ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಘಟಕ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಮದ್ಯಪಾನ ಸಂಯಮ ಮಂಡಳಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ವತಿಯಿಂದ ಮಡಿಕೇರಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ‘ಮದ್ಯ ಹಾಗೂ ಮಾದಕ ವಸ್ತುಗಳ ಸೇವೆನೆಯಿಂದ ಉಂಟಾಗುವ ದುಷ್ಪರಿಣಾಮ’ ಕುರಿತು ಬುಧವಾರ ನಡೆದ ಬೀದಿ ನಾಟಕ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪೊಲೀಸ್ ಅಧೀಕ್ಷಕಿ ಆರ್.ಎನ್. ಬಿಂದುಮಣಿ, ಸ್ವಸ್ಥ ಸಮಾಜ ನಿರ್ಮಿಸಲು ಎಲ್ಲರೂ ಕೈಜೋಡಿಸಿ; ಮದ್ಯ, ಮಾದಕ ತ್ಯಜಿಸುವಂತೆ ಕರೆ ನೀಡಿದರು.
ಇತ್ತೀಚಿನ ದಿನಮಾನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಮಕ್ಕಳೇ ತಂದೆ-ತಾಯಿ, ಸೋದರ-ಸೋದರಿಯನ್ನು ಹತ್ಯೆ ಮಾಡುವುದು ವರದಿಯಾಗುತ್ತಿದೆ. ಮಾದಕ ವ್ಯಸನ ಯಾವ ಹಂತಕ್ಕೆ ಬೇಕಾದರೂ ಕೊಂಡೊಯ್ಯ ಬಲ್ಲದು. ಸಂಬಂಧಗಳು ಅರಿವಿಗೆ ಬಾರದಂತೆ ವರ್ತನೆ ಅತಿರೇಕಕ್ಕೆ ತಂದು ನಿಲ್ಲಿಸಿದೆ. ಇದನ್ನೆಲ್ಲಾ ಗಮನಿಸಿದಾಗ ಸಮಾಜ ಎತ್ತ ಸಾಗುತ್ತಿದೆ ಎಂಬುದರ ಬಗ್ಗೆ ಅವಲೋಕನ ಮಾಡಬೇಕಿದೆ ಎಂದರು.
ಯುವ ಜನರು ಗಾಂಜಾ, ಅಫೀಮು, ಹೆರಾಯಿನ್ ಮತ್ತಿತರ ಮಾದಕ ವಸ್ತುಗಳ ಚಟಕ್ಕೆ ಒಳಗಾಗಿ, ಮಾನಸಿಕ ಒತ್ತಡಕ್ಕೆ ತುತ್ತಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಯುವ ಜನತೆ ಮಾನಸಿಕ ಚಂಚಲತೆಗೆ ಒಳಗಾಗದೆ, ನೆಮ್ಮದಿಯಾಗಿ, ಉತ್ತಮ ಬದುಕು ನಡೆಸಲು ಕುಟುಂಬದಲ್ಲಿ ನಿರ್ಮಲ ವಾತಾವರಣ ಇರಬೇಕು. ಕುಟುಂಬದಿಂದಲೇ ಒಳ್ಳೆಯ ವಾತಾವರಣ ನಿರ್ಮಾಣವಾದಲ್ಲಿ ಯುವಜನರು ಸರಿದಾರಿಯತ್ತ ಸಾಗಲು ಸಾಧ್ಯವಾಗಲಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಯೋಚಿಸಬೇಕು ಎಂದು ಸಲಹೆ ಮಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಎ.ಜೆ. ಲೋಕೇಶ್ ಮಾತನಾಡಿ, ಆರೋಗ್ಯಯುತ ಸಮಾಜ ನಿರ್ಮಾಣದಿಂದ ಉತ್ತಮ ಬದುಕು ನಡೆಸಲು ಸಾಧ್ಯ. ಆ ದಿಸೆಯಲ್ಲಿ ಒಳ್ಳೆಯ ಚಿಂತನೆ, ಭವಿಷ್ಯದ ಗುರಿ ಮತ್ತು ಉದ್ದೇಶ ಹೊಂದಿರಬೇಕು. ಮಾದಕ ವಸ್ತುಗಳ ಸೇವನೆಯಂತಹ ಕೆಟ್ಟ ಚಟಕ್ಕೆ ಬಲಿಯಾಗದೆ, ಸಮಾಜದಲ್ಲಿ ಇತರರಂತೆ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು. ನಶಾ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು ಮಹಾನಗರ ಪಾಲಿಕೆಯಿಂದ ‘ಮೈ ಮರ’ ಸಮೀಕ್ಷೆ
ಬೀದಿ ನಾಟಕ ಚಾಲನೆ ನೀಡುವಾಗ ವಾರ್ತಾಧಿಕಾರಿ ಚಿನ್ನಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್ಪೋರ್ಸ್ಮೆಂಟ್ ಅಧಿಕಾರಿ ಡಾ. ಆನಂದ್, ಸರ್ಕಾರಿ ಪ್ರೌಢಶಾಲೆ ಮುಖ್ಯೋಪಧ್ಯಾಯಿನಿ ಶಶಿಕಲಾ, ಡಿವೈಎಸ್ಪಿ ಐ.ಪಿ. ಮೇದಪ್ಪ, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಚಂದ್ರಶೇಖರ್, ನಗರ ಇನ್ಸ್ಪೆಕ್ಟರ್ ಅನ್ನಪೂರ್ಣ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ಪ್ರೌಢಶಾಲೆಯ ಶಿಕ್ಷಕರು ಸೇರಿದಂತೆ ಇನ್ನಿತರರು ಇದ್ದರು.





