“ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ಎಂಬ ಗ್ರಾಮದಲ್ಲಿ ಜನಿಸಿದರು” ಎಂದು ರಾಘವೇಂದ್ರ ಕೊಪ್ಪಳ ಹೇಳಿದರು.
ಗದಗ ಬೆಟಗೇರಿಯ ಟರ್ನಲ್ ಪೇಟೆಯ ಶ್ರೀ ದೇವರ ದಾಸಿಮಯ್ಯ ವೇದಿಕೆಯಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇಂದು ಸೋಮವಾರ ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
“ಮುದನೂರು ಗ್ರಾಮದಲ್ಲಿ ಹಲವಾರು ದೇವಾಲಯಗಳಿದ್ದು, ಅದರಲ್ಲಿ ರಾಮಲಿಂಗೇಶ್ವರ ದೇವಸ್ಥಾನ ದೇವರ ದಾಸಿಮಯ್ಯನವರ ಅಚ್ಚುಮೆಚ್ಚಿನ ಸ್ಥಳವಾಗಿತ್ತು. ಇವರು ರಾಮಲಿಂಗೇಶ್ವರನ ಆರಾಧಕರಾಗಿದ್ದರು. ದೇವರ ದಾಸಿಮಯ್ಯನವರ ಅಂಕಿನಾಮ ರಾಮನಾಥ ಆಗಿದೆ. ದಾಸಿಮಯ್ಯನ ಭಕ್ತಿಯಂತೆ ನಮ್ಮ ಭಕ್ತಿ ಇರಬೇಕು ಎಂದು ಜಗಜ್ಯೋತಿ ಬಸವಣ್ಣನವರು ತಮ್ಮ ವಚನಗಳಲ್ಲಿ ಹೇಳಿದ್ದಾರೆ” ಎಂದರು.
“ದೇವರ ದಾಸಿಮಯ್ಯನವರು ಮುದನೂರಿನ ಸಮೀಪದಲ್ಲಿರುವ ಶೈವ ಕೇಂದ್ರವಾಗಿದ್ದ ಶ್ರೀಶೈಲದಲ್ಲಿದ್ದ ಶ್ರೀ ಚಂದ್ರಗುಂಡ ಶಿವಾಚಾರ್ಯ ಗುರುಕುಲದಲ್ಲಿ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರವನ್ನು ಪಡೆದರು. ದೇವರ ದಾಸಿಮಯ್ಯನವರು ಯಾವುದನ್ನೂ ಪ್ರಶ್ನಿಸದೇ ಸ್ವೀಕರಿಸುವ ಮನೋಭಾವದವರಲ್ಲ. ಪ್ರಖರ ವೈಚಾರಿಕ ನೆಲೆಗಟ್ಟಿನ ಅಸದೃಶ ವ್ಯಕ್ತಿತ್ವವನ್ನು ಹೊಂದಿದ್ದರು” ಎಂದು ಹೇಳಿದರು.
“ನೇಕಾರಿಕೆ ಇವರ ಕುಲ ಕಸುಬಾಗಿತ್ತು. ಇವರ ಧರ್ಮಪತ್ನಿ ಶರಣೆ ದುಗ್ಗಳೇಯವರು ಸಹ ಶಿವಭಕ್ತಿ ಹಾಗೂ ಕುಲಕಸುಬನ್ನು ಚಾಚೂ ತಪ್ಪದೇ ಪಾಲಿಸುತ್ತಿದ್ದರು. ದೇವರ ದಾಸಿಮಯ್ಯನವರು ತಮ್ಮ ಅರ್ಥಪೂರ್ಣವಾದ ವಚನಗಳ ಮೂಲಕ ಸಮಾಜ ಸುಧಾರಣೆ ಮಾಡಿದವರು. ಇವರ ಕುರಿತು ಇನ್ನೂ ಹೆಚ್ಚಿನ ಅಧ್ಯಯನ ನಡೆಯಬೇಕಾಗಿದೆ” ಎಂದು ದೇವರ ದಾಸಿಮಯ್ಯನವರ ಸಾಧನೆ ಕುರಿತು ವಿವರಿಸಿದರು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಉದ್ಘಾಟಿಸಿ “ದೇವರ ದಾಸಿಮಯ್ಯನವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಶ್ರಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
“ದೇವರ ದಾಸಿಮಯ್ಯನವರು 10 ನೇ ಶತಮಾತನದಲ್ಲಿನ ವಚನಕಾರರು. ಇವರು ನೇಕಾರ ಕಾಯಕದ ಮೂಲಕ ಜೀವನ ಸಾಗಿಸುತ್ತಿದ್ದರು. ತಮ್ಮ ಅರ್ಥಪೂರ್ಣ ವಚನಗಳ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ತಮ್ಮ ವಚನಗಳಲ್ಲಿ ಭಕ್ತಿ ಹಾಗೂ ಕಾಯಕದ ಮಹತ್ವವನ್ನು ಸಾರಿದವರು. ದೇವರ ದಾಸಿಮಯ್ಯನವರ ತತ್ವಾದರ್ಶಗಳನ್ನು ಹಾಗೂ ಅವರ ವಚನಗಳ ಸಂದೇಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ ಅವರು ಮಾತನಾಡಿ, “ಇಂದಿನ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡುವ ಮೂಲಕ ಸಮಾಜದಲ್ಲಿ ಉನ್ನತ ಹುದ್ದೆ ಅಲಂಕರಿಸಬೇಕು. ಸರ್ಕಾರದಿಂದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಸಮಾಜದವರು ಪಡೆದುಕೊಳ್ಳಬೇಕು” ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರನ್ನು ಸನ್ಮಾನಿಸಲಾಯಿತು. ದೇವರ ದಾಸಿಮಯ್ಯ ಜಯಂತಿ ನಿಮಿತ್ತ ಏರ್ಪಡಿಸಲಾಗಿದ್ದ ವಚನಸ್ಪರ್ಧೆ ಹಾಗೂ ನಿಬಂಧ ಸ್ಪರ್ಧೆಯಲ್ಲಿನ ವಿಜೇತರಿಗೆ ಬಹುಮಾನವ ವಿತರಿಸಲಾಯಿತು.
ಅನಿಲ ಗಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೊಡ್ಡಪ್ಪ ಮೂಲಿಮನಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಗದಗ ಬೆಟಗೇರಿಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ನಗರಸಭೆ ಸದಸ್ಯರಾದ ರಾಘವೇಂದ್ರ ಯಳವತ್ತಿ, ಲಕ್ಷಿö್ಮÃ ಖಾಕಿ, ಪೂರ್ಣಿಮಾ ಭರದ್ವಾಡ್, ಗದಗ ಬೆಟಗೇರಿ ನಗರಸಭೆಯ ಪೌರಾಯುಕ್ತ ರಾಜಾರಾಮ ಪವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ, ದಶರಥರಾಜ ಕೊಳ್ಳಿ, ರಮೇಶ ಗಡ್ಡಿ, ಅಶೋಕ ಹೊನ್ನಳ್ಳಿ, ರಮೇಶ ಹತ್ತಿಕಾಳ, ಶ್ರೀನಿವಾಸ ಹುಬ್ಬಳ್ಳಿ, ಮಲ್ಲಿಕಾರ್ಜುನ ಐಲಿ, ಆರ್.ಕೆ.ಹುಬ್ಬಳ್ಳಿ, ಶಕುಂತಲಾ ಅಕ್ಕಿ ಸೇರಿದಂತೆ ಸಮಾಜದ ಮುಖಂಡರು, ಹಿರಿಯರು, ಗಣ್ಯರು, ಪದಾಧಿಕಾರಿಗಳು ಹಾಜರಿದ್ದರು.





