ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿರುವ ಪ್ರತಿಷ್ಠಿತ ದತ್ತಿ ‘ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಜಿಲ್ಲೆಯ ಹಿರಿಯ ಸಾಹಿತಿ ಹಾಗು ವೈದ್ಯರಾದ ಡಾ. ಕೆ.ಬಿ. ಸೂರ್ಯಕುಮಾರ್ ಭಾಜನರಾಗಿದ್ದಾರೆ.
ಡಾ. ಕೆ.ಬಿ. ಸೂರ್ಯಕುಮಾರ್ ರಚಿಸಿರುವ ‘ವೈದ್ಯ ಕಂಡ ವಿಸ್ಮಯ’ ವಿಭಿನ್ನ ವಿಶ್ವದ ಇಣುಕು ನೋಟ ಕೃತಿಗೆ ಪ್ರಶಸ್ತಿ ಕೊಡಮಾಡಲಾಗುತ್ತಿದೆ. ಜಿಲ್ಲೆಯ ದೈನಿಕ ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾದ ಬಿ.ಎಸ್. ಗೋಪಾಲಕೃಷ್ಣ ರವರ ಹೆಸರಿನಲ್ಲಿ, ಅವರ ಪುತ್ರರು ಸ್ಥಾಪಿಸಿರುವ ಈ ದತ್ತಿ ಪ್ರಶಸ್ತಿ ಇದಾಗಿದ್ದು, ದತ್ತಿ ಪ್ರಶಸ್ತಿಯ ಆಯ್ಕೆಗಾಗಿ ಜಿಲ್ಲೆಯ ಪುರುಷ ಬರಹಗಾರರು ಸಲ್ಲಿಸಿದ್ದ ಕೃತಿಗಳನ್ನು ಜಿಲ್ಲೆಯ ಹಿರಿಯ ಮೂರು ಸಾಹಿತಿಗಳು ಪ್ರತ್ಯೇಕವಾಗಿ ಈ ಪುಸ್ತಕಗಳನ್ನು ಪರಿಶೀಲಿಸಿ ನೀಡಿದ ಅಂಕಗಳನ್ನು ಜಿಲ್ಲಾ ಸಮಿತಿ ಒಟ್ಟುಗೂಡಿಸಿ ಪ್ರಶಸ್ತಿ ಘೋಷಿಸಲಾಗಿದೆ.
ಡಾ. ಕೆ.ಬಿ. ಸೂರ್ಯಕುಮಾರ್ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ 18 ವರ್ಷಗಳ ಕಾಲ ವೈದ್ಯಕೀಯ ವಿಭಾಗ ಮತ್ತು ವಿಧಿ ವಿಜ್ಞಾನ ವೈದ್ಯರಾಗಿ ಸೇವೆ ಸಲ್ಲಿಸಿರುತ್ತಾರೆ. 90ರ ದಶಕದಲ್ಲಿ ಕರ್ನಾಟಕದ ಆರೋಗ್ಯ ಇಲಾಖೆಯಲ್ಲಿದ್ದ ಏಕೈಕ ವಿಧಿ ವಿಜ್ಞಾನ ಪರಿಣಿತರು ಎಂಬ ಹೆಗ್ಗಳಿಕೆ ಇವರದ್ದಾಗಿದೆ. ಕೊಡಗು, ಹಾಸನ, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಡೆದ ಅಸ್ವಾಭಾವಿಕ ಮರಣಗಳಲ್ಲಿ ಸ್ಥಳ ಪರೀಕ್ಷೆ ನಡೆಸಿ ಪೊಲೀಸರಿಗೆ ಅನೇಕ ಕೊಲೆಗಳನ್ನು ಭೇದಿಸಲು ಸಹಾಯ ಮಾಡಿದ್ದಾರೆ. ಕೊಡಗು ಸರ್ಕಾರಿ ವೈದ್ಯರ ಸಂಘ ಮತ್ತು ಕೊಡಗು ಲೇಖಕ ಹಾಗು ಕಲಾವಿದರ ಬಳಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಮಡಿಕೇರಿಯಲ್ಲಿ ವಾಸವಿರುವ ಇವರು, ಪ್ರಸ್ತುತ ಸುಳ್ಯ ಕೆ.ವಿ.ಜಿ ಮೆಡಿಕಲ್ ಕಾಲೇಜಿನ ವಿಧಿ ವಿಜ್ಞಾನ ವಿಭಾಗದಲ್ಲಿ ಪ್ರೊಫೆಸರ್ ಮತ್ತು ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಮನಗರ | ಫೆ.4ರಂದು ‘ಜಿಲ್ಲಾಧಿಕಾರಿ ಹಠಾವೋ, ರೈತ ಬಚಾವೋ’ ಆಂದೋಲನ
ಮುಂದೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ಮಾಹಿತಿ ನೀಡಿರುತ್ತಾರೆ.





