ಧಾರವಾಡ ಜಿಲ್ಲೆಯಲ್ಲಿ 18 ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯುವ ಹೆಸರಿನಲ್ಲಿ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ಖಂಡಿಸಿ ಡಿ. 16ರಂದು ಧಾರವಾಡದ ವಿವೇಕಾನಂದ ವೃತ್ತದಲ್ಲಿ ವಿದ್ಯಾರ್ಥಿಗಳು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಧಾರವಾಡದಲ್ಲಿ 18 ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸುವುದರ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುತ್ತೋಲೆಯನ್ನು ಹೊರಡಿಸುವುದರ ಮೂಲಕ ಸುತ್ತ ಮುತ್ತಲಿನ ಶಾಲೆಗಳನ್ನು ಮುಚ್ಚುವುದಕ್ಕೆ ಮುಂದಾಗಿದ್ದಾರೆ. ಶಿಕ್ಷಣ ಸಚಿವರು ನಾವು ಒಂದೇ ಒಂದು ಶಾಲೆಯನ್ನು ಮುಚ್ಚುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಅದರ ಜೊತೆಗೆ ಸುತ್ತಮುತ್ತಲಿನ ಹಳ್ಳಿಗಳ ವಿದ್ಯಾರ್ಥಿಗಳನ್ನು ಕೆಪಿಎಸ್ ಶಾಲೆಗೆ ಕರೆ ತರಲು ವಾಹನಗಳನ್ನು ಕಲ್ಪಿಸಲಾಗಿದೆ ಎಂದು ಹೇಳುತ್ತಿದ್ದಾರೆ. ಸರ್ಕಾರದ ಆದೇಶಗಳು ಹೇಳುವುದೇ ಒಂದು ಶಿಕ್ಷಣ ಸಚಿವರ ಹೇಳಿಕೆ ಮತ್ತೊಂದು ಆದ್ದರಿಂದ ಕನ್ನಡ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂಬ ಸಚಿವರ ಒಳ್ಳೆಯ ಆಸೆ ನಿಜವಾದಲ್ಲಿ ಈ ಕೂಡಲೇ ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಲಿಖಿತ ಆದೇಶ ಹೊರಡಿಸಲಿ ಎಂದು ಆಗ್ರಹಿಸಿದರು.
ಈ ಹಿನ್ನೆಲೆಯಲ್ಲಿ ಎಐಡಿಎಸ್ಓ ಕರ್ನಾಟಕ ರಾಜ್ಯ ಸಮಿತಿಯು ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40,000 ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಸುವರ್ಣ ಸೌಧ ಚಲೋಗೆ ಕರೆ ನೀಡಿದ್ದು ಮುಂಚೆ ಇದಕ್ಕೆ ಅನುಮತಿ ಕೊಟ್ಟಿದ್ದು ನಂತರ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಅದನ್ನು ರದ್ದುಗೊಳಿಸಿದೆ. ಇದು ಪ್ರಜಾತಾಂತ್ರಿಕ ದೇಶದಲ್ಲಿ ಹೋರಾಟದ ಹಕ್ಕನ್ನು ಕಗ್ಗೊಲೆಗೊಳಿಸುವ ಪ್ರಯತ್ನವಾಗಿದೆ. ಸರ್ಕಾರ ಈ ಆದೇಶವನ್ನು ಹಿಂತೆಗೆದುಕೊಳ್ಳುವವರೆಗೂ ರಾಜ್ಯದ ಜನತೆ ಹಳ್ಳಿ ಹಳ್ಳಿಗಳಲ್ಲಿ ಪ್ರತಿಭಟನೆ ಮಾಡುತ್ತಾರೆ ಇದನ್ನು ಎದುರಿಸಲು ಸರ್ಕಾರ ತಯಾರಾಗಬೇಕು ಎಂದರು.
ಇದನ್ನೂ ಓದಿ ಧಾರವಾಡ | ರೈಲು ಹಳಿಗೆ ಬಿದ್ದು ವಿದ್ಯಾರ್ಥಿನಿ ಸಾವು
ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷೆ ಸಿಂಧೂ ಕೌದಿ, ಕಛೇರಿ ಕಾರ್ಯದರ್ಶಿ ಸ್ಪೂರ್ತಿ ಚಿಕ್ಕಮಠ, ಕಾರ್ಯಕರ್ತರಾದ ಶಾಂತೇಶ್, ಸಿದ್ದು, ರವಿ, ಪ್ರಜ್ವಲ್, ಪರಶುರಾಮ್ ಹಾಗೂ ವಿದ್ಯಾರ್ಥಿಗಳು ಇದ್ದರು.





