ದೇಶದ ಸ್ವಾತಂತ್ರ್ಯಕ್ಕಾಗಿ ಅಹರ್ನಿಶಿ ಶ್ರಮಿಸಿ, ಸಹಬಾಳ್ವೆ ಮತ್ತು ಸಾಮರಸ್ಯಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಹತ್ಯೆಯ ಕಹಿಯನ್ನು ನಾವು ಎಂದಿಗೂ ಮರೆಯಬಾರದು. ಆ ಕಹಿಯನ್ನು ಮರೆತು ಕೃತಘ್ನರಾಗಬಾರದು ಎಂದು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್ ಹೇಳಿದರು.
ಅವರು ಇಂದು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಗಾಂಧೀಜಿ ಹಾಗೂ ಇತರ ಧೀಮಂತರ ಸ್ಮರಣಾರ್ಥ ಆಯೋಜಿಸಲಾದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಅಗಲಿದ ಹುತಾತ್ಮರ ಗೌರವಾರ್ಥ ಕಾರ್ಯಕ್ರಮದ ಅಂಗವಾಗಿ ಮೌನಾಚರಣೆ ನಡೆಸಿ, ದೇಶಕ್ಕಾಗಿ ದುಡಿದು ನಮ್ಮನ್ನಗಲಿದ ಎಲ್ಲಾ ಹಿರಿಯ ಚೇತನರನ್ನು ನೆನಪಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯಲತಾ ಪಿ., ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಹುತಾತ್ಮರಿಗೆ ಗೌರವ ಸಲ್ಲಿಸಿದರು.





