ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಗ್ರಹಿಸಿ ಧಾರವಾಡದಲ್ಲಿ ಜನಸಾಮಾನ್ಯರ ವೇದಿಕೆ ಹಾಗೂ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನೆಗೆ ನಿರಾಕರಿಸಿದ್ದ ಪೊಲೀಸರು 34 ಜನ ಹೋರಾಟಗಾರರನ್ನು ಬಂಧಿಸಿದರು. ಈ ವೇಳೆ ಉದ್ಯೋಗಾಕಾಂಕ್ಷಿಗಳು ಬಂಧನ ಖಂಡಿಸಿ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗುತ್ತಾ, ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಉದ್ಯೋಗಾಕಾಂಕ್ಷಿ ಮಹಿಳೆಯೊಬ್ಬರು ಮಾತನಾಡಿ, ನಮ್ಮನ್ನು ಬಂಧಿಸಲು ನಾವೇನು ಏನು ಕೇಳುತ್ತಿದ್ದೇವೆ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕೇಳುತ್ತಿದ್ದೇವೆ. ಉದ್ಯೋಗಾಕಾಂಕ್ಷಿಗಳು ಏನಾದ್ರೂ ದರೋಡೆ ಮಾಡಿದ್ದಾರಾ? ಕೊಲೆ ಮಾಡಿದ್ದಾರಾ? ಅವರನ್ನು ಅರೆಸ್ಟ್ ಮಾಡುತ್ತಿದ್ದಾರೆ. ನಾವ್ ಯಾರು ದೌರ್ಜನ್ಯ ಮಾಡುತ್ತಿಲ್ಲ ಆದರೆ ಪ್ರತಿಭಟನೆಯನ್ನು ಹತ್ತಿಕ್ಕು ಅಂತ ಕೆಲಸ ಏಕೆ ಮಾಡುತ್ತಿದ್ದೀರಿ? ಎಂದು ಪ್ರಶ್ನಿಸಿದರು. ನಾವು ಶಾಂತಿಯುತವಾಗಿ ಪ್ರತಿಭಟನೆಯನ್ನು ಮಾಡುತ್ತಿದ್ದಾಗ ನಮ್ಮನ್ನು ಅರಿಸ್ಟ್ ಮಾಡಲು ಬರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡ ಶಂಕರ ಅಂಬ್ಲಿ ಮಾತನಾಡಿ, ಉದ್ಯೋಗಾಕಾಂಕ್ಷಿಗಳು ತಮ್ಮ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲು ಅವಕಾಶವನ್ನು ಮಾಡಿಕೊಡದೆ ಪೊಲೀಸ್ ವ್ಯವಸ್ಥೆಯನ್ನು ಬಳಸಿಕೊಂಡು ಸರ್ಕಾರವು ವಿದ್ಯಾರ್ಥಿಗಳನ್ನು ಬಂಧನ ಮಾಡ್ತಾ ಮತ್ತು ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳನ್ನು ಮಂಡಿಸಲು ಅವಕಾಶ ಮಾಡಿಕೊಡದೆ ಇರುವ ಸರ್ಕಾರದ ನಡೆಯನ್ನು ರೈತ ಸಂಘಟನೆಗಳು ತೀವ್ರವಾಗಿ ಖಂಡಿಸುತ್ತದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸಾಂವಿಧಾನಿಕ ಹಕ್ಕಿಗೆ ಚ್ಯುತಿ ತರುವ ಕೆಲಸ ಸರ್ಕಾರ ಮಾಡುತ್ತದೆ. ನಾವರೂ ಯಾರು ಹೋರಾಟಗಾರರು ಕಾನೂನುಬಾಹಿರವಾಗಿ ನಡೆದುಕೊಂಡಿಲ್ಲ. ಪ್ರತಿಭಟನೆಯನ್ನು ಮಾಡುವುದಾಗಿ ಮೊದಲೇ ಪೊಲೀಸರ ಗಮನಕ್ಕೆ ತರಲಾಗಿತ್ತು ಆದರೂ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಐಎಮ್ಎಸ್ಎಸ್ ಸಂಘಟನೆಯ ಯುವತಿಯೊಬ್ಬರು ಮಾತನಾಡಿ, ಇದೇ 2025 ರ ಜುಲೈ ತಿಂಗಳಿನಲ್ಲಿ ಕೇಂದ್ರ ಸರ್ಕಾರದ 78 ಇಲಾಖೆಗಳಲ್ಲಿ 9.79 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂದು ಹಣಕಾಸು ಸಚಿವಾಲಯವು ಒಪ್ಪಿಕೊಂಡಿದೆ. ರೈಲ್ವೆ ಇಲಾಖೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ನಮ್ಮ ರಾಜ್ಯದ 43 ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ ಇವೆ. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ದೊಡ್ಡ ಪ್ರಮಾಣದಲ್ಲಿ ಉದ್ಯೋಗಗಳ ಭರ್ತಿಗೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಮೂಗಿಗೆ ತುಪ್ಪ ಸವರುವಂತೆ ಇಲ್ಲೊಂದಿಷ್ಟು, ಅಲ್ಲೊಂದಿಷ್ಟು ನೇಮಕಾತಿಗಳನ್ನು ಮಾಡಿಕೊಳ್ಳುವ ಅಧಿಸೂಚನೆಗಳನ್ನು ಹೊರಡಿಸುತ್ತಿವೆ.
ಉದ್ಯೋಗ ಪಡೆಯಬೇಕೆಂದು ಹಲವಾರು ವರ್ಷಗಳಿಂದ ತಯಾರಿ ನಡೆಸುತ್ತಿರುವ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಹೋಲಿಸಿದರೆ ಇದು ಅರೆಕಾಸಿನ ಮಜ್ಜಿಗೆಯಂತಾಗಿದೆ. ಮತ್ತೊಂದೆಡೆ ಕೇಂದ್ರ, ರಾಜ್ಯ ಸರ್ಕಾರಗಳೆರಡೂ ಆಸ್ತಿತ್ವದಲ್ಲಿರುವ ಉದ್ಯೋಗಗಳನ್ನು ವ್ಯವಸ್ಥಿತವಾಗಿ ತೆಗೆದುಹಾಕಿ, ಖಾಲಿ ಹುದ್ದೆಗಳನ್ನು ರದ್ದುಗೊಳಿಸಿವೆ. ಯುವಜನರನ್ನು ಅಕ್ಷರಶಃ ಬೀದಿಗೆ ತಳ್ಳಿವೆ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಿಕೊಳ್ಳಬೇಕೆಂದು ಹಾಗೂ ಈ ಕೆಳಗಿನ ಇನ್ನಿತರ ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಇಂದು ಧಾರವಾಡದಲ್ಲಿ ಪ್ರತಿಭಟನೆ ಮೂಲಕ ತಮ್ಮನ್ನು ಆಗ್ರಹಿಸುತ್ತೇವೆ ಎಂದರು.
ಈ ಕುರಿತು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ಉದ್ಯೋಗ ಕಾಂಕ್ಷಿಗಳು ಬೃಹತ್ ಪ್ರತಿಭಟನಾ ರ್ಯಾಲಿ ಮಾಡುವುದಾಗಿ ಅನುಮತಿ ಕೋರಿದ್ದರು. ಈ ಹಿನ್ನೆಲೆಯಲ್ಲಿ ಕೆಲವು ಗ್ರಂಥಾಲಯಗಳಿಗೆ ಅವರು ಭೇಟಿ ಕೊಟ್ಟು ಅಹೋರಾತ್ರಿ ಧರಣಿ ಮಾಡುತ್ತೇವೆ. ರಸ್ತೆ ಬಂದ್ ಮಾಡುತ್ತೇವೆ ಎಂದೆಲ್ಲ ಹೇಳಿದ್ದರು. ಆದ್ದರಿಂದ ಪ್ರತಿಭಟನಾ ಸಮಯದಲ್ಲಿ ಯಾರಾದರೂ ಪಿಡಿಗೇಡಿಗಳು ಅಹಿತಕರ ಘಟನೆಗಳಿಗೆ ಆಲೋಚನೆ ಮಾಡಿ, ಸಂಘರ್ಷಗಳು ಉಂಟಾಗಬಾರದು ಮತ್ತು ಸೂರ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹೋರಾಟಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಅದಾಗಿಯೂ, ಹೋರಾಟಕ್ಕೆ ಇಳಿದಿದ್ದಾರೆ ಎಂದರು.
ಹಕ್ಕೊತ್ತಾಯಗಳು:
1. ನೇಮಕಾತಿಯನ್ನು ಕೆಲದೇ ಹುದ್ದೆಗಳಿಗೆ ಸೀಮಿತಗೊಳಿಸದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. 2. ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ವಯೋಮಿತಿಯನ್ನು ಎಸ್.ಸಿ, ಎಸ್.ಟಿ ಹಾಗೂ ಒಬಿಸಿಗೆ 33 ಹಾಗೂ ಸಾಮಾನ್ಯ ವರ್ಗಕ್ಕೆ 30 ವರ್ಷಗಳಿಗೆ ಹೆಚ್ಚಿಸಿ ಯಾವುದೇ ನೆಪಗಳನ್ನು ಕೊಡದೇ ಶೀಘ್ರವೇ ನೇಮಕಾತಿ ಅಧಿಸೂಚನೆ ಹೊರಡಿಸಬೇಕು. 3. ರಾಜ್ಯದಲ್ಲಿ ಕಳೆದ ನಾಲೈದು ವರ್ಷಗಳಿಂದ ಸರಿಯಾದ ನೇಮಕಾತಿಗಳು ನಡೆಯದ ಹಿನ್ನೆಲೆಯಲ್ಲಿ ಎಲ್ಲ ನೇಮಕಾತಿಗಳಿಗೆ ಅರ್ಹ ವಯೋಮಿತಿಯನ್ನು 5 ವರ್ಷಗಳಿಗೆ ಸಡಿಲಿಕೆ ಮಾಡಬೇಕು. 4. ಮೀಸಲಾತಿ, ಒಳ ಮೀಸಲಾತಿ ಗೊಂದಲಗಳನ್ನು ಕೂಡಲೇ ಪರಿಹರಿಸಿ ಅಧಿಸೂಚನೆಗಳನ್ನು ಹೊರಡಿಸಬೇಕು. 5. ಎಲ್ಲಾ ನೇಮಕಾತಿಗಳಲ್ಲಿ ದುಬಾರಿ ಅರ್ಜಿ ಶುಲ್ಕವನ್ನು ಕೈಬಿಡಬೇಕು ಹಾಗೂ ಪರೀಕ್ಷಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. 6. KPSC, KEA, KSP, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ನೇಮಕಾತಿ ಪ್ರಾಧಿಕಾರಗಳು ಪ್ರತಿ ವರ್ಷ ಖಾಲಿ ಇರುವ ಹುದ್ದೆಗಳ ಸಂಖ್ಯೆ ಹಾಗೂ ವಾರ್ಷಿಕ ಕ್ಯಾಲೆಂಡರನ್ನು ಪ್ರಕಟಿಸಿ ನಿಗದಿತ ವೇಳಾಪಟ್ಟಿಯಂತೆ ನೇಮಕಾತಿ ಮಾಡಿಕೊಳ್ಳಬೇಕು. 7. ಎಲ್ಲಾ ನೇಮಕಾತಿ ಪ್ರಕ್ರಿಯೆಗಳಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಎಲ್ಲಾ ರೀತಿಯ ಪರೀಕ್ಷಾ ಆಕ್ರಮಗಳನ್ನು ತಡೆಗಟ್ಟಬೇಕು. 8. ಕೇಂದ್ರ ಸರ್ಕಾರದ ಯುಪಿಎಸ್ಸಿ- ಸಿಎಸ್ಇ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲೂ ನಡೆಸಬೇಕು. 9. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಹೆಚ್ಚಿರುವ ಜಯನಗರ, ಸಪ್ತಾಪುರ, ಶ್ರೀನಗರ, ಕಲ್ಯಾಣನಗರ ಭಾಗದಲ್ಲಿ ಅವರಿಗೆ ಅನುಕೂಲವಾಗುವಂತೆ ಇಂದಿರಾ ಕ್ಯಾಂಟಿನ್ ತೆರೆಯಬೇಕು.
ಇದನ್ನೂ ಓದಿ ಧಾರವಾಡ | ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ; ಸೂಕ್ತ ತನಿಖೆಗೆ ಸಂತ್ರಸ್ತರ ಒತ್ತಾಯ
ಪ್ರತಿಭಟನೆಯಲ್ಲಿ ಜನಸಾಮಾನ್ಯರ ವೇದಿಕೆಯ ಸಂಚಾಲಕ ಎಲ್ಲಪ್ಪ ಹೆಗಡೆ, ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೇವಾಡಿ, ಎಸ್ಎಫ್ಐ’ನ ರಾಜ್ಯದ್ಯಕ್ಷ ನಾಗರಾಜ್ ಚಲವಾದಿ, ನಾವು ದ್ರಾವಿಡ ಕನ್ನಡಿಗರು ಚಳುವಳಿಯ ಅಭಿ ವಕ್ಕಲಿಗ, ಹೋರಾಟ ಸಮಿತಿಯ ರಾಜ್ಯ ಸಹಸಂಚಾಲಕ ಭವಾನಿಶಂಕರ್.ಎಸ್.ಗೌಡ, ಹೋರಾಟಗಾರರು, ರೈತ ಸಂಘಟಕರು, ವಿದ್ಯಾರ್ಥಿ ಸಂಘಟನೆಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.





