“ಶಿಕ್ಷಣ ಸಂಸ್ಥೆಗಳು ಶಾಲಾ ವಾಹನಗಳಲ್ಲಿ ಮಕ್ಕಳ ಸುರಕ್ಷತೆಗೆ ಪ್ರಥಮ ಆದ್ಯತೆ ಆಗಿರಲಿ” ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಸ್ಪಷ್ಟಪಡಿಸಿದರು.
ಗದಗ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಜಿಲ್ಲೆಯ ಖಾಸಗಿ ಅನುದಾನಿತ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಮುಖ್ಯೋಪಾದ್ಯಾಯರೊಂದಿಗೆ ನಡೆದ ಮಕ್ಕಳ ಸುರಕ್ಷತೆ ಕುರಿತ ಸಭೆಯಲ್ಲಿ, ವಿಶೇಷವಾಗಿ ಶಾಲಾ ಮಕ್ಕಳ ಸುರಕ್ಷಿತ ಸಾರಿಗೆ ವ್ಯವಸ್ಥೆ ಕುರಿತು ವಿಸ್ತೃತ ಸಭೆ ನಡೆಯಿತು.
ಸಭೆಯನ್ನುದ್ದೇಶಿಸಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಮಾತನಾಡಿ, “ಶಾಲಾ ವಾಹನಗಳು ಹಾಗೂ ಶಾಲಾ ವಾತಾವರಣ ಸರ್ಕಾರದ ನಿಯಮಾವಳಿಗಳಂತೆ ಸಂಪೂರ್ಣವಾಗಿ ಸುರಕ್ಷಿತವಾಗಿರಬೇಕು” ಎಂದು ಸೂಚಿಸಿದರು.
“ಪ್ರತಿಯೊಂದು ಶಾಲಾ ಬಸ್ಗಳಲ್ಲಿ ಅಗತ್ಯ ದಾಖಲೆಗಳು, ವಾಹನದ ತಾಂತ್ರಿಕ ಸ್ಥಿತಿ, ನಿಯಮಿತ ಫಿಟ್ನೆಸ್ ಪ್ರಮಾಣಪತ್ರ, ವೇಗ ನಿಯಂತ್ರಕ ಸಾಧನ, ಅಗ್ನಿಶಾಮಕ ಉಪಕರಣಗಳು,ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮತ್ತು ತುರ್ತು ನಿರ್ಗಮನ ವ್ಯವಸ್ಥೆ ಕಡ್ಡಾಯವಾಗಿರಬೇಕು” ಎಂದು ಆದೇಶಿಸಿದರು.
“ಶಾಲಾ ವಾಹನ ಚಾಲಕರಿಗೆ ಸೂಕ್ತ ಚಾಲನಾ ಪರವಾನಗಿ, ಅನುಭವ ಹಾಗೂ ಮಕ್ಕಳೊಂದಿಗೆ ಸ್ನೇಹಪರ ವರ್ತನೆ ಅಗತ್ಯವಿದೆ. ಶಾಲಾ ಬಸ್ಗಳಲ್ಲಿ ನಿರೀಕ್ಷಕ (ಅಟೆಂಡರ್) ನೇಮಕ ಕಡ್ಡಾಯವಾಗಿದ್ದು, ಮಕ್ಕಳು ಏರುವ-ಇಳಿಯುವ ಸಂದರ್ಭದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕು” ಎಂದು ಸೂಚನೆ ನೀಡಿದರು.
“ಯಾವುದೇ ರೀತಿಯ ಅತಿವೇಗ, ಮದ್ಯಪಾನ ಮಾಡಿ ಚಾಲನೆ ಅಥವಾ ನಿರ್ಲಕ್ಷ್ಯಕ್ಕೆ ಆಸ್ಪದವಿಲ್ಲ” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಪುನರುಚ್ಚರಿಸಿದರು.
ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, “ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲಾ ವಾಹನಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಜಿಪಿಎಸ್ ವ್ಯವಸ್ಥೆ ಹಾಗೂ ಪೋಷಕರಿಗೆ ಮಾಹಿತಿ ನೀಡುವ ತಂತ್ರಜ್ಞಾನ ಬಳಕೆಗೆ ಒತ್ತು ನೀಡಬೇಕು. ಶಾಲಾ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಶಾಲಾ ಆಡಳಿತದ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.
“ಆಟೋಗಳ ಮೂಲಕ ಮಕ್ಕಳನ್ನು ಶಾಲೆಗಳಿಗೆ ಕರೆದೊಯ್ಯುವ ಸಂದರ್ಭದಲ್ಲಿ ಅಟೋ ಚಾಲಕರು ನಿಗದಿತ ಸಂಖ್ಯೆಗಿಂತ ಅಧಿಕ ಮಕ್ಕಳನ್ನು ಕರೆದುಕೊಂಡು ಹೋಗಬಾರದು. ಸುರಕ್ಷತೆಗೆ ಕ್ರಮವಹಿಸಿ ನಿಧಾನವಾಗಿ ಮಕ್ಕಳನ್ನು ಶಾಲೆಗಳಿಗೆ ತಲುಪಿಸುವ ಹಾಗೂ ಮನೆಗೆ ಕರೆದೊಯ್ಯುವ ಜವಾಬ್ದಾರಿ ವಾಹನ ಚಾಲಕರದ್ದಾಗಿರುತ್ತದೆ” ಎಂದು ರೋಹನ್ ಜಗದೀಶ್ ತಿಳಿಸಿದರು.
ಕನಕದಾಸ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ರವಿ ದಂಡಿನ ಮಾತನಾಡಿ, “ಶಿಕ್ಷಣ ಸಂಸ್ಥೆಗಳಲ್ಲಿನ ಶಾಲಾ ವಾಹನಗಳ ಸಂಪೂರ್ಣ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕಿದೆ. ಪ್ರತಿ ಮಗುವಿನ ಜೀವವೂ ಅತ್ಯಮೂಲ್ಯ. ನಿರ್ಲಕ್ಷದಿಂದ ವಾಹನ ಚಲಾವಣೆ ಹಾಗೂ ವರ್ತನೆ ಸಹಿಸಲಾಗದು. ಎಲ್ಲ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ನಮ್ಮ ಸಂಸ್ಥೆಯಲ್ಲಿನ ಮಕ್ಕಳ ಆರೋಗ್ಯ ಹಾಗೂ ಸೂಕ್ತ ಸಾರಿಗೆ ಸುರಕ್ಷತೆಗೆ ಆದ್ಯತೆ ವಹಿಸುವ ಮೂಲಕ ನಾಡಿನ ಮುಂದಿನ ಪ್ರಜೆಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸೋಣ” ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶಾಲ ಅವರು ಮಾತನಾಡಿದರು.
ಸಭೆಯಲ್ಲಿ ಶ್ರೀ ಎಂ ಕೆ ಲಮಾಣಿ ಶ್ರೀ ಎ ಎಸ್ ಪಾಟೀಲ ಹಾಗೂ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಿ ಆರ್ ಪಿ ಗಳು,ಪ್ರೊ.ಕೆ.ಎಚ್. ಬೇಲೂರ, ಶ್ರೀ ಎಸ್ ಪಿ ಬಳಿಗಾರ.ಶಿಕ್ಷಣ ಇಲಾಖೆ, ಸಾರಿಗೆ, ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.





