ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಎನ್ನುವುದು ಸರಕಾರಿ ನೌಕರನೆ ಆಗಿರಲಿ, ಸಾರ್ವಜನಿಕರೆ ಆಗಿರಲಿ, ಪ್ರತಿ ವ್ಯಕ್ತಿಯ ಜೀವನದಲ್ಲಿ ಅಳವಡಿಸಿಕೊಂಡಿರಬೇಕು. ಅಂದಾಗ ಮಾತ್ರ ನಾವು ಸ್ವಸ್ಥ, ನೆಮ್ಮದಿಯ ಜೀವನ ಕಾಣಲು ಸಾಧ್ಯವಾಗುತ್ತದೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಅಯೋಜಿಸಿದ್ದ, ಜವಾಬ್ದಾರಿ ಧ್ಯೇಯವಾಕ್ಯದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡುತ್ತಾ, ಪ್ರಾಮಾಣಿಕತೆ, ಪಾರದರ್ಶಕತೆ ವ್ಯಕ್ತಿಯ ವೈಯಕ್ತಿಕ, ಸಾರ್ವಜನಿಕ ಜೀವನದಲ್ಲಿ ಅಗತ್ಯವಿದೆ. ಭ್ರಷ್ಟಾಚಾರ, ಅನೈತಿಕತೆ ಬಗ್ಗೆ ಜಾಗೃತಿ ಮೂಡಿಸುವ ಇಂದು ಅಗತ್ಯವಿದೆ. ಪ್ರತಿ ಹಂತದಲ್ಲೂ ಕಾನೂನಾತ್ಮಕವಾಗಿ, ನೈತಿಕವಾಗಿ ಶುದ್ಧ ಜೀವನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಕಾನೂನು ಹೇಳುವ ರೀತಿಯಲ್ಲಿ ಎಲ್ಲರೂ ನಡೆದುಕೊಳ್ಳಬೇಕು. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ (ಪ್ರಭಾರ) ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಕುಮಾರ ಸಿ. ಮಾತನಾಡಿ, ಭ್ರಷ್ಟಾಚಾರ ಒಂದು ರೀತಿಯ ಕ್ಯಾನ್ಸರ್. ಅದಕ್ಕೆ ಆರಂಭದಲ್ಲೆ ಚಿಕಿತ್ಸೆ ನೀಡಬೇಕು. ಪ್ರತಿಯೊಬ್ಬ ಸರಕಾರಿ ಅಧಿಕಾರಿ, ನೌಕರರು ತಮ್ಮ ದಿನನಿತ್ಯದ ವೃತ್ತಿಯಲ್ಲಿ ಪ್ರಾಮಾಣಿಕತೆ, ಮಾನವೀಯತೆ ಅಳವಡಿಕೊಂಡು, ನಿರ್ವಹಿಸಿದರೆ ಮಾತ್ರ ಉತ್ತಮ ಆಡಳಿತ, ಕಲ್ಯಾಣ ರಾಜ್ಯದ ಕಲ್ಪನೆ ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ದೇಶಿಸಿದ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್.ದೊಡ್ಡಮನಿ ಮಾತನಾಡಿದರು. ಲೋಕಾಯುಕ್ತ ಸಿಪಿಐ ಪ್ರಭುಲಿಂಗಯ್ಯ ಹಿರೇಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆರತಿ ದೇವಶಿಖಾಮಣಿ ಮತ್ತು ಮೊಹಮ್ಮದಾಲಿ ತಹಸಿಲ್ದಾರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ಧಲಿಂಗಪ್ಪ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡ್ರ ವೇದಿಕೆಮೇಲಿದ್ದರು. ಕಾರ್ಯಕ್ರಮದಲ್ಲಿ ಲೋಕಾಯುಕ್ತ ಡಿವೈಎಸ್ಪಿ ವೆಂಕನಗೌಡ ಪಾಟೀಲ, ರವೀಂದ್ರ ಕುರಬಗಟ್ಡಿ, ಪೊಲೀಸ್ ಇನ್ಸ್ಪೆಕ್ಟರ್ ಕರುಣೇಶಗೌಡ, ಬಸವರಾಜ ಬುದ್ನಿ, ಪ್ರಸಾದ ಪರಣೇಕರ, ತಹಸಿಲ್ದಾರ ಡಿ.ಎಚ್.ಹೂಗಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.





