್ಯ ಹಾಗೂ ಇತರ ಕಾಯ್ದೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ. ಪೋಷಕರು ತಮ್ಮ ಪಾತ್ರವನ್ನು ಅರಿತುಕೊಳ್ಳಬೇಕು. ಮಕ್ಕಳು ಜೀವನದಲ್ಲಿ ಯಶಸ್ಸು ಕಾಣಬೇಕು. ಅರಿವಿನ ಕೊರತೆ ನಮ್ಮಲ್ಲಿ ಹೆಚ್ಚಾಗಿ ಕಾಡುತ್ತಿದೆ. ಅದನ್ನು ಮೀರಿ ಉನ್ನತ ಸಾಧನೆ ಮಾಡಲು ಅಣಿಯಾಗಬೇಕು. ಜೀವನದಲ್ಲಿ ಗೆಲ್ಲಲೇ ಬೇಕಾದರೆ ಯಾವ ರೀತಿ ಮನಸ್ಸು ಹೊಂದಿರಬೇಕು ಎಂಬುದನ್ನು ಅರಿತುಕೊಳ್ಳಬೇಕು. ಮಕ್ಕಳಿಗೆ ಒಳ್ಳೆಯ ವಾತಾವರಣವನ್ನು ಸೃಷ್ಟಿ ಮಾಡುವುದು ಪಾಲಕರ ಜವಾಬ್ದಾರಿಯಾಗಿದೆ. ಪೋಷಕರ ಸಭೆಗೆ ಕಡ್ಡಾಯವಾಗಿ ಪೋಷಕರು ಹಾಜರಾಗಬೇಕು. ಪೋಷಕರು ಮಕ್ಕಳ ಮುಂದೆ ಯಾವತ್ತೂ ಜಗಳವಾಡಬಾರದು. ಮಕ್ಕಳ ಮೇಲೆ ದುಷ್ಪರಿಣಾಮ ಬೀರದಂತೆ ನೋಡಿಕೊಳ್ಳಬೇಕು. ಪೋಷಕರು ಮಾಡುವ ಕೆಲಸವನ್ನು ನೋಡಿ ಮಕ್ಕಳು ಅನುಸರಿಸುತ್ತಾರೆ. ನಾವು ಮಕ್ಕಳಿಗೆ ಉದಾಹರಣೆ ಆಗಿರಬೇಕು ಎಂದು ತಿಳಿಸಿದರು.
ತಂದೆ ತಾಯಿಗಳ ಮಾತುಗಳನ್ನು ಮಕ್ಕಳು ಪಾಲಿಸಬೇಕು. ಮಕ್ಕಳು ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕಾಗುತ್ತದೆ. ಉತ್ತಮ ಸಂಸ್ಕಾರವನ್ನು ಬೆಳೆಸಿಕೊಳ್ಳುವತ್ತ ಗಮನಹರಿಸಬೇಕು. ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಯಪಡಿಸಬೇಕಿದೆ. ಮಕ್ಕಳನ್ನು ಸ್ನೇಹಿತರಂತೆ ಕಾಣಬೇಕು. ಪರಸ್ಪರ ನಂಬಿಕೆಯನ್ನು ಉಳಿಸಿಕೊಳ್ಳಬೇಕಾಗುತ್ತದೆ. ಮಕ್ಕಳ ಸಮಸ್ಯೆಗಳಿಗೆ ಪೋಷಕರು ಮೊದಲು ಕಿವಿಗೊಡಬೇಕು. ಮಕ್ಕಳ ಮೇಲೆ ನಾವು ನಂಬಿಕೆಯನ್ನು ಹೊಂದಿರಬೇಕು. ಮಗುವಿನ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕಾಗುತ್ತದೆ. ದೊರೆಯುವ ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಬೇಕು. ಶಿಕ್ಷಣದಿಂದ ಮಾತ್ರ ಸಮಾನತೆ ತರಲು ಸಾಧ್ಯ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಪ್ರತಿಪಾದಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ಮಾತನಾಡಿ, ದೇಶದ ಮೊದಲ ಪ್ರಧಾನಿಯಾದ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ದೇಶದಾದ್ಯಂತ ಆಚರಣೆ ಮಾಡಲಾಗುತ್ತದೆ. ಮಕ್ಕಳ ಬಗ್ಗೆ ಪೋಷಕರ ಜವಾಬ್ದಾರಿ ತಿಳಿಸುವ ಕಾರ್ಯಕ್ರಮ ಆಯೋಜನೆ ಮಾಡಿರುವುದು ಸಂತಸ ತಂದಿದೆ. ಮಕ್ಕಳು ಉತ್ತಮ ನಾಗರಿಕರಾಗುವತ್ತ ಗಮನ ಹರಿಸಬೇಕು. ಮಕ್ಕಳಿಗೆ ಪೋಷಕರು ಮಾದರಿಯಾಗಿರಬೇಕು. ಮಕ್ಕಳ ದಿನ ನಿತ್ಯದ ಪ್ರಗತಿಯನ್ನು ಪೋಷಕರು ಗಮನಿಸುತ್ತಿರಬೇಕು. ಮಕ್ಕಳಿಗೆ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಪೋಷಕರು ಅವಕಾಶ ಮಾಡಿಕೊಡಬೇಕಾಗುತ್ತದೆ. ಮಕ್ಕಳು ಗುರಿಯ ಜೊತೆಗೆ ಮೌಲ್ಯವನ್ನು ರೂಢಿಸಿಕೊಳ್ಳಬೇಕು. ಮಕ್ಕಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಪೋಷಕರು ಮುಂದಾಗಬೇಕಿದೆ. ಜೀವನದಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು. ಮಕ್ಕಳಲ್ಲಿರುವ ಸಾಮರ್ಥ್ಯವನ್ನು ಹೊರತರಬೇಕಿದೆ. ರಾಯನಾಳ ಗ್ರಾಮದ ಕೆಪಿಎಸ್ ಶಾಲೆಯನ್ನು ರಾಜ್ಯ ಹಾಗೂ ದೇಶದಲ್ಲಿ ಮಾದರಿ ಶಾಲೆಯನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಶಾಲೆಯ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದರು.
ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ್ ಬೊಮ್ಮಕನವರ್ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದು ರಾಜ್ಯದಾದ್ಯಂತ ಪೋಷಕ ಶಿಕ್ಷಕರ ಮಹಾಸಭೆ ಕಾರ್ಯಕ್ರಮ ನಡೆಯುತ್ತಿದೆ. ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಜೊತೆಗೆ ಸಮುದಾಯ ಸಹಭಾಗಿದಾರರು ಕೈಜೋಡಿಸಿದರೆ ಸಾಕಷ್ಟು ಬದಲಾವಣೆ ತರಬಹುದು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕಾಗುತ್ತದೆ ಎಂದು ತಿಳಿಸಿದರು.
ಧಾರವಾಡ ಜಿಲ್ಲೆಯಲ್ಲಿ ಇಂದು ಪೋಷಕ- ಶಿಕ್ಷಕರ ಮಹಾಸಭೆ ನಡೆಯುತ್ತಿರುವ ಶಾಲಾ ಕಾಲೇಜುಗಳ ವಿವರ: ಇಂದು ಜಿಲ್ಲೆಯ 746 ಸರಕಾರಿ ಪ್ರಾಥಮಿಕ ಶಾಲೆಗಳು, 112 ಸರಕಾರಿ ಪ್ರೌಢಶಾಲೆಗಳು ಸೇರಿದಂತೆ ಒಟ್ಟು 858 ಶಾಲೆಗಳಲ್ಲಿ ಕಾರ್ಯಕ್ರಮ ನಡೆಯುತ್ತಿದೆ. 3,33,337 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. 36 ಪಿಯುಸಿ ಕಾಲೇಜುಗಳಿದ್ದು, ಪ್ರಥಮ ಪಿಯುಸಿ 25,766 ಹಾಗೂ ದ್ವಿತೀಯ ಪಿಯುಸಿ 24,877 ವಿದ್ಯಾರ್ಥಿಗಳು ಸೇರಿದಂತೆ ಒಟ್ಟಾರೆಯಾಗಿ 50,643 ವಿದ್ಯಾರ್ಥಿಗಳಿದ್ದಾರೆ. ಖಾಸಗಿ ಶಾಲಾ ಕಾಲೇಜುಗಳನ್ನು ಒಳಗೊಂಡಂತೆ ಸುಮಾರು 4,90,980 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
ಇದೇ ಸಂದರ್ಭದಲ್ಲಿ ಪಂಡಿತ್ ಜವಾಹರ್ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ದಾನಿಗಳು ಹಾಗೂ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಚ್ ಪಿ ಎಸ್ ಬೆಳಗಲಿ ಉಣಕಲ್ ಬೊಮ್ಮಸಮುದ್ರ ಹಾಗೂ ಅಂಚೆಟಗೇರಿ ಶಾಲೆಯ ಸ್ಕೌಟ್ ಗೈಡ್ಸ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ದೊಡ್ಡಾಟದ ಸ್ತ್ರೀ ಕುಣಿತವನ್ನು ಪ್ರದರ್ಶಿಸಿದರು.
ಇದನ್ನೂ ಓದಿ ಧಾರವಾಡ | ಸಾಧಕನಿಗೆ ಸಾಧಿಸುತ್ತೇನೆಂಬ ಛಲ, ಆತ್ಮವಿಶ್ವಾಸ ಇರಬೇಕು: ಕುಮಾರಿ. ಅದಿತಿ ಕ್ಷಾತ್ರತೇಜ
ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ಮತ್ತು ವಕೀಲರಾದ ನೂರ್ ಜಹಾನ್ ಕಿಲ್ಲೇದಾರ್ ಅವರು ಮಕ್ಕಳ ಹಕ್ಕುಗಳು ಮತ್ತು ರಕ್ಷಣೆ ಹಾಗೂ ಗೋಕುಲದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಫ್.ಬಿ.ಸೊರಟೂರ್ ಅವರು ಶಿಕ್ಷಣದಲ್ಲಿ ಭಾಗಿದಾರರ ಪಾತ್ರ ವಿಷಯದ ಕುರಿತು ಉಪನ್ಯಾಸ ನೀಡಿದರು.





