ಗದಗ ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿ ವ್ಯಾಪಕವಾಗಿದ್ದಿ, ರೋಣ ತಾಲೂಕಿನಾದ್ಯಂತ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಭೀಮ್ ಆರ್ಮಿ (ಅಂಬೇಡ್ಕರ್ ವಾದ) ತಾಲೂಕು ಸಮಿತಿ ಸದಸ್ಯರು ರೋಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಪ್ರಧಾನ ಕಾರ್ಯದರ್ಶಿ ಹನಮಂತ ಚಲವಾದಿ, ರೋಣ ತಾಲೂಕಿನ ಹಲವು ಗ್ರಾಮಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ನಿಯಮ ಮೀರಿ ಲಾರಿಗಳಲ್ಲಿ ಹೆಚ್ಚಿನ ಮರಳು ತುಂಬಿಸಿ ಸಾಗಾಟ ಮಾಡುತ್ತಿದ್ದಾರೆ. ಈ ಕುರಿತು ಎಷ್ಟೇ ಮನವಿ ಮಾಡಿದರೂ ತಾಲೂಕು ಆಡಳಿತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ರೋಣ ನಗರದ ಮತ್ತು ನಗರವನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಅತಿಯಾದ ಮರಳು ಲಾರಿಗಳ ಓಡಾಟಕ್ಕೆ ಸಂಪೂರ್ಣ ಹಾಳಾಗಿವೆ. ತಗ್ಗು ಗುಂಡಿ ಬಿದ್ದಿರುವ ರಸ್ತೆಗಳಲ್ಲಿ ವಾಹನ ಅಪಘಾತಗಳ ಪ್ರಮಾಣ ಹೆಚ್ಚುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸದೆ ಸುಮ್ಮನಿದ್ದಾರೆ ಎಂದು ಆರೋಪಿಸಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸಾರಿಗೆ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ತಾಲೂಕು ಆಡಳಿತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನಾ ಸ್ಥಳಕ್ಕೆ ಬಂದ ರೋಣ ತಹಸೀಲ್ದಾರ್ ನಾಗರಾಜ.ಕೆ, ಮನವಿ ಸ್ವೀಕರಿಸಿ ಮುಖ್ಯಮಂತ್ರಿಗಳಿಗೆ ಮನವಿ ತಲುಪಿಸುವ ಮತ್ತು ತಮ್ಮ ವ್ಯಾಪ್ತಿಯಲ್ಲಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.
ಈ ವೇಳೆ ಭೀಮ್ ಆರ್ಮಿ ರೋಣ ತಾಲೂಕು ಘಟಕದ ಅಧ್ಯಕ್ಷ ಮುತ್ತು ನಂದಿ, ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚಲವಾದಿ, ಪುರಸಭೆ ಸದಸ್ಯ ಸಂತೋಷ ಕಡಿವಾಲ, ಭೀಮ್ ಆರ್ಮಿ ರೋಣ ತಾಲೂಕು ಘಟಕದ ಉಪಾಧ್ಯಕ್ಷ ಪುಂಡಲೀಕ ಮಾದರ, ಪದಾಧಿಕಾರಿಗಳಾದ ಸುರೇಶ ಹಲಗಿ, ಅಭಿಷೇಕ ಕೊಪ್ಪದ, ಚಂದ್ರು ಮಾದರ, ಮಹೇಶ ಮಾದರ, ರವಿ ಜೋಗಣ್ಣವರ, ಬಾಲರಾಜ ಹಲಗಿ ಇದ್ದರು.





