ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ನಡೆದ ನಾ. ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಸಾಪ ತಾಲ್ಲೂಕು ಮಾಜಿ ಅಧ್ಯಕ್ಷ ಅಂಬೆಕಲ್ ನವೀನ್ ಮಾತನಾಡಿ, ತಮ್ಮ ಕಥೆಗಳಿಂದ ಪರಿಸರ ರಕ್ಷಣೆಗೆ ಇಳಿದವರು ಡಾ. ನಾ ಡಿಸೋಜ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಥೆ, ಕಾದಂಬರಿ, ಸಣ್ಣ ಕಥೆ ರಚಿಸುವಾಗ ಪರಿಸರ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಮನೋಜ್ಞವಾಗಿ ತಮ್ಮ ಕಥೆಗಳನ್ನು ಪ್ರಸ್ತುತ ಪಡಿಸುತ್ತಿದ್ದ ಡಾ. ನಾ ಡಿಸೋಜ ಅವರದ್ದು ಸ್ನೇಹಮಯಿ ವ್ಯಕ್ತಿತ್ವ. ಕಸಾಪ ದತ್ತಿನಿಧಿಗಳ ಮೂಲಕ ಈ ರೀತಿಯ ಕಾರ್ಯಕ್ರಮಗಳನ್ನು ನಡೆಸಿ ಮಕ್ಕಳಲ್ಲಿ ಸಾಹಿತ್ಯ ಪ್ರಜ್ಞೆ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಕೊಡಗು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ಮಾತಾನಾಡಿ, “ನಾ. ಡಿಸೋಜ ಅವರದ್ದು ಅತ್ಯುತ್ತಮ ಸಾಹಿತ್ಯ. ಜಾನಪದ, ಪರಿಸರ, ಮಕ್ಕಳ ಸಾಹಿತ್ಯ, ಮಕ್ಕಳ ಕಥೆಗಳು, ಕಾದಂಬರಿ ಹೀಗೆ 80ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ ಅವರು ಹಲವಾರು ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಮಡಿಕೇರಿಯಲ್ಲಿ ನಡೆದ 80ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಮ್ಮೇಳನವನ್ನು ಸುಸೂತ್ರವಾಗಿ ನಡೆಸಿಕೊಟ್ಟಿದ್ದಾರೆ. ಸರಳ ಸಜ್ಜನಿಕೆಯ ಜಾತ್ಯಾತೀತ ಮನೋಭಾವದ ಡಾ. ನಾಬರ್ಟ್ ಡಿಸೋಜರವರ ಹೆಸರಿನಲ್ಲಿ ಕಸಾಪ ₹2 ಲಕ್ಷ ರೂಪಾಯಿ ದತ್ತಿ ಸ್ಥಾಪನೆ ಮಾಡಿದ್ದು, ಅದರ ಬಡ್ಡಿ ಹಣದಲ್ಲಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸುವ ಆಶಯವಿದೆ” ಎಂದರು.

ಶಿಕ್ಷಣ ಸಂಯೋಜಕರಾದ ಐ. ಜಿ ಜಾನೆಟ್ ಮಾತನಾಡಿ, “ಕಸಾಪ ನಡೆಸುತ್ತಿರುವ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿ ಮೂಡಿಸುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರೆ ಮುಂದೊಂದು ದಿನ ಸಾಹಿತಿಯಾಗಿ ಬೆಳೆಯಲು ಅವಕಾಶವಾಗುತ್ತದೆ ಎಂದರು. ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸುತ್ತಲ ಪ್ರಪಂಚವನ್ನು ಸೃಜನಶೀಲತೆಯಿಂದ ಗಮನಿಸುವ ಮೂಲಕ ತಾವು ಸಾಧಿಸುವ ಸಾಧನೆಯಲ್ಲಿ ಮಾನವೀಯತೆ ಮತ್ತು ಪ್ರೀತಿ ವಿಶ್ವಾಸದಿಂದ ಮುನ್ನಡೆಯಬೇಕು” ಎಂದು ಕರೆ ನೀಡಿದರು.
ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸ್ಪರ್ಧೆಗಳಲ್ಲಿ ತೊಡಗಿಸಿಕೊಂಡು ತಮ್ಮನ್ನು ತಾವು ಬೆಳೆಸಿಕೊಳ್ಳಬೇಕು. ಎಲ್ಲರೂ ಪ್ರಥಮ ಸ್ಥಾನ ಪಡೆಯಲು ಸಾಧ್ಯವಿಲ್ಲ. ಆದರೆ, ಮುಂದೊಂದು ದಿನ ಪಡೆಯುವ ಪ್ರಯತ್ನವನ್ನು ಮಾಡಬಹುದು ಎಂದರು.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುಣಮಟ್ಟದ್ದಾಗಿರಬೇಕು: ಸಂಸದ ಸುನೀಲ್ ಬೋಸ್
ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿ ವಾಸು ರೈ, ಗೌರವ ಕಾರ್ಯದರ್ಶಿ ರೇವತಿ ರಮೇಶ್, ಕಾಲೇಜಿನ ಪ್ರಾಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳು ಇದ್ದರು.





