2025ನೆಯ ಸಾಲಿನಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಬಡ ಮತ್ತು ಪ್ರತಿಭಾವಂತ ನೂರು ಮಕ್ಕಳಿಗೆ ಮುಂದಿನ ಎರಡು ವರ್ಷ ಪಿಯು ಶಿಕ್ಷಣ ಉಚಿತವಾಗಿ ನೀಡಲಾಗುತ್ತಿದೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ʼಕಳೆದ ಎಂಟು ವರ್ಷಗಳಿಂದ ಗೋಲ್ಡನ್ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆ ಏರ್ಪಡಿಸಲಾಗುತ್ತಿದ್ದು, ಇದರಿಂದ ಈ ಭಾಗದಿಂದ 800 ಮಕ್ಕಳು ಉಚಿತ ಶಿಕ್ಷಣ, ಸ್ಪರ್ಧಾತ್ಮಕ ತರಬೇತಿ ಪಡೆದುಕೊಂಡು ತಮ್ಮ ಭವಿಷ್ಯ ಉತ್ತಮವಾಗಿ ರೂಪಿಸಿಕೊಂಡಿದ್ದಾರೆʼ ಎಂದರು.
ʼಗೋಲ್ಡನ್ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಯಲ್ಲಿ ಮೊದಲ 25 ರ್ಯಾಂಕ್ ಪಡೆಯುವ ವಿದ್ಯಾರ್ಥಿಗಳು ಎರಡು ವರ್ಷ ಪಿಯುಸಿ ಉಚಿತ ಶಿಕ್ಷಣದ ಜತೆಗೆ ವಸತಿ ಮತ್ತು ಸ್ಪರ್ಧಾತ್ಮಕ ತರಬೇತಿ ಸೌಲಭ್ಯ ಪಡೆಯಲಿದ್ದಾರೆ. ನಂತರ ಕ್ರಮವಾಗಿ 75 ವಿದ್ಯಾರ್ಥಿಗಳು ಉಚಿತ ಶಿಕ್ಷಣ ಮತ್ತು ಸ್ಪರ್ಧಾತ್ಮಕ ತರಬೇತಿ ಸೌಲಭ್ಯ ಪಡೆಯಲಿದ್ದಾರೆʼ ಎಂದು ತಿಳಿಸಿದರು.
ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ʼಹಿಂದುಳಿದ ಭಾಗದ ಪ್ರಗತಿಗಾಗಿ ಡಾ.ಬಸವಲಿಂಗ ಪಟ್ಟದ್ದೇವರು ವಿದ್ಯಾ ದೇಗುಲ ತೆರೆದು ಈ ಭಾಗದ ವಿದ್ಯಾರ್ಥಿಗಳ ಬಾಳು ಬೆಳಗಿಸುತ್ತಿದ್ದಾರೆ. ಸ್ಕಾಲರ್ ಪ್ರವೇಶ ಪರೀಕ್ಷೆ ಏರ್ಪಡಿಸಿ ಬಡ, ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ, ತರಬೇತಿ ನೀಡಿ ಪ್ರೋತ್ಸಾಹ ತುಂಬಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಹಾಜರಾಗಿ ಸದುಪಯೋಗ ಪಡೆದುಕೊಳ್ಳಬೇಕುʼ ಎಂದು ತಿಳಿಸಿದರು.
ಪ್ರಾಚಾರ್ಯ ಬಸವರಾಜ ಮೊಳಕೀರೆ ಮಾತನಾಡಿ, ʼಗೋಲ್ಡನ್ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆ ಜ.5, 12, 19 ಮತ್ತು 25 ರಂದು ಏರ್ಪಡಿಸಲಾಗಿದೆ. ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದ್ದು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದ ಇದುವರೆಗೂ ಸುಮಾರು 7 ಸಾವಿರ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಈ ಪ್ರವೇಶ ಪರೀಕ್ಷೆ ಬರೆಯಬಹುದಾಗಿದೆʼ ಎಂದರು.
ಆಡಳಿತಾಧಿಕಾರಿ ಮೋಹನ ರೆಡ್ಡಿ ಮಾತನಾಡಿ, ʼಡಾ.ಬಸವಲಿಂಗ ಪಟ್ಟದ್ದೇವರ ಶೈಕ್ಷಣಿಕ ಕಾಳಜಿ, ದೂರದೃಷ್ಟಿ ಮೆಚ್ಚುವಂತಾಗಿದೆ. ಗುಣಮಟ್ಟದ ಶಿಕ್ಷಣ, ತರಬೇತಿ ಪರಿಣಾಮ ಗುರುಕುಲ ನೀಟ್, ಐಐಟಿ ಸಾಧಕರ ಕೇಂದ್ರವಾಗಿ ಪರಿವರ್ತನೆ ಆಗಿದೆ. ನೀಟ್ ಮತ್ತು ಐಐಟಿಯಲ್ಲಿ ಗಡಿ ಜಿಲ್ಲೆ ಬೀದರ್ ರಾಜ್ಯದಲ್ಲಿ ಮೂರನೇ ಸ್ಥಾನಕ್ಕೇರಿದೆ. ಇದರ ಹಿಂದೆ ಪೂಜ್ಯರ ಬಹುದೊಡ್ಡ ಪರಿಶ್ರಮವಿದೆʼ ಎಂದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಗುತ್ತಿಗೆದಾರ ಸಚಿನ್ ಆತ್ಮಹತ್ಯೆ : ಸಿಬಿಐ ತನಿಖೆಗೆ ಒಪ್ಪಿಸಲು ಬಿ.ವೈ.ವಿಜಯೇಂದ್ರ ಆಗ್ರಹ
ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರದ ಶಾಸಕ ಹರೀಶರಾವ ಪಿಂಪಳೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಇದ್ದರು.





