ಈ ದೇಶದ ವಾಲ್ಮೀಕಿ ಸಮುದಾಯದವರು ವೀರ, ದೀರರಾಗಿದ್ದು, ಅನೇಕ ಕೋಟೆ, ನಾಡನ್ನು ಆಳಿದ ರಾಜ ವಂಶಜರು. ಆದಿಕವಿ ಮಹರ್ಷಿ ವಾಲ್ಮೀಕಿ ನಮಗೆಲ್ಲ ಆದರ್ಶಪ್ರಾಯರು. ಅವರಂತೆ ಸ್ವಾಭಿಮಾನಿ ಬದುಕು ನಮ್ಮದಾಗಬೇಕು ದೇಶದಲ್ಲಿ ಸುಮಾರು 18 ಕೋಟಿ ವಾಲ್ಮೀಕಿ ಸಮುದಾಯ ಇದೆ. ವಾಲ್ಮೀಕಿ ಸಮುದಾಯ, ತಳ ಸಮುದಾಯಗಳು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಬೆಳೆದು ಬರಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಜಾಗೃತರಾಗಬೇಕು. ಎಂದು ವಿಧಾನ ಪರಿಷತ್ ನೂತನ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಆದಿಕವಿ ಮಹರ್ಷಿ ವಾಲ್ಮೀಕಿಯವರನ್ನು ನಾವು ಭಾವನಾತ್ಮಕವಾಗಿ ಕಟ್ಟಿಕೊಳ್ಳಬೇಕು. ವಾಲ್ಮೀಕಿಯನ್ನು ಕಳ್ಳ, ದರೋಡೆಕೋರ ಅನ್ನುವುದು ತಪ್ಪು. ಅವರ ರಾಮಾಯಣ ಮಹಾಕಾವ್ಯದ ಸಾಧನೆ ಇಡೀ ಜನಾಂಗಕ್ಕೆ ಪ್ರೇರಣೆ ಆಗಬೇಕು. ಮಹರ್ಷಿ ವಾಲ್ಮೀಕಿ ಓರ್ವ ಪ್ರಕಾಂಡ ಪಂಡಿತ. ರಾಮಾಯಣದಲ್ಲಿನ ಶ್ಲೋಕಗಳು, ಖಂಡಗಳು ವಾಲ್ಮೀಕಿಯವರ ಪಾಂಡಿತ್ಯವನ್ನು ತೋರಿಸಿದ್ದು, ವಿಶ್ವಮಟ್ಟದಲ್ಲಿ ಭಾರತದ ಘನತೆ, ಗೌರವವನ್ನು ಹೆಚ್ಚಿಸಿದೆ. ವಾಲ್ಮೀಕಿ ಸಮುದಾಯ ಸಹಕಾರಿ ರಂಗದಲ್ಲಿರಬೇಕು. ಮಹರ್ಷಿ ವಾಲ್ಮೀಕಿ ಜಿಲ್ಲಾ ಸಹಕಾರಿ ಸಂಘ ರಚನೆ ಆಗಬೇಕು. ಈ ನಿಟ್ಟಿನಲ್ಲಿ ಸಮಾಜದ ಪ್ರಮುಖರು ಕಾರ್ಯ ಪ್ರವೃತ್ತರಾಗಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ವಿದ್ಯಾವಂತರಾಗಬೇಕು, ಬುದ್ದಿವಂತರಾಗಬೇಕು. ಅಂದಾಗ ಮಾತ್ರ ಸಮಾಜ ಅಭಿವೃದ್ಧಿ ಆಗುತ್ತದೆ ಎಂದು ಹೇಳಿದರು.
ಮುಖಂಡ ಚಂದ್ರಶೇಖರ ಜುಟ್ಟಲ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರನ್ನು ನಾವೇಲ್ಲರೂ ಸ್ವಾಭಿಮಾನದ ಪ್ರತೀಕವಾಗಿ ಸ್ವೀಕರಿಸಬೇಕು. ಅನಕ್ಷರಸ್ಥ ವಾಲ್ಮೀಕಿ ಇಡೀ ವಿಶ್ವಕ್ಕೆ ರಾಮಾಯಣ ಮಹಾಕಾವ್ಯ ನೀಡಿ, ಸರ್ವಧರ್ಮಿಯರಿಗೂ ಪೂಜ್ಯರಾಗಿದ್ದಾರೆ. ಮಹರ್ಷಿ ವಾಲ್ಮೀಕಿ ಜೀವನದ ಪಾಠವು ನಮ್ಮ ಬದುಕಿನ ಬದಲಾವಣೆಗೆ ನಾಂದಿ ಆಗಬೇಕು. ವಾಲ್ಮೀಕಿ ನೀಡಿರುವ ರಾಮಾಯಣ ಮತ್ತು ಡಾ.ಬಿ.ಆರ್.ಅಂಬೇಡ್ಕರ ನೀಡಿರುವ ಸಂವಿಧಾನವನ್ನು ನೆನೆದು, ನೆನಪಿಸಿಕೊಂಡು, ನಮ್ಮವರ ಸಾಧನೆಗೆ ನಾವು ಹೆಮ್ಮೆ ಪಡಬೇಕು ಎಂದರು.
ಕವಿವಿ ಸಿಂಡಿಕೇಟ ಮಾಜಿ ಸದಸ್ಯ ಡಾ. ಕಲ್ಮೇಶ ಹಾವೇರಿಪೇಟ ಮಾತನಾಡಿ, ಕವಿವಿಯ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠದ ಕಟ್ಟಡ ಕಾಮಗಾರಿ ಬೇಗ ಆರಂಭಿಸಬೇಕು. ಮಹರ್ಷಿ ವಾಲ್ಮೀಕಿ ಅವರು ನಮಗೆಲ್ಲ ಆದರ್ಶವಾಗುವಂತೆ ವಿದ್ಯಾರ್ಥಿಗಳಲ್ಲಿ, ಯುವ ಸಮುದಾಯದಲ್ಲಿ ಅವರ ವಿಚಾರಧಾರೆಗಳನ್ನು ಬೆಳೆಸಬೇಕೆಂದು ಹೇಳಿದರು. ಸಮುದಾಯದ ಜಿಲ್ಲಾ ಅಧ್ಯಕ್ಷ ಮೋಹನ ಗುಡಿಸಲಮನಿ ಮಾತನಾಡಿ, ಸಮಾಜಕ್ಕೆ ವಾಲ್ಮೀಕಿ ಸಮುದಾಯದ ಕೊಡುಗೆ ಮತ್ತು ಸಮಾಜದ ಮುಂದಿರುವ ಸವಾಲುಗಳ ಕುರಿತು ವಿವರಿಸಿದರು. ವಿದ್ಯಾರ್ಥಿ ಎಚ್.ಶ್ರೀನಿವಾಸ ಮಾತನಾಡಿ, ವಾಲ್ಮೀಕಿ ರಾಮಾಯಾಣದ ಕುರಿತು ವಿವರಿಸಿದರು. ಕೆಸಿಡಿ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಶರಣು ಮುಷ್ಠಿಗೇರಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಜೀವನ ಮತ್ತು ಬದುಕು ಹಾಗೂ ವಾಲ್ಮೀಕಿ ರಾಮಾಯಣ, ವಾಲ್ಮೀಕಿ ಸಮುದಾಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಮಾತನಾಡಿ, ಮಹರ್ಷಿ ವಾಲ್ಮೀಕಿ ನಮ್ಮ ರಾಷ್ಟ್ರ ಕಂಡ ಮಹಾಪುರುಷ. ಭಾರತವು ಕಂಡ ಎಲ್ಲ ಮಹಾಪುರುಷರು ತಮ್ಮ ಜೀವನದ ಪಾಠಗಳಿಂದ, ಜೀವನ ಸಂದೇಶಗಳಿಂದ ಮಹಾತ್ಮರಾಗಿದ್ದಾರೆ. ವಾಲ್ಮೀಕಿ ಅವರ ರಾಮಾಯಣ ಮಹಾಕಾವ್ಯವು ಸತ್ಯದ ದಾರಿ ಆಗಿದೆ. ನಮ್ಮ ಜೀವನಕ್ಕೆ ಬದುಕುವ ಮಾರ್ಗವಾಗಿದೆ. ಅದನ್ನು ಅರಿತು ನಡೆಯಬೇಕು. ಭಾರತ ಕಂಡ ಎಲ್ಲ ಮಹಾತ್ಮರ, ಮಹಾಪುರುಷರ ಬದುಕು ನಮಗೆ ಜೀವನ ಸಂದೇಶವಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಮುಖಂಡ ಎಂ.ಅರವಿಂದ, ಪರಮೇಶ ಕಾಳೆ, ಸುಶೀಲಾ ಚಲವಾದಿ, ಪರಮೇಶ ಕಟ್ಟಿಮನಿ, ಜಿಲ್ಲಾ ಹಾಗೂ ಉಪವಿಭಾಗ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತ ಸಮಿತಿ ಸದಸ್ಯರು ಮತ್ತು ವಿವಿಧ ಮುಖಂಡರು ವೇದಿಕೆಯಲ್ಲಿ ಇದ್ದರು. ಸುರೇಶ ಗುಂಡಣ್ಣವರ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ. ಶುಭ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ನಿರ್ದೇಶಕಿ ಎಂ.ಬಿ.ಸಣ್ಣೇರ ವಂದಿಸಿದರು. ಪ್ರವೀಣ ಮಸ್ಕಿ ನಿರೂಪಿಸಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಅ. 13ರಂದು ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳ ತೆರವಿಗೆ ಬಹಿರಂಗ ಹರಾಜು
ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮುದಾಯದ ಸಾಧಕರನ್ನು ಮತ್ತು ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಕ್ರೀಡಾಪಟುಗಳಿಗೆ ಮತ್ತು ಮಾಜಿ ಸೈನಿಕರಿಗೆ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಾಲ್ಮೀಕಿ ಸಮುದಾಯದ ಪ್ರಮುಖರು, ಸಂಘಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.





