ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದೆ. ಅಂತಹ ಸಂಸ್ಥೆಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ. ಗದಗದಲ್ಲಿ ಪ್ರತಿಭಟನೆ ನಡೆಸಿದ್ದು, ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ ಡಿವಿಪಿ ಜಿಲ್ಲಾಧ್ಯಕ್ಷ ಸುರೇಶ ವಾಯ್ ಚಲವಾದಿ, “ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರವೇಶಾತಿಗಳು ಪ್ರಾರಂಭವಾಗಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಬಡ ವಿದ್ಯಾರ್ಥಿಗಳಿಂದ ಬೇಕಾಬಿಟ್ಟಿ ಡೊನೇಷನ್ ಪಡಯುತ್ತಿದ್ದು, ಆರ್ಥಿಕವಾಗಿ ಹಿಂದುಳಿದ, ದಲಿತ ವಿದ್ಯಾರ್ಥಿಗಳು ಡೊನೇಷನ್ ಭರಿಸಲಾಗದೆ, ಸಂಕಷ್ಟಕ್ಕೆ ಸಿಲುಕಿದ್ದಾರೆ. ಉನ್ನತ ಶಿಕ್ಷಣ ಪಡೆಯುವ ಅವರ ಕನಸ್ಸು ಕನಸ್ಸಾಗಿಯೇ ಉಳಿಯುವಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರ ಹೊರಡಿಸಿರುವ ಆದೇಶದಂತೆ ತರಗತಿವಾರು ಶಾಲಾ ಕಾಲೇಜುಗಳಲ್ಲಿ ನಿಯಮಿತ ಪ್ರವೇಶ ಶುಲ್ಕವನ್ನ ತೆಗೆದುಕೊಂಡು ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು. ಆದರೆ, ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಸುತ್ತೋಲೆಯನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ಡೊನೆಷನ್ ಪಡೆಯುತ್ತಿರುವದು ವಿಪರ್ಯಾಸದ ಸಂಗತಿ. ಪ್ರಸ್ತುತ ದಿನಮಾನದಲ್ಲಿ ಶಿಕ್ಷಣ ಉಳ್ಳವರ ಪಾಲಾಗಿದೆ. ಬಡವರು ಕೂಲಿ ಕಾರ್ಮಿಕರ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದುಕೊಳ್ಳುವದು ಬಹಳ ಕಷ್ಟಕರವಾಗಿದೆ” ಎಂದು ಕಿಡಿಕಾರಿದ್ದಾರೆ.
“ಪ್ರತಿಷ್ಟಿತ ವಿದ್ಯಾ ಸಂಸ್ಥೆಗಳಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಮೀಸಲಾತಿಯನ್ವಯ ಪ್ರವೇಶಾತಿ ನೀಡಬೇಕೆಂಬ ಸರ್ಕಾರದ ಆದೇಶವಿದೆ. ಆದರೆ, ಕೆಲವು ಸಂಸ್ಥೆಗಳು ಸರ್ಕಾರದ ಆದೇಶವನ್ನು ಪಾಲಿಸದೇ ಬೇಕಾಬಿಟ್ಟಿಯಾಗಿ ಸಾಮಾನ್ಯ ಕೋಟಾದಡಿಯಲ್ಲಿ ದುಡ್ಡು ಕೊಟ್ಟ ವಿದ್ಯಾರ್ಥಿಗಳ ಪ್ರವೇಶ ಮಾಡಿಕೊಳ್ಳುತ್ತಿವೆ. ಪರುಸ್ಥಿತಿ ಹೀಗೆ ಮುಂದುವರಿದರೆ, ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿಯುವಂತಾಗುತ್ತದೆ. ಕೂಡಲೆ ಸರ್ಕಾರ ಎಚ್ಚೆತ್ತುಕೊಂಡು ಶಿಕ್ಷಣ ಕ್ಷೇತ್ರವನ್ನು ವ್ಯಾಪಾರೀಕರಣ ಮಾಡಿಕೊಂಡ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಬಡ ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ಪಡೆದುಕೊಳ್ಳಲು ಅನುಕೂಲ ಕಲ್ಪಿಸಬೇಕು” ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಸ್ಸಿ ಎಸ್ಟಿ ಧೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರಾದ ಬಸವರಾಜ ಮುಳ್ಳಾಳ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮಣ ಪೂಜಾರ.ಜಿಲ್ಲಾ ಸಂಪರ್ಕ ಕಾರ್ಯದರ್ಶಿ ಗುಡದಪ್ಪ ತಳಗೇರಿ.ರೋಣ ತಾಲೂಕಾಧ್ಯಕ್ಷ ರಮೇಶ ನಂದಿ.ಪ್ರಧಾನ ಕಾರ್ಯದರ್ಶಿ ಅಭಿಷೇಕ ಕೊಪ್ಪದ.ದಲಿತ ಯುವ ಮುಖಂಡರಾದ ವಿನೋದ ಹಡಗಲಿ.ಗವಿಸಿದ್ದಪ್ಪ ವಿಭೂತಿ.ರಮೇಶ ಸಂಗಳದ.ಪ್ರಹ್ಲಾದ ಭಜಂತ್ರಿ ಮುಂತಾದವರು ಉಪಸ್ಥಿತರಿದ್ದರು.




