ಪ್ರತಿ ಮನೆಗೂ ನಳ ಸಂಪರ್ಕ ಕಲ್ಪಿಸುತ್ತಿರುವ ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಪೈಪ್ಲೈನ್ ಅಳವಡಿಸಲು ರಸ್ತೆಗಳನ್ನು ಅಗೆದಿದ್ದು, ಆ ಕಾಮಗಾರಿ ಪೂರ್ಣಗೊಂಡ ಬಳಿಕ ಯಥಾಸ್ಥಿತಿಯಲ್ಲಿ ರಸ್ತೆಗಳನ್ನು ಕಾಂಕ್ರಿಟ್ ಹಾಕಿ ಮುಚ್ಚಬೇಕು ಎಂದು ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಾಟೀಲ್ ಭುವನೇಶ್ ದೇವಿದಾಸ್ ಅವರು ಸಂಬಂಧಪಟ್ಟ ಅಭಿಯಂತರರು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಗ್ರಾಮೀಣ ಯೋಜನೆಯಡಿ ಕೈಗೊಂಡಿರುವ ಹಲವು ಕಾಮಗಾರಿಗಳನ್ನು ಪರಿಶೀಲನೆ ನಡೆಸಲು ಭೇಟಿ ನೀಡಿದ ವೇಳೆ ಮಾತನಾಡಿದರು.
ಜಿ. ಬಸವನಕೊಪ್ಪ ಗ್ರಾಮ ಪಂಚಾಯಿತಿ ನೀರಾಸಾಗರ ಗ್ರಾಮಕ್ಕೆ ಭೇಟಿ ನೀಡಿದರು, ಜಲಜೀವನ್ ಮಿಷನ್ ಯೋಜನೆಯಡಿ ಅಳವಡಿಸಲಾಗಿರುವ ಕಾರ್ಯಾತ್ಮಕ ನಳ(ನಲ್ಲಿ) ಸಂಪರ್ಕ(ಮನೆ ಮನೆಗೆ ಗಂಗೆ) ಕಾಮಗಾರಿಗಳನ್ನು ಗ್ರಾಮಸ್ಥರು ನಲ್ಲಿಗೆ ಪೂಜೆ ಮಾಡುವುದನ್ನು ವೀಕ್ಷಿಸಿದರು. ಸರ್ಕಾರಿ ಶಾಲೆ ಅಂಗನವಾಡಿಗಳಿಗೆ ಭೇಟಿ ನೀಡಿ, ಮಕ್ಕಳು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿ, ಶಾಲೆಯಲ್ಲಿ ಬಿಸಿಯೂಟ, ಮೊಟ್ಟೆ ಹಾಗೂ ಪೌಷ್ಠಿಕ ಆಹಾರ ನೀಡುವ ಬಗ್ಗೆ ಮಾಹಿತಿ ಪಡೆದರು.
“ಪೈಪ್ಲೈನ್ ಹಾಗೂ ನಲ್ಲಿಗಳು ಹಾಳಾದಲ್ಲಿ ಕೂಡಲೇ ದುರಸ್ತಿ ಕೈಗೊಳ್ಳಬೇಕು. ಎಲ್ಲ ಒಎಚ್ಟಿಗಳಿಗೆ ಎರಡೂ ಬದಿಯಲ್ಲು ರೈಲಿಂಗ್ ಅನ್ನು ಅಳವಡಿಸಿಕೊಳ್ಳಲು ಮತ್ತು ಅವುಗಳ ಸುತ್ತ ಮುತ್ತಲು ಶುಚಿತ್ವ ಹಾಗೂ ತಿಂಗಳಿಗೊಮ್ಮೆ ಸ್ವಚ್ಚಗೊಳಿಸಬೇಕು” ಎಂದು ಸೂಚಿಸಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಹೊಸ ಕೂಸಿನ ಮನೆ ಉದ್ಘಾಟಸಿ ಮಾತನಾಡಿ, “ಕೂಸಿನ ಮನೆಯಲ್ಲಿ ಕಡ್ಡಾಯವಾಗಿ ಮಕ್ಕಳಿಗೆ ಮೂಲ ಸೌಕರ್ಯ ಇರುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವುವಲ್ಲಿ ಸಂಬಂಧಿಸಿದವರು ನಿಗಾವಹಿಸಬೇಕು” ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಕೊಡಗಿನಲ್ಲಿ ಮಳೆ ಅಬ್ಬರಕ್ಕೆ ಮಹಿಳೆ ಬಲಿ; ರಾಜ್ಯದ 6 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ
ಸಂಗದೇವರಕೊಪ್ಪ ಗ್ರಾಮ ಪಂಚಾಯಿತಿ ಮಡಕಿಹೊನ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಜಲಜೀವನ್ ಮಿಷನ್ನ ಕಾಮಗಾರಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಜಗದೀಶ್, ಕಲಘಟಗಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ, ಸಹಾಯಕ ನಿರ್ದೇಶಕರು, ಅಭಿಯಾಂತರು, ಶಿಕ್ಷಕರು, ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು, ಪಿಡಿಒ ಸೇರಿದಂತೆ ಗ್ರಾಮಸ್ಥರು ಇದ್ದರು.





