ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಲುಪಿಸಿ, ದೌರ್ಜನ್ಯ ಪ್ರಕರಣಗಳಲ್ಲಿ ನಿಯಮಾನುಸಾರ ತ್ವರಿತ ಪರಿಹಾರ ನೀಡಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನಿರ್ದೇಶಿಸಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ದೌರ್ಜನ್ಯ ತಡೆ ಕಾಯ್ದೆ ಪ್ರಗತಿ ಪರಿಶೀಲನೆ ಹಾಗೂ 2023ನೇ ಸಾಲಿನ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ 3ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ದೌರ್ಜನ್ಯದಲ್ಲಿ ಕೊಲೆಯಾದ ವ್ಯಕ್ತಿಗಳ ಅವಲಂಬಿತರಿಗೆ ನೀಡಲಾಗುವ ಅನುಕಂಪ ಆಧಾರದ ನೇಮಕಾತಿ ಪ್ರಕರಣಗಳಲ್ಲಿ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿ, ಪ್ರಕರಣಗಳನ್ನು ಬೇಗ ಇತ್ಯರ್ಥ ಮಾಡಬೇಕು. ನೇಮಕಾತಿಗೆ ಅಗತ್ಯ ದಾಖಲೆ ಪೂರೈಸಲು ತುರ್ತು ಕ್ರಮವಹಿಸಬೇಕು” ಎಂದು ತಿಳಿಸಿದರು.
ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಸೇರಿದಂತೆ ಗ್ರಾಮ ಮಟ್ಟದಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ, ಸಮುದಾಯ ಅಭಿವೃದ್ಧಿಗೆ ಮೀಸಲಿರುವ ಅನುದಾನ, ನಿವಾಸಿಗಳ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಕಂದಾಯ ಇಲಾಖೆಯಿಂದ ಜಾಗೃತಿ ಮೂಡಿಸಬೇಕು” ಎಂದರು.

“ಎಲ್ಲ ಗ್ರಾಮಗಳಲ್ಲಿ ಶವಸಂಸ್ಕಾರಕ್ಕೆ ಸ್ಮಾಶನ ಭೂಮಿ ಇರಬೇಕು. ಸ್ಮಶಾನಕ್ಕಾಗಿ ಸರ್ಕಾರಿ ಜಮೀನು ಲಭ್ಯವಿರದಿದ್ದಲ್ಲಿ ಖಾಸಗಿ ಜಮೀನು ಖರೀದಿಸಲು ಅವಕಾಶವಿದೆ. ಅನುದಾನವೂ ಇದೆ. ಬೇಡಿಕೆ ಸಲ್ಲಿಸಬಹುದು. ಸಮುದಾಯದ ತೊಂದರೆಗಳಿದ್ದಲ್ಲಿ ಮುಕ್ತವಾಗಿ ಸಲ್ಲಿಸಿ, ಪರಿಶೀಲಿಸಿ ಸೂಕ್ತ ಕ್ರಮವಹಿಸಲಾಗುವುದು” ಎಂದು ಜಿಲ್ಲಾಧಿಕಾರಿ ತಿಳಿಸಿದರು.
“ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣಗಳು ನ್ಯಾಯಾಲಯದಲ್ಲಿ ಬೇಗ ಮುಕ್ತಾಯವಾಗಬೇಕು. ನೊಂದವರಿಗೆ ನ್ಯಾಯ ದೊರಕಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಹೇಳಿದರು.
“ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಪಿಎಫ್, ಇಎಸ್ಐ ಸೌಲಭ್ಯ ಸಿಗುವಂತೆ ಮುನ್ನೆಚ್ಚರಿಕೆ ವಹಿಸಬೇಕು. ಪೌರಕಾರ್ಮಿಕರಿಗೆ ವಿಶ್ರಾಂತಿ ಕಟ್ಟಡ, ಉಪಹಾರ ವ್ಯವಸ್ಥೆ, ವೈದ್ಯಕೀಯ ಸೌಲಭ್ಯ ನಿಯಮಿತವಾಗಿ ದೊರೆಯುವಂತೆ ಮಾಡಬೇಕು” ಎಂದು ಸೂಚಿಸಿದರು.
“ಪೌರಕಾರ್ಮಿಕರ ಬ್ಯಾಂಕ್ ಕೆವೈಸಿ ಅಪ್ಡೇಟ್ ಮಾಡಿಸಬೇಕು. ಅಗತ್ಯವಿರುವಲ್ಲಿ ಪೌರಕಾರ್ಮಿಕರಿಗೆ ಸಂಕಷ್ಟ ಭತ್ಯೆ ನೀಡುವ ಕುರಿತು ಮಹಾನಗರ ಪಾಲಿಕೆಯಿಂದ ಸರ್ಕಾರಕ್ಕೆ ಸಲ್ಲಿಕೆ ಆಗಿರುವ ಪ್ರಸ್ತಾವನೆಗೆ ಅನುಮೊದನೆ ಪಡೆಯಲು ನಿಯಮಾನುಸಾರ ಕ್ರಮವಹಿಸಬೇಕು” ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಮನರೇಗಾ ಕಾರ್ಮಿಕರ ಮುಂದಿವೆ ನೂರೆಂಟು ಸಮಸ್ಯೆಗಳು; ಕೇಳೋರ್ಯಾರು?
“ಹುಬ್ಬಳ್ಳಿ ಇಎಸ್ಐ ಆಸ್ಪತ್ರೆಗೆ ಅಗತ್ಯ ವೈದ್ಯಕೀಯ ಸಿಬ್ಬಂದಿ, ವೈದ್ಯರನ್ನು ನೇಮಿಸಿ, ವರದಿ ನೀಡಬೇಕು” ಎಂದು ಆಸ್ಪತ್ರೆಯ ಅಧೀಕ್ಷಕರಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.
ಪ.ಜಾ/ಪ.ಪಂ ಸಮುದಾಯದ ರೈತರಿಗೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಹೈನುಗಾರಿಕೆ ಮತ್ತು ಸ್ವಾವಲಂಬಿ ಯೋಜನೆಗಳ ಪ್ರಯೋಜನ ಅರ್ಹರಿಗೆ ಸಲ್ಲಬೇಕು. ಮಧ್ಯವರ್ತಿಗಳ ಹಾವಳಿ ಆಗದಂತೆ, ಪಾರದರ್ಶಕವಾಗಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು” ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಜಿಲ್ಲೆಯ ಹಲವು ಇಲಾಖೆಗಳ ಅಧಕಿಕಾರಿಗಳು ಇದ್ದರು.





