ಕೆಪಿಎಸ್- ಮ್ಯಾಗ್ನೆಟ್ ಶಾಲೆಗಳಡಿ ಸುತ್ತಲಿನ ಶಾಲೆಗಳ ವಿಲೀನದೊಂದಿಗೆ 25,000ಕ್ಕೂ ಅಧಿಕ ಸರ್ಕಾರಿ ಶಾಲೆಗಳಿಗೆ ಕಂಟಕ ತಂದೊಡ್ಡಿರುವ ರಾಜ್ಯ ಸರ್ಕಾರದ ವಿರುದ್ಧ ಇಂದು ನ. 21ರಂದು AIDSO ವಿದ್ಯಾರ್ಥಿ ಸಂಘಟನೆಯಿಂದ ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಮಾತನಾಡಿ, “ಸರ್ಕಾರದ ಆದೇಶದ ಪ್ರಕಾರ, 800 ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಗಳು ಎಂದು ಗುರುತಿಸಲಾಗಿದೆ. ಅಂದರೆ ಕರ್ನಾಟಕ ಪಬ್ಲಿಕ್ ಶಾಲೆಯ ಸುತ್ತಮುತ್ತಲಿನ 1ರಿಂದ 5 ಕಿ.ಮೀ ವ್ಯಾಪ್ತಿಯ, 50ಕ್ಕಿಂತ ಕಡಿಮೆ ದಾಖಲಾತಿ ಹೊಂದಿರುವ ಶಾಲೆಗಳನ್ನು ತನ್ನಲ್ಲಿ ವಿಲೀನಗೊಳಿಸಿಕೊಳ್ಳಲಿದೆ. ಈ ಹೆಸರಿನಲ್ಲಿ ಆ ಶಾಲೆಗಳನ್ನು ಮುಚ್ಚಲಾಗುತ್ತದೆ. ಈಗ ಸ್ಥಾಪಿಸಲಾಗುತ್ತಿರುವ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಕೆಪಿಎಸ್ ಮಾಗ್ನೆಟ್ ಶಾಲೆಗೆ, ಹೊಂಗನೂರಿನ ಆರು ಕಿಮೀ ವ್ಯಾಪ್ತಿಯ 7 ಪ್ರಾಥಮಿಕ ಶಾಲೆಗಳನ್ನು ವಿದ್ಯಾರ್ಥಿ, ಉಪಾಧ್ಯಾಯರು ಮತ್ತು ಪರಿಕರಗಳ ಸಮೇತ ವಿಲೀನಗೊಳಿಸಲು ಸರ್ಕಾರವು ಆದೇಶ ಹೊರಡಿಸಿರುವುದು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರಲ್ಲಿ 110ಕ್ಕೂ ಅಧಿಕ ಸಂಖ್ಯೆಯ ದಾಖಲಾತಿ ಹೊಂದಿರುವ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಅತ್ಯಂತ ಖಂಡನೀಯ ಎಂದರು.
“KPS ಶಾಲೆಗಳನ್ನು ತೆರೆಯುವುದಕ್ಕೆ ನಮ್ಮ ವಿರೋಧವಿಲ್ಲ ಆದರೆ ಗ್ರಾಮ ಪಂಚಾಯಿತಿಗೆ ಮಾತ್ರ ಒಂದು ಶಾಲೆಗಳನ್ನು ತೆರೆಯುವುದನ್ನು ನಾವು ವಿರೋಧಿಸುತ್ತೇವೆ. ಯಾಕೆಂದರೆ, ಕರ್ನಾಟಕದಲ್ಲಿ ಒಟ್ಟು 49,600 ಸರ್ಕಾರಿ ಶಾಲೆಗಳಿದೆ. ಆದರೆ ಗ್ರಾಮ ಪಂಚಾಯಿತಿಗಳು ಇರುವುದು 5,900; ಹಿಗಾದಲ್ಲಿ ಕರ್ನಾಟಕದಲ್ಲಿ 5,900 ಶಾಲೆಗಳು ಮಾತ್ರ ಉಳಿಯುತ್ತದೆ. ಧಾರವಾಡದ ನವಲೂರಿನ ಪ್ರೌಢಶಾಲೆ, ತಡಕೋಡದ ಪ್ರೌಢಶಾಲೆ, ಯಾದವಾಡದ ಪ್ರೌಢಶಾಲೆ ಕಲಘಟಗಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಭ್ಯಾಪುರ ಹಾಗೂ ಇನ್ನಿತರೆ ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಯನ್ನಾಗಿ ಪರಿವರ್ತಿಸುವುದಾಗಿ ಹೇಳಿದ್ದಾರೆ. ಸರ್ಕಾರವು ಪ್ರತಿ ಹಳ್ಳಿಗೆ ಬಸ್ ಬಿಡುತ್ತೇವೆ ಎಂದು ಹೇಳುತ್ತಾರೆ. ಆದರೆ ಈಗಾಗಲೇ ಎಷ್ಟೋ ಹಳ್ಳಿಗಳಲ್ಲಿ ಬಸ್ ಇಲ್ಲದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಸ್ತವತೆ ಹೀಗಿರುವಾಗ, 6-7 ಕಿಮೀ ದೂರದ ಶಾಲೆಯ ಬಡ ಮಕ್ಕಳು ಶಿಕ್ಷಣದಿಂದ ದೂರ ಉಳಿಯುತ್ತಾರಷ್ಟೇ! ಈ ಯೋಜನೆಗೆ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕಿನಿಂದ ಈಗಾಗಲೇ 2500 ಕೋಟಿ ಸಾಲ ಪಡೆದಿರುವ ಸರ್ಕಾರವು ಕಾರ್ಪೊರೇಟ್ ಹಿತಾಸಕ್ತಿ ಕಾಪಾಡಲು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ.
“ನಮ್ಮ ದೇಶದ ನವೋದಯ ಚಳುವಳಿ ಹರಿಕಾರರಾದ ಈಶ್ವರ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಪುಲೆ ಸೇರಿದಂತೆ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿಗಳಾದ ನೇತಾಜಿ-ಭಗತ್ ಸಿಂಗ್ ಅವರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರವು ತಳಮಟ್ಟದ ಶಾಲೆಗಳನ್ನು ಮುಚ್ಚುತ್ತಿದೆ. ಇದನ್ನು ವಿರೋಧಿಸಿ ರಾಜ್ಯದಲ್ಲಿ ಬಲಿಷ್ಠ ಹೋರಾಟ ಕಟ್ಟುವುದು ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಣ-ಪ್ರೇಮಿ ಜನತೆಯ ಜವಾಬ್ದಾರಿ. ಈ ನಿಟ್ಟಿನಲ್ಲಿ ಶಿಕ್ಷಣವನ್ನು ರಕ್ಷಿಸಲು ಮತ್ತೊಂದು ನವೋದಯ ಚಳುವಳಿ ಕಟ್ಟಬೇಕು” ಎಂದು ಕರೆ ನೀಡಿದರು.
ಇದನ್ನೂ ಓದಿ ಧಾರವಾಡ | 129 ಡ್ರಗ್ಸ್ ಬಳಕೆದಾರರ ವಿರುದ್ಧ 24 FIR ದಾಖಲು
ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಸಿಂಧು ಕೌದಿ, ಉಪಾಧ್ಯಕ್ಷ ಚಂದ್ರು, ಜಿಲ್ಲಾ ಕಚೇರಿ ಕಾರ್ಯದರ್ಶಿ ಸ್ಫೂರ್ತಿ, ಕಾರ್ಯಕರ್ತ ಸಿದ್ದು, ರವಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.





