ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಬಿಜೆಪಿ ಗದಗ ಜಿಲ್ಲಾ ಘಟಕ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಏ.22ರಂದು ಗದಗ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಹಳೇ ಡಿ.ಸಿ ಆಫೀಸ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ರಸ್ತೆಯಲ್ಲಿ ಟಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ನೇಹಾಳನ್ನು ಹತ್ಯೆ ಮಾಡಿದ ಆರೋಪಿ ಫಯಾಜ್ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ನೇಹಾ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ ಅವರ ಕಾರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ, ಪೊಲೀಸರು ವಿದ್ಯಾರ್ಥಿಗಳನ್ನು ತಡೆದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಮಾತನಾಡಿ, ಹುಬ್ಬಳ್ಳಿ ನಗರದ ಕಾಲೇಜು ಕ್ಯಾಂಪಸ್ನಲ್ಲಿ ಹಾಡುಹಗಲೇ ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತನಿಖೆ ನಡೆಸಿ, ತಪ್ಪಿತಸ್ಥನಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳುವ ಬದಲು ತನಿಖೆಗೆ ಮುನ್ನವೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹಮಂತ್ರಿ ಜಿ.ಪರಮೇಶ್ವರ್ ವೈಯಕ್ತಿಕ ಕಾರಣದಿಂದ ಕೊಲೆ ನಡೆದಿದೆ ಎಂಬ ಹೇಳಿಕೆ ನೀಡಿದ್ದು, ಖಂಡನೀಯ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹರಿಹಾಯ್ದರು.
ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ ಮಾತನಾಡಿ, ಒಂದು ವಾರದಲ್ಲಿ ರಾಜ್ಯದ ವಿವಿಧೆಡೆಗಳಲ್ಲಿ ಎಂಟಕ್ಕೂ ಹೆಚ್ಚು ಹತ್ಯೆಗಳು ನಡೆದಿದ್ದು, ರಾಜ್ಯದ ಜನರು ಭೀತಿಯಲ್ಲಿದ್ದಾರೆ, ಎಂದು ಹೇಳಿದರು.
ಅಲ್ಪಸಂಖ್ಯಾತರ ತುಷ್ಟೀಕರಣ, ಹಿಂದೂಗಳ ಮೇಲಿನ ದ್ವೇಷದ ರಾಜಕಾರಣ, ಅಮಾಯಕ ಹಿಂದೂ ಹೆಣ್ಣು ಮಕ್ಕಳ ಕಗ್ಗೊಲೆ, ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ, ಪಾಕಿಸ್ತಾನ ಪರ ಘೋಷಣೆ ಕೂಗಿದರೆ ಪುರಸ್ಕಾರ ಹೀಗೆ ಮತೀಯ ಭಾವನೆಯಿಂದ ಸರ್ಕಾರವನ್ನು ನಡೆಸುತ್ತಿರುವುದು ಖಂಡನೀಯ ಎಂದರು.
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಕ್ರಮಕೈಗೊಳ್ಳುವುದು ಹಾಗೂ ನ್ಯಾಯಪರ ತನಿಖೆಯನ್ನು ಚುರುಕುಗೊಳಿಸಿ ತಪ್ಪಿತಸ್ಥ ವ್ಯಕ್ತಿಗೆ ಶಿಕ್ಷಿಸುವ ಕುರಿತು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಬಿಜೆಪಿ ಮುಖಂಡರಾದ ಅನಿಲ್ ಮೆಣಸಿನಕಾಯಿ, ಬಸವರಾಜ ಇಟಗಿ, ಜಿಲ್ಲಾ ವಕ್ತಾರ ಎಂ.ಎಂ.ಹಿರೇಮಠ, ರಾಜು ಕುಲಕರ್ಣಿ, ಎಂ.ಎಸ್.ಕರಿಗೌಡರ, ಅನೀಲ ಅಬ್ಬಿಗೇರಿ, ಜಗನ್ನಾಥಸ ಭಾಂಡಗೆ, ಸುರೇಶ ಚಿತ್ತರಗಿ, ಭದ್ರೇಶ ಕುಸ್ಲಾಪೂರ, ಬಾಬು ಸುಂಕದ, ದ್ಯಾಮಣ್ಣ ನೀಲಗುಂದ, ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜ ಪಾಟೀಲ, ಫಕ್ಕಿರೇಶ ರಟ್ಟಿಹಳ್ಳಿ, ವೀರಣ್ಣ ಅಂಗಡಿ, ಸಂತೋಷ ಅಕ್ಕಿ, ಪುನಿತ್ ಬೆನಕನವಾರಿ, ರವಿ ನರೇಗಲ್, ರವಿ ದಂಡಿನ, ಮಾಧ್ಯಮ ಸಂಚಾಲಕ ರಾಜೇಂದ್ರಪ್ರಸಾದ ಹೊನ್ನಗಲ್, ಕಾನೂನು ಪ್ರಕೋಷ್ಠದ ಜಿಲ್ಲಾ ಸಂಚಾಲಕರು ಕೆ.ಪಿ. ಕೋಟಿಗೌಡರ, ಬಿಜೆಪಿ ಕಾರ್ಯಕರ್ತರು, ನೂರಾರು ವಿದ್ಯಾರ್ಥಿಗಳು ಇದ್ದರು.





