ಮೈಸೂರಿನ ಜಯನಗರದಲ್ಲಿರುವ ಸಾಲುಮರದ ತಿಮ್ಮಕ್ಕ ಉದ್ಯಾನವನ ಮುಂಭಾಗದಲ್ಲಿ ಪರಿಸರ ಪ್ರೇಮಿಗಳಿಂದ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕನವರು ವಿಧಿವಶರಾದ ಹಿನ್ನೆಲೆಯಲ್ಲಿ, ಅವರ ಭಾವಚಿತ್ರ ಹಿಡಿದು ಸಂತಾಪ ಸಲ್ಲಿಸಿದರು.
ವೈದ್ಯರಾದ ಡಾ. ಎಸ್.ಪಿ. ಯೋಗಣ್ಣ ಮಾತನಾಡಿ, “ಮರಗಳನ್ನು ತನ್ನ ಹೆತ್ತ ಮಕ್ಕಳಂತೆ ಸಲುಹಿದ ಮಹಾತಾಯಿಯ ಪರಿಸರ ಪ್ರೇಮ, ಕಾಳಜಿ, ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದರೆ ಅದೇ ನಾವು ಅವರಿಗೆ ಸಲ್ಲಿಸಬಹುದಾದ ನಿಜವಾದ ಶ್ರದ್ಧಾಂಜಲಿ” ಎಂದು ಹೇಳಿದರು
ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಕೆ.ಬಿ. ಲಿಂಗರಾಜು ಮಾತನಾಡಿ, ಇದುವರೆಗೂ 8000ಕ್ಕೂ ಹೆಚ್ಚು ಮರಗಿಡಗಳನ್ನು ನೆಟ್ಟು ಪೋಷಿಸಿದ ಕೀರ್ತಿ ತಿಮ್ಮಕ್ಕ ಅವರಿಗೆ ಸಲ್ಲುತ್ತದೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ಕನ್ನಡ ವಿಶ್ವ ವಿದ್ಯಾಲಯದ ನಾಡೋಜ ಪ್ರಶಸ್ತಿ, ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಸಂಘ-ಸಂಸ್ಥೆಗಳ ಪ್ರಶಸ್ತಿಗೆ ಭಾಜನರಾಗಿದ್ದ ಸಾಲುಮರದ ತಿಮ್ಮಕ್ಕ ಅವರ ಸಾಧನೆ ಇಂದಿನ ಯುವ ಪೀಳಿಗೆಗೆ ಪ್ರೇರಣೆ ನೀಡಲಿ. ಅವರ ನಿಧನ ಕನ್ನಡ ನಾಡಿಗೆ ತುಂಬಲಾರದ ನಷ್ಟ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಕೆ ಆರ್ ನಗರ | ಮಕ್ಕಳ ದಿನಾಚರಣೆಯಂದು ಮಕ್ಕಳ ಹಕ್ಕುಗಳ ಅರಿವಿನ ಕಾರ್ಯಕ್ರಮ
ಸಂತಾಪ ಸಭೆಯಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಜೆಡಿಎಸ್ ಕಾರ್ಯಧ್ಯಕ್ಷ ಎಸ್. ಪ್ರಕಾಶ್, ಪ್ರಿಯದರ್ಶನ್, ಜಿ. ರಾಘವೇಂದ್ರ, ವರದೇಗೌಡ, ಜೀವದಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕಡಕೋಳ ಜಗದೀಶ್, ಅಪೂರ್ವ, ಸುರೇಶ್, ಲೋಕೇಶ್, ಜತ್ತಿ ಪ್ರಸಾದ್, ಸುಚೇಂದ್ರ ಸೇರಿದಂತೆ ಇನ್ನಿತರರು ಇದ್ದರು.





