ಚಾಮರಾಜನಗರ ಜಿಲ್ಲೆಯಲ್ಲಿ 2025–26ನೇ ಶೈಕ್ಷಣಿಕ ಸಾಲಿಗೆ ಪ್ರೌಢಶಾಲೆಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸಿ ಶೇ.100ರಷ್ಟು ಫಲಿತಾಂಶ ಸಾಧಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಂಪನ್ಮೂಲ ಸಮನ್ವಯಾಧಿಕಾರಿಗಳು ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಮತ್ತು ವಸತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ ನಡೆಸಲಾಯಿತು.
ಸಭೆಯಲ್ಲಿ “ಗುರಿ ನೂರು– 2026” ಆಶಯದೊಂದಿಗೆ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಬೇಕೆಂದು ಸೂಚಿಸಲಾಯಿತು. ಶಾಲೆಗೆ ಗೈರಾಗುತ್ತಿರುವ ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ, ಪೋಷಕರ ಮನೆಗೆ ಭೇಟಿ ನೀಡಿ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಜವಾಬ್ದಾರಿ ಎಲ್ಲರಿಗೂ ಇರುವುದಾಗಿ ತಿಳಿಸಿದರು.
ಮೊದಲನೇ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ (SA-1) ತಾಲ್ಲೂಕು ಹಾಗೂ ವಿಷಯವಾರು ಫಲಿತಾಂಶಗಳನ್ನು ವಿಶ್ಲೇಷಣೆ ಮಾಡಲಾಗಿದ್ದು, ಕಡಿಮೆ ಸಾಧನೆ ಮಾಡಿದ ತಾಲ್ಲೂಕುಗಳಲ್ಲಿ ಶೇಕಡ ನೂರು ಫಲಿತಾಂಶಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಲಾಯಿತು.

ಪೂರ್ವಸಿದ್ಧತಾ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಪ್ರತೀ ತಾಲ್ಲೂಕಿನ ಒಬ್ಬ ವಿದ್ಯಾರ್ಥಿಯನ್ನು 2026ರ ಜನವರಿ 26ರ ಗಣರಾಜ್ಯೋತ್ಸವದಂದು ಜಿಲ್ಲಾ ಮಟ್ಟದಲ್ಲಿ ಸನ್ಮಾನಿಸಲು ನಿರ್ಧಾರ ಕೈಗೊಳ್ಳಲಾಯಿತು. ಕಡಿಮೆ ಫಲಿತಾಂಶ ಸಾಧಿಸಿದ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಉಪನಿರ್ದೇಶಕರಿಗೆ ಸೂಚನೆ ನೀಡಲಾಯಿತು.
ಎಸ್ಎಸ್ಎಲ್ಸಿ ಶೇ.100 ಗುರಿ ಸಾಧನೆಗಾಗಿ ಶಾಲಾ ಮಟ್ಟದಲ್ಲಿ ಅನುಷ್ಠಾನಗೊಳಿಸಬೇಕಾದ 20 ಅಂಶಗಳ ಕಾರ್ಯಯೋಜನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಮಡಿಕೇರಿ | ಯುವ ಬರಹಗಾರರಿಗೆ ಸಾಹಿತ್ಯ ರಚನೆಯತ್ತ ಹಿರಿಯರು ಪ್ರೇರಣೆ ನೀಡುವಂತಾಗಬೇಕು: ಕವಿ ಕಾಜೂರು ಸತೀಶ್
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೋನಾ ರೋತ್ ಸೇರಿದಂತೆ ಹಲವರು ಇದ್ದರು.





