ಈ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನವಾಗಿದೆ ಎಂದು ಗದಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹನಬರಟ್ಟಿ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, “ಪ್ರತಿ ವರ್ಷದಂತೆ ಶ್ರೀ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ಪಂಗಡದ ಏಳಿಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಅಕ್ಟೋಬರ್ 7 ರಂದು ಜರಗುವ ಜಯಂತಿಯಂದು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ” ಎಂದು ಸಭೆಗೆ ಮಾಹಿತಿ ನೀಡಿದರು.
“ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಬೇಕು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರ ನಿಗದಿ ಮಾಡಿದ ದಿನದಂದು ಜಿಲ್ಲಾಡಳಿತ ಭವನದಲ್ಲಿ ಸಾಂಕೇತಿಕವಾಗಿ ನಡೆಸಲಾಗುವುದು. ಮುಂದೆ ಸಮುದಾಯದವರು ತಿರ್ಮಾನಿಸಿದಂತೆ ನಗರದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಲಾಗುವುದು” ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ತಿಳಿಸಿದರು.
ವಾಲ್ಮೀಕಿ ಅವರ ಸಾಧನೆ ಕುರಿತು ಮುಂದಿನ ಪೀಳಿಗೆಗೆ ತಿಳಿಸಿಕೊಡುವಂತೆ ಆಗಬೇಕು. ಹಾಗಾಗಿ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ವಾಲ್ಮೀಕಿ ಅವರ ಕುರಿತು ಸಣ್ಣ ಕಥೆಗಳ ಬರವಣಿಗೆಯ ಸ್ಪರ್ಧೆ ಏರ್ಪಡಿಸಿ ಆಯ್ದ ಕಥೆಗಳನ್ನು ಸಂಕಲನದಲ್ಲಿ ಪ್ರಕಟಿಸುವಂತೆ ಹೇಳಿದರು.
ಸಮುದಾಯದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಸಾಹಿತಿಗಳು, ಪಿ ಎಚ್ ಡಿ ಮಾಡಿದಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ವಾಲ್ಮೀಕಿ ಅವರ ಕುರಿತು ಸುರ್ಧಿಘವಾಗಿ ಅಧ್ಯಯನ ಮಾಡಿದ ಇಬ್ಬರು ಸಂಪನ್ಮೂಲ ವ್ಯಕ್ತಿಗಳ ಹೆಸರುಗಳನ್ನು ತಿಳಿಸಲು ಸಮುದಾಯದ ಮುಖಂಡರಿಗೆ ತಿಳಿಸಿದರು.
ಇದನ್ನೂ ಓದಿ: ಗದಗ | ಕೈಗೆ ಬಂದ ತುತ್ತು ಕಸಿದ ಮಳೆ; ಸಂಕಷ್ಟದಲ್ಲಿ ಹೆಸರು ಬೆಳೆದ ರೈತರ ಬದುಕು
ಸಮುದಾಯದ ಮುಖಂಡರು ಮಾತನಾಡಿ, “ಭೀಷ್ಮ ಕೆರೆಯ ಹತ್ತಿರುವಿರುವ ವೃತ್ತಕ್ಕೆ ಮಹರ್ಷಿ ವಾಲ್ಮೀಕಿ ಅವರ ಹೆಸರನ್ನು ನೇಮಕ ಮಾಡಲಾಗಿದೆ. ಅದನ್ನು ಅಭಿವೃದ್ಧಿ ಪಡಿಸಬೇಕು. ಜಯಂತಿ ದಿನದಂದು ಮೆರವಣಿಗೆಗೆ ಕಲಾವಿದರ ತಂಡವನ್ನು ಒದಗಿಸಿಕೊಡಬೇಕು. ಜಿಲ್ಲೆಯಲ್ಲಿ ವಾಲ್ಮೀಕಿ ಭವನಗಳ ಕಾಮಗಾರಿಯನ್ನು ಚುರುಕುಗೊಳಬೇಕು” ಎಂದು ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಕೆ.ಆರ್, ಡಿವೈಎಸ್ ಪಿ ಮುರ್ತುಜಾ ಖಾದ್ರಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ಎ ಸಿ ಗಂಗಪ್ಪ, ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಪರಿಶಿಷ್ಟ ವರ್ಗ, ಪರಿಶಿಷ್ಟ ಜಾತಿ ಗಣ್ಯರು, ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.





