ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನಜಾನುವಾರುಗಳ ಜೀವಹಾನಿ ತಡೆಗೆ ಮುಂದಾಗಬೇಕು ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ತಪ್ಪಿಸಲು ಅಗತ್ಯದ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅವರು ಸೂಚಿಸಿದರು.
ಗದಗ ಜಿಲ್ಲಾಡಳಿತ ಭವನದಲ್ಲಿ ಪ್ರಸಕ್ತ ಸಾಲಿನ ಅತಿವೃಷ್ಟಿಯಿಂದಾದ ಹಾನಿಯ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.
“ಅತಿವೃಷ್ಟಿಯಿಂದ ಪ್ರವಾಹ ಉಂಟಾಗಬಹುದಾದ ಜಿಲ್ಲೆಯ 11 ಗ್ರಾಮಗಳು ಹಾಗೂ ನಗರ ಪ್ರದೇಶದ 14 ವಾರ್ಡ್ಗಳನ್ನು ಗುರುತಿಸಲಾಗಿದೆ. ಅಧಿಕ ಪ್ರಮಾಣದ ಮಳೆ ಸುರಿದಲ್ಲಿ ಕೂಡಲೇ ಅಧಿಕಾರಿಗಳು ಗುರುತಿಸಲಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣ ಕುರಿತಂತೆ ಕ್ರಮ ವಹಿಸಬೇಕು” ಎಂದರು.
“ಜಿಲ್ಲೆಯಲ್ಲಿ ಹರಿದಿರುವ ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹದಿಂದ ನರಗುಂದ ತಾಲೂಕಿನ 16 ಹಾಗೂ ರೋಣ ತಾಲೂಕಿನ 16 ಗ್ರಾಮಗಳು ಪ್ರವಾಹಕ್ಕೊಳಗಾಗುವ ಸಂಭವವಿದ್ದು, ಆ ಭಾಗದ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ತುಂಗಭದ್ರಾ ನದಿ ಪ್ರವಾಹದಿಂದ ಶಿರಹಟ್ಟಿ ತಾಲೂಕಿನ 10 ಹಾಗೂ ಮುಂಡರಗಿ ತಾಲೂಕಿನ 11 ಗ್ರಾಮಗಳು ಬಾಧಿತವಾಗುವ ಹಳ್ಳಿಗಳೆಂದು ಗುರುತಿಸಲಾಗಿದ್ದು, ಅಲ್ಲಿಯೂ ಕೂಡಾ ಅಧಿಕಾರಿಗಳು ನಿರಂತರ ನಿಗಾ ವಹಿಸುವ ಮೂಲಕ ಜೀವ ಹಾನಿ ತಡೆಗೆ ಮುಂದಾಗಬೇಕು” ಎಂದು ಸೂಚಿಸಿದರು.
“ಮಲಪ್ರಭಾ ಹಾಗೂ ಬೆಣ್ಣೆಹಳ್ಳ ಪ್ರವಾಹದಿಂದ ಹಾನಿಗೊಳಗಾಗಬಹುದಾದ ಜನವಸತಿ ಪ್ರದೇಶಗಳಲ್ಲಿ ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರ ತೆರೆಯಲು ಈಗಾಗಲೇ ನರಗುಂದ ತಾಲೂಕಿನ 12, ರೋಣ ತಾಲೂಕಿನ 16 ಸ್ಥಳಗಳನ್ನು ಗುರುತಿಸಲಾಗಿದೆ. ಅದೇ ತರಹ ಮುಂಡರಗಿ ತಾಲೂಕಿನ 8, ಶಿರಹಟ್ಟಿ ತಾಲೂಕಿನ 10 ಸ್ಥಳಗಳನ್ನು ಗುರುತಿಸಿದೆ. ಅದರಂತೆ 4 ಗೋಶಾಲೆ ತೆರೆಯಲು ಸ್ಥಳ ನಿಗದಿಪಡಿಸಿ ಇಟ್ಟುಕೊಳ್ಳಲಾಗಿದೆ” ಎಂದರು.
“ಅತಿವೃಷ್ಟಿಯಿಂದಾಗುವ ಮನೆ ಹಾಗೂ ಬೆಳೆ ಹಾನಿಗೆ ಸರ್ಕಾರದ ನಿರ್ದೇಶನದಂತೆ ಕ್ರಮ ವಹಿಸಿ ಪರಿಹಾರ ವಿತರಣೆ ಮಾಡಬೇಕು. ಅಗತ್ಯವಿದ್ದಲ್ಲಿ ಜಂಟಿ ಸಮೀಕ್ಷೆ ಮೂಲಕ ಹಾನಿಯ ಪ್ರಮಾಣ ಗುರುತಿಸಿ ಪರಿಹಾರಕ್ಕೆ ಮುಂದಾಗಬೇಕು” ಎಂದು ಸೂಚಿಸಿದರು.
“ದಿಢೀರ್ ಅತಿವೃಷ್ಟಿಯಿಂದ ಗ್ರಾಮಗಳು ಜಲಾವೃತವಾದಲ್ಲಿ ಕೂಡಲೇ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ರಕ್ಷಣಾ ಸಾಮಗ್ರಿಗಳೊಂದಿಗೆ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಮಾಡಬೇಕು. ಕಾರ್ಯಾಚರಣೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು” ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳಕ್ಕೆ ಖಂಡನೆ; ಎಸ್ಯುಸಿಐ ಪ್ರತಿಭಟನೆ
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭರತ್ ಎಸ್, ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೊಡ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಳ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಇದ್ದರು.





