ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರ(ರೈತ)ರು ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಇಂದಿಗೆ 9ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟ ತೀವ್ರ ಸ್ವರೂಪ ಪಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸೋದು ಕಷ್ಟವಾಗುತ್ತಿದೆಯೆಂದು ಹೇಳಿ ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆದಿರುವುದಾಗಿ ತಿಳಿದುಬಂದಿದೆ.
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗದಿಮಾಡಬೇಕೆಂದು ಒತ್ತಾಯಿಸಿ ಹುಕ್ಕೇರಿ ತಾಲೂಕಿನ ಸಾವಿರಾರು ರೈತರು ಟ್ರ್ಯಾಕ್ಟರ್ಗಳ ಸಹಿತ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದು, ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಸುಮಾರು ಒಂದು ಗಂಟೆಗೂ ಅಧಿಕ ಕಾಲ ಹೆದ್ದಾರಿ ಬಂದ್ ಆಗಿದ್ದ ಪರಿಣಾಮ ಸಾವಿರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ವಾಹನ ಸವಾರರು ಪರದಾಡಿದರು. ಒಂದು ಗಂಟೆ ಬಳಿಕ ಸರ್ವೀಸ್ ರಸ್ತೆಯಲ್ಲಿ ರೈತರು ಹೋರಾಟ ಶುರು ಮಾಡಿದರು. ಇಲ್ಲಿಯೇ ಅಡುಗೆ ಕೂಡ ಮಾಡುತ್ತಿದ್ದಾರೆ. 3,500 ರೂ. ದರ ಘೋಷಿಸುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ. ಸದ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ಪೊಲೀಸರು ಮುಕ್ತ ಮಾಡಿದ್ದಾರೆ.





