ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಧರಣಿಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕ ಸಂಘದ ರಾಜ್ಯ ಅಧ್ಯಕ್ಷರು ಹಣಮಂತಗೌಡ ಕಲ್ಮನಿ ಮಾತನಾಡಿ “ಉನ್ನತ ಶಿಕ್ಷಣ ಇಲಾಖೆಯ ಪರಿಷ್ಕೃತ ಮೆರಿಟ್ ಪಟ್ಟಿಯಿಂದಾಗಿ ಸೇವಾನುಭವ ಇರುವವರು ಕೂಡ ಕೆಲಸ ಕಳೆದುಕೊಳ್ಳುವಂತಾಗಿದೆ’ ಎಂದು ದೂರಿದರು.
“ಬೆಳಗಾವಿ ಅಧಿವೇಶನದ ಒಳಗಾಗಿ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ. ಕಾನೂನು ಸಚಿವ ಎಚ್.ಕೆ.ಪಾಟೀಲರು ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸುವ ವಿಶ್ವಾಸ ಇದೆ. ಪ್ರತಿಭಟನೆಯಲ್ಲಿ ಸುತ್ತಮುತ್ತಲಿನ ಜಿಲ್ಲೆಗಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು.
ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ತೋಂಟದ ಸಿದ್ದರಾಮ ಸ್ವಾಮೀಜಿ ಮಾತನಾಡಿ, ‘ವಿದ್ಯಾರ್ಥಿಗಳ ಬದುಕು ಬೆಳಗಬೇಕಾದವರ ಬದುಕೇ ಕತ್ತಲೆಯ ಕೂಪಕ್ಕೆ ಬಿದ್ದಿದೆ. ಇಲ್ಲಿ ಮಾನವೀಯತೆಗಿಂತ ದೊಡ್ಡದು ಬೇರೇನಿಲ್ಲ. ಇದುವರೆಗೆ ಕಡಿಮೆ ಗೌರವಧನಕ್ಕೆ ಸೇವೆ ಸಲ್ಲಿಸಿದವರ ಬದುಕು ಹಸನುಗೊಳಿಸುವ ಹೊಣೆ ಸರ್ಕಾರದ್ದು’ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಕೊಪ್ಪಳ, ಕಲಬುರಗಿ ಜಿಲ್ಲೆಯ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.





